HomeGadag Newsಅರ್ಧಕ್ಕೆ ನಿಂತ ಸೇತುವೆ ಕಾಮಗಾರಿ..!

ಅರ್ಧಕ್ಕೆ ನಿಂತ ಸೇತುವೆ ಕಾಮಗಾರಿ..!

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಶಿಗ್ಲಿ–ದೊಡ್ಡೂರ ರಸ್ತೆಯ ಮಧ್ಯೆ ನಿರ್ಮಾಣವಾಗುತ್ತಿರುವ ಕಿರು ಸೇತುವೆ ಕಾಮಗಾರಿ ವಿಳಂಬವಾಗಿರುವ ಪರಿಣಾಮ ಸಾರ್ವಜನಿಕರು ಜೀವಭಯದಲ್ಲೇ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಮಗಾರಿಗಾಗಿ ನಿರ್ಮಿಸಿರುವ ತಾತ್ಕಾಲಿಕ ಕಚ್ಚಾ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಪ್ರತಿದಿನ ವಾಹನ ಸವಾರರು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ.

ಲಕ್ಷ್ಮೇಶ್ವರದಿಂದ ಶಿಗ್ಲಿ, ಸೂರಣಗಿ, ಬಾಳೆಹೊಸೂರು ಮಾರ್ಗವಾಗಿ ಅನ್ಯ ಜಿಲ್ಲೆಗಳು ಹಾಗೂ ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಈ ಪಿಡಬ್ಲ್ಯುಡಿ ರಸ್ತೆ ಪ್ರಮುಖ ಸಂಚಾರ ಮಾರ್ಗವಾಗಿದೆ. ಲಕ್ಷ್ಮೇಶ್ವರ–ದೊಡ್ಡೂರ ರಸ್ತೆ ಹಾಳಾಗಿರುವ ಕಾರಣ ಹೆಚ್ಚಿನ ವಾಹನಗಳು ಇದೇ ಮಾರ್ಗವನ್ನು ಅವಲಂಬಿಸಿವೆ. ಪ್ರತಿನಿತ್ಯ ನೂರಾರು ವಿದ್ಯಾರ್ಥಿಗಳು, ಸಾರ್ವಜನಿಕರು ಹಾಗೂ ಸರಕು ಸಾಗಣೆ ವಾಹನಗಳು ಇದೇ ರಸ್ತೆಯಲ್ಲಿ ಸಂಚರಿಸುತ್ತಿವೆ.

ಸೇತುವೆ ಕಾಮಗಾರಿಗಾಗಿ ನಿರ್ಮಿಸಿರುವ ಪರ್ಯಾಯ ಕಚ್ಚಾ ರಸ್ತೆಯಲ್ಲಿ ಮರಳು, ಖಡಿ, ಎಂ-ಸ್ಯಾಂಡ್ ಮತ್ತು ಮಣ್ಣನ್ನು ಹೊತ್ತ ಓವರ್‌ಲೋಡ್ ಲಾರಿಗಳ ನಿರಂತರ ಓಡಾಟದಿಂದ ರಸ್ತೆ ಸಂಪೂರ್ಣ ಹಾಳಾಗಿದೆ. ಪರಿಣಾಮ ವಾಹನಗಳು ಗುಂಡಿ-ಗುಂಡಿಗಳಲ್ಲಿ ಎದ್ದುಬಿದ್ದು ಸಾಗುತ್ತಿವೆ. ಮಳೆ ಬಂದರೆ ರಸ್ತೆ ಕೆಸರುಮಯವಾಗಿ ವಾಹನಗಳು ಸಿಲುಕಿಕೊಳ್ಳುತ್ತಿದ್ದು, ಕೆಲವೊಮ್ಮೆ ಗಂಟೆಗಟ್ಟಲೆ ಸಂಚಾರ ಸ್ಥಗಿತಗೊಳ್ಳುವ ಪರಿಸ್ಥಿತಿ ಎದುರಾಗುತ್ತಿದೆ.

ಇತ್ತೀಚೆಗೆ ಇದೇ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಕಂದಕಕ್ಕೆ ಜಾರಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 30ಕ್ಕೂ ಹೆಚ್ಚು ಪ್ರಯಾಣಿಕರು ಹಾಗೂ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದರು. ಇಷ್ಟೊಂದು ಗಂಭೀರ ಅಪಘಾತ ನಡೆದಿದ್ದರೂ ಗುತ್ತಿಗೆದಾರರು, ಪಿಡಬ್ಲ್ಯುಡಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಎಚ್ಚೆತ್ತುಕೊಂಡಿಲ್ಲ ಎಂಬ ಆರೋಪ ಸಾರ್ವಜನಿಕರಿಂದ ಕೇಳಿಬರುತ್ತಿದೆ.

ಸುಮಾರು ₹25 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಿರು ಸೇತುವೆ ಕಾಮಗಾರಿಗೆ ಮಾರ್ಚ್ ತಿಂಗಳಲ್ಲೇ ಕಾರ್ಯಾದೇಶ ನೀಡಲಾಗಿತ್ತು. ಇಲಾಖೆಯು ಆರು ತಿಂಗಳ ಕಾಲಾವಕಾಶ ನೀಡಿರುವುದರಿಂದ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದೆ ಎಂಬ ಟೀಕೆ ವ್ಯಕ್ತವಾಗಿದೆ. ಸೇತುವೆ ನಿರ್ಮಾಣದ ಜೊತೆಗೆ ಪರ್ಯಾಯ ರಸ್ತೆಯನ್ನೂ ಸುಗಮವಾಗಿ ನಿರ್ವಹಿಸಬೇಕಿದ್ದರೂ ನಿರ್ಲಕ್ಷ್ಯ ವಹಿಸಿರುವುದರಿಂದ ಸಾರ್ವಜನಿಕರ ಪರದಾಟ ಹೆಚ್ಚಾಗಿದೆ.

ಸೂರಣಗಿ ಗ್ರಾಮದ ಮಾಜಿ ತಾಪಂ ಸದಸ್ಯ ಕೋಟೆಪ್ಪ ವರ್ದಿ ಹಾಗೂ ಬಾಳೆಹೊಸೂರಿನ ಫಕ್ಕಿರೇಶ ಮ್ಯಾಟಣ್ಣವರ ಮಾತನಾಡಿ, ಮತ್ತೊಂದು ಅಪಘಾತ ಸಂಭವಿಸುವ ಮೊದಲು ಸೇತುವೆ ಕಾಮಗಾರಿ ಪೂರ್ಣಗೊಳಿಸಿ ಸಂಚಾರಕ್ಕೆ ಮುಕ್ತಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಪಿಡಬ್ಲ್ಯುಡಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಶಾಂತ ಹೊಸಬಾವಿ, “ಕಿರು ಸೇತುವೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಸೇತುವೆ ಮೇಲಿನ ರಸ್ತೆ ನಿರ್ಮಾಣ ಮಾತ್ರ ಬಾಕಿಯಿದ್ದು, ಗುತ್ತಿಗೆದಾರರಿಗೆ ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಿ ಸಂಚಾರಕ್ಕೆ ಮುಕ್ತಗೊಳಿಸುವಂತೆ ಸೂಚಿಸಲಾಗುವುದು” ಎಂದು ತಿಳಿಸಿದ್ದಾರೆ.

“ಪರ್ಯಾಯ ಕಚ್ಚಾ ರಸ್ತೆ ಸಂಪೂರ್ಣ ಹಾಳಾಗಿದ್ದು, ಶಾಲಾ ಮಕ್ಕಳು, ರೈತರು ಹಾಗೂ ಸಾರ್ವಜನಿಕರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಅಧಿಕಾರಿಗಳು ಮತ್ತು ಗುತ್ತಿಗೆದಾರರು ಕೂಡಲೇ ಕಾಮಗಾರಿ ಪೂರ್ಣಗೊಳಿಸಬೇಕು.”

– ಫಕ್ಕಿರೇಶ ಮ್ಯಾಟಣ್ಣವರ, ಬಾಳೆಹೊಸೂರು

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img