ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಮನೆಯ ಕಸವನ್ನು ಒಟ್ಟಾಗಿ ವಿಲೇವಾರಿ ಮಾಡುವ ಬದಲು ಹಸಿ, ಒಣ, ವಿಷತ್ಯಾಜ್ಯ ಹಾಗೂ ವಿಶೇಷ ತ್ಯಾಜ್ಯ ಎಂದು ಪ್ರತ್ಯೇಕವಾಗಿ ವಿಂಗಡಿಸಿ ನೀಡುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಈ ಕುರಿತು ವಿದ್ಯಾರ್ಥಿಗಳು ತಮ್ಮ ಮನೆಗಳಲ್ಲಿ ಪಾಲಕರಿಗೆ ಜಾಗೃತಿ ಮೂಡಿಸಬೇಕು ಎಂದು ಕಮ್ಯೂನಿಟಿ ಮೊಬಿಲೈಜರ್ ಪೂರ್ಣಿಮಾ ಹೊಸಮನಿ ಹೇಳಿದರು.
ಪಟ್ಟಣದ ಡಾ. ಕೆ.ಬಿ. ಧನ್ನೂರ ಪಿಎಸ್ಎಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪಟ್ಟಣ ಪಂಚಾಯಿತಿ ವತಿಯಿಂದ ಹಮ್ಮಿಕೊಂಡಿದ್ದ ಕಸ ವಿಂಗಡಣೆ ಜಾಗೃತಿ ಅಭಿಯಾನದಲ್ಲಿ ಅವರು ಮಾತನಾಡಿದರು.
ಫೆಬ್ರವರಿ 1, 2026ರಿಂದ ಘನತ್ಯಾಜ್ಯ ನಿರ್ವಹಣೆಯ ನಿಯಮಗಳಲ್ಲಿ ಮಹತ್ವದ ಬದಲಾವಣೆ ಜಾರಿಯಾಗಿದ್ದು, ಪ್ರತಿಯೊಬ್ಬರೂ ಅದನ್ನು ಪಾಲಿಸಬೇಕಾಗಿದೆ. ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಹೊಸ ನಿಯಮಗಳ ಕುರಿತು ಜನರಲ್ಲಿ ಅರಿವು ಮೂಡಿಸುವ ಅಗತ್ಯವಿದೆ ಎಂದು ತಿಳಿಸಿದರು.
ರೇಣುಕಾ ಕಳಕಣ್ಣವರ ಮಾತನಾಡಿ, ಈ ಹಿಂದೆ ಹಸಿ ಮತ್ತು ಒಣ ಕಸ ಎಂದು ಎರಡು ವಿಭಾಗಗಳಲ್ಲಿ ಮಾತ್ರ ವಿಂಗಡಿಸಲಾಗುತ್ತಿತ್ತು. ಆದರೆ ಈಗ ಹಸಿ ಕಸ, ಒಣ ಕಸ, ವಿಷತ್ಯಾಜ್ಯ ಕಸ ಹಾಗೂ ವಿಶೇಷ ತ್ಯಾಜ್ಯ ಕಸ ಎಂದು ನಾಲ್ಕು ವಿಭಾಗಗಳಲ್ಲಿ ವಿಂಗಡಿಸಿ ಮನೆಯ ಬಾಗಿಲಿಗೆ ಬರುವ ಕಸದ ವಾಹನಕ್ಕೆ ನೀಡಬೇಕು. ಇದರಿಂದ ತ್ಯಾಜ್ಯ ನಿರ್ವಹಣೆ ಸುಲಭವಾಗುವುದರ ಜೊತೆಗೆ ಪರಿಸರವೂ ಸ್ವಚ್ಛವಾಗಿರುತ್ತದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲೆಯ ಮುಖ್ಯ ಶಿಕ್ಷಕ ಮಂಜುನಾಥ ಗ್ರಾಮಪುರೋಹಿತ, ವಿದ್ಯಾರ್ಥಿಗಳು ಈ ಮಾಹಿತಿಯನ್ನು ತಮ್ಮ ಮನೆ ಹಾಗೂ ನೆರೆಹೊರೆಯವರಿಗೆ ತಲುಪಿಸಿ ಸ್ವಚ್ಛತಾ ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದರು.
ಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕರು ಸುರೇಶ ಮಲ್ಲನಗೌಡ್ರ, ಶಾಲಾ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.



