ಬೆಂಗಳೂರು ಗ್ರಾಮಾಂತರ: ದೊಡ್ಡಬಳ್ಳಾಪುರ–ನೆಲಮಂಗಲ ರಸ್ತೆ ಅಪಘಾತಗಳ ತಾಣವಾಗುತ್ತಿದ್ದು, ಒಂದೇ ವಾರದಲ್ಲಿ ಮೂರನೇ ಅಪಘಾತ ಸಂಭವಿಸಿದೆ.
ದೊಡ್ಡಬಳ್ಳಾಪುರ ತಾಲೂಕಿನ ಚಿಕ್ಕಮದುರೆಯಲ್ಲಿ ಕಂಟೈನರ್ ಲಾರಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ಅಂಗಡಿಗಳಿಗೆ ನುಗ್ಗಿದ ಘಟನೆ ನಡೆದಿದೆ.
ಶನಿಮಹಾತ್ಮ ದೇವಾಲಯದ ಹಿಂಭಾಗದಲ್ಲಿ ಈ ಘಟನೆ ನಡೆದಿದ್ದು, ಕಂಟೈನರ್ ಲಾರಿ ಮೊದಲು ಮುಂದೆ ಹೋಗುತ್ತಿದ್ದ ಟಾಟಾ ಏಸ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಬಳಿಕ ಚಾಲಕನ ನಿಯಂತ್ರಣ ತಪ್ಪಿದ ಲಾರಿ ನೇರವಾಗಿ ರಸ್ತೆ ಬದಿಯ ಮೂರು ಅಂಗಡಿಗಳಿಗೆ ನುಗ್ಗಿದೆ.
ಡಿಕ್ಕಿಯ ರಭಸಕ್ಕೆ ಮೂರು ಅಂಗಡಿಗಳು ಹಾನಿಗೊಳಗಾಗಿವೆ. ಆದರೆ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅಂಗಡಿಗಳನ್ನು ಮುಚ್ಚಿದ್ದರಿಂದ ದೊಡ್ಡ ದುರಂತ ತಪ್ಪಿದೆ.
ಸ್ಥಳೀಯರ ಪ್ರಕಾರ, ಈ ರಸ್ತೆಯಲ್ಲಿ ಪದೇ ಪದೇ ಅಪಘಾತಗಳು ನಡೆಯುತ್ತಿವೆ. ವಾಹನಗಳ ಅತಿವೇಗವೇ ಅಪಘಾತಗಳಿಗೆ ಪ್ರಮುಖ ಕಾರಣವಾಗಿದೆ. ಅಪಘಾತ ತಡೆಯಲು ರಸ್ತೆಯಲ್ಲಿ ಹಂಪ್ಗಳನ್ನು ಅಳವಡಿಸುವಂತೆ ಸಾರ್ವಜನಿಕರು ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.



