ವಿಜಯಸಾಕ್ಷಿ ಸುದ್ದಿ, ಗದಗ: ಜುಲೈ 19ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ರಾಷ್ಟ್ರೀಯ ಭೋವಿ ಜನೋತ್ಸವ ಭೋವಿ ಸಮಾಜದ ಐಕ್ಯತೆ, ಹಕ್ಕುಗಳು ಮತ್ತು ಭವಿಷ್ಯದ ಬೇಡಿಕೆಗಳನ್ನು ಪ್ರತಿಧ್ವನಿಸುವ ಮಹತ್ವದ ವೇದಿಕೆಯಾಗಲಿದೆ ಎಂದು ಭೋವಿ ಸಮಾಜದ ರಾಜ್ಯ ಕಾರ್ಯಾಧ್ಯಕ್ಷ ರವಿ ಪೂಜಾರ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾಜದ ಗುರುಗಳ ಜನ್ಮೋತ್ಸವದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು. ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಿರಾರು ಸಮಾಜದ ಬಾಂಧವರು, ಜನಪ್ರತಿನಿಧಿಗಳು ಹಾಗೂ ಮುಖಂಡರು ಭಾಗವಹಿಸಲಿದ್ದು, ವಧು–ವರರ ಸಮಾವೇಶ ಮತ್ತು ಬೃಹತ್ ರಕ್ತದಾನ ಶಿಬಿರ ಕೂಡ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಉದ್ಘಾಟಿಸಲಿದ್ದು, ವಿವಿಧ ರಾಜ್ಯಗಳ ಭೋವಿ ಸಮಾಜದ ಮುಖಂಡರು ಹಾಗೂ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.
ಭೋವಿ ಸಮಾಜವನ್ನು ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಮತ್ತಷ್ಟು ಸದೃಢಗೊಳಿಸುವ ಉದ್ದೇಶದಿಂದ ಜನೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ರವಿ ಗುಂಜಿಕರ್ ತಿಳಿಸಿದರು.
ಕರ್ನಾಟಕ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳ್ಳಾರಿ ಮಾತನಾಡಿ, ಜಿಲ್ಲೆಯ ಪ್ರತಿಯೊಂದು ಹಳ್ಳಿಯಿಂದ ಚಿತ್ರದುರ್ಗಕ್ಕೆ ತೆರಳಲು ವಾಹನಗಳ ವ್ಯವಸ್ಥೆ ಮಾಡಲಾಗಿದ್ದು, 10 ಸಾವಿರಕ್ಕೂ ಅಧಿಕ ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಜಯಕ್ಕ ಕಳ್ಳಿ, ರಾಘವೇಂದ್ರ ಧಾರವಾಡ, ಆಂಜನೇಯ ಕಟಗಿ, ಹುಚ್ಚಪ್ಪ ಸಂದಕದ, ಸೋಮು ಗುಡಿ, ಪರಶುರಾಮ ಕರಡಿಕೊಳ್ಳ, ಪವನ್ ಪೂಜಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
“ಒಳಮೀಸಲಾತಿಯಲ್ಲಿ ಭೋವಿ ಸಮಾಜಕ್ಕೆ ನ್ಯಾಯ ಸಿಗಬೇಕು. ಸಚಿವ ಸಂಪುಟದಲ್ಲಿ ಸಮಾಜಕ್ಕೆ ಪ್ರಾತಿನಿಧ್ಯ, ಕಲ್ಲು ಗಣಿಗಾರಿಕೆ ಕ್ಷೇತ್ರದಲ್ಲಿ ಮೀಸಲಾತಿ, ವಿಧಾನ ಪರಿಷತ್ನಲ್ಲಿ ಅವಕಾಶ ಹಾಗೂ ವಿಶ್ವವಿದ್ಯಾಲಯಗಳ ಕುಲಪತಿ ನೇಮಕಾತಿಯಲ್ಲಿ ಸಮಾಜಕ್ಕೆ ಆದ್ಯತೆ ನೀಡಬೇಕು.”
— ರವಿ ಪೂಜಾರ, ರಾಜ್ಯ ಕಾರ್ಯಾಧ್ಯಕ್ಷ, ಭೋವಿ ಸಮಾಜ



