HomeGadag Newsಗದಗ ಜಿಲ್ಲೆಯನ್ನು ತಕ್ಷಣ ಬರಪೀಡಿತ ಪ್ರದೇಶವೆಂದು ಘೋಷಿಸಿ: ಬಿಜೆಪಿ ರೈತ ಮೋರ್ಚಾ ಆಗ್ರಹ

ಗದಗ ಜಿಲ್ಲೆಯನ್ನು ತಕ್ಷಣ ಬರಪೀಡಿತ ಪ್ರದೇಶವೆಂದು ಘೋಷಿಸಿ: ಬಿಜೆಪಿ ರೈತ ಮೋರ್ಚಾ ಆಗ್ರಹ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ: ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಗದಗ ಜಿಲ್ಲೆಯ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯನ್ನು ತಕ್ಷಣವೇ ಬರಪೀಡಿತ ಜಿಲ್ಲೆ ಎಂದು ಘೋಷಿಸಿ ರೈತರ ನೆರವಿಗೆ ಸರ್ಕಾರ ಧಾವಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ರೈತ ಮೋರ್ಚಾ ಜಿಲ್ಲಾ ಘಟಕ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿತು.

ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಡಿ.ವೈ. ಹುನಗುಂದ, ಹವಾಮಾನ ವೈಪರೀತ್ಯ, ಅಸಮರ್ಪಕ ಮಳೆ, ಬೆಳೆ ವೈಫಲ್ಯ, ದುಬಾರಿ ಬೀಜ ಹಾಗೂ ರಸಗೊಬ್ಬರ, ಮಾರುಕಟ್ಟೆಯ ಬೆಲೆ ಕುಸಿತದಿಂದ ಜಿಲ್ಲೆಯ ರೈತರು ಆರ್ಥಿಕವಾಗಿ ಸಂಪೂರ್ಣ ಕಂಗೆಟ್ಟಿದ್ದಾರೆ. ಬೆಳೆ ಬೆಳೆಯಲು ಮಾಡಿದ ಹೂಡಿಕೆಯನ್ನೂ ಮರಳಿ ಪಡೆಯಲಾಗದ ಸ್ಥಿತಿ ನಿರ್ಮಾಣವಾಗಿದ್ದು, ಸರ್ಕಾರ ಕೂಡಲೇ ಗದಗ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ವಿಶೇಷ ಪರಿಹಾರ ಪ್ಯಾಕೇಜ್ ಪ್ರಕಟಿಸಬೇಕು ಎಂದು ಆಗ್ರಹಿಸಿದರು.

ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಹಾಗೂ ರಾಜ್ಯ ಸರ್ಕಾರದ ಪರಿಹಾರ ನಿಧಿಯಡಿ ಬಾಕಿ ಉಳಿದಿರುವ ಬೆಳೆ ವಿಮೆ ಮತ್ತು ಬೆಳೆ ಹಾನಿ ಪರಿಹಾರದ ಮೊತ್ತವನ್ನು ಎರಡು ವಾರಗಳೊಳಗೆ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಬೇಕು. ರೈತರು ಬೆಳೆಯುವ ಎಲ್ಲ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಕಡ್ಡಾಯವಾಗಿ ಜಾರಿಗೊಳಿಸಿ, ಖಾಸಗಿ ಮಧ್ಯವರ್ತಿಗಳ ಶೋಷಣೆ ತಪ್ಪಿಸಲು ಜಿಲ್ಲೆಯಲ್ಲಿ ಅಗತ್ಯ ಸಂಖ್ಯೆಯ ಸರ್ಕಾರಿ ಖರೀದಿ ಕೇಂದ್ರಗಳನ್ನು ಆರಂಭಿಸಬೇಕು ಎಂದು ಅವರು ಒತ್ತಾಯಿಸಿದರು.

ಅಘೋಷಿತ ವಿದ್ಯುತ್ ಕಡಿತ ಹಾಗೂ ವೋಲ್ಟೇಜ್ ಏರಿಳಿತದಿಂದ ಪಂಪ್‌ಸೆಟ್‌ಗಳು ಹಾಳಾಗುತ್ತಿದ್ದು, ಹಗಲು ವೇಳೆಯಲ್ಲಿ ಕನಿಷ್ಠ ಏಳು ಗಂಟೆಗಳ ಗುಣಮಟ್ಟದ ತ್ರಿಫೇಸ್ ವಿದ್ಯುತ್ ಪೂರೈಸಬೇಕು. ಹಿಂಗಾರು ಹಂಗಾಮಿಗೆ ಮುನ್ನವೇ ರೈತ ಸಂಪರ್ಕ ಕೇಂದ್ರ ಹಾಗೂ ಸಹಕಾರ ಸಂಘಗಳ ಮೂಲಕ ಸಬ್ಸಿಡಿ ದರದಲ್ಲಿ ಗುಣಮಟ್ಟದ ಬೀಜ ಮತ್ತು ರಸಗೊಬ್ಬರ ವಿತರಿಸಬೇಕು. ನಕಲಿ ಕೃಷಿ ಪರಿಕರ ಮಾರಾಟಗಾರರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಿ ಅವರ ಪರವಾನಗಿ ರದ್ದುಪಡಿಸಬೇಕು ಎಂದು ಮನವಿ ಮಾಡಿದರು.

ಬಿಜೆಪಿ ಜಿಲ್ಲಾ ಅಧ್ಯಕ್ಷ ರಾಜು ಕುರಡಗಿ ಮಾತನಾಡಿ, ಸರಣಿ ಬೆಳೆ ವೈಫಲ್ಯದಿಂದ ಕಂಗಾಲಾಗಿರುವ ರೈತರಿಗೆ ಬ್ಯಾಂಕುಗಳು ಸಾಲ ವಸೂಲಾತಿ ಹೆಸರಿನಲ್ಲಿ ನೀಡುತ್ತಿರುವ ಕಿರುಕುಳವನ್ನು ತಕ್ಷಣ ನಿಲ್ಲಿಸಬೇಕು. ಕೃಷಿ ಸಾಲಮನ್ನಾ ಪ್ರಕ್ರಿಯೆಗೆ ಚಾಲನೆ ನೀಡುವುದರ ಜೊತೆಗೆ ಗ್ರಾಮೀಣ ಪ್ರದೇಶಗಳಲ್ಲಿ ಬರ ಕಾಮಗಾರಿಗಳನ್ನು ಆರಂಭಿಸಿ ಕೂಲಿಕಾರರ ಗುಳೆ ತಪ್ಪಿಸಬೇಕು ಎಂದು ಆಗ್ರಹಿಸಿದರು.

ಬೇಡಿಕೆಗಳನ್ನು ಜಿಲ್ಲಾಡಳಿತ ತಕ್ಷಣವೇ ರಾಜ್ಯ ಸರ್ಕಾರದ ಗಮನಕ್ಕೆ ತಂದು ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಜಿಲ್ಲೆಯ ಪ್ರಮುಖ ಹೆದ್ದಾರಿಗಳನ್ನು ತಡೆದು, ಸರ್ಕಾರಿ ಕಚೇರಿಗಳ ಎದುರು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಲಾಗುವುದು ಎಂದು ಬಿಜೆಪಿ ರೈತ ಮೋರ್ಚಾ ಎಚ್ಚರಿಕೆ ನೀಡಿತು.

ಮನವಿ ಸಲ್ಲಿಸುವ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ
ಪ್ರಧಾನ ಕಾರ್ಯದರ್ಶಿ ಮಹೇಶ್ ಶಿರಹಟ್ಟಿ, ಅಶೋಕ್ ಬ್ಯಾಹಟ್ಟಿ, ಎಂ.ಎಸ್. ಕರಿಗೌಡ್ರ, ಚನ್ನವೀರಪ್ಪ ಹೂಗಾರ, ಫಕ್ಕೀರೇಶ ರಟ್ಟಿಹಳ್ಳಿ, ವೈ.ಪಿ. ಅಡ್ನೂರ, ಸಂತೋಷ ಅಕ್ಕಿ, ಭೀಮಸಿಂಗ್ ರಾಠೋಡ್, ದೇವರಾಜ ಮೇಟಿ, ಶಂಕರ ಕರಿಬಿಷ್ಟಿ, ರವಿ ವಗ್ಗನವರ, ಸುರೇಶ್ ಮರಳಪ್ಪನವರ, ಬುಡಪ್ಪ ಹಳ್ಳಿ, ಲಕ್ಷ್ಮಣ ರಣತೂರು, ಬಸವರಾಜ ಕುರ್ತಕೋಟಿ, ರಮೇಶ್ ಸಜ್ಜಗಾರ ಸೇರಿದಂತೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

“ಮಳೆ ಇಲ್ಲ, ಬೆಳೆ ಇಲ್ಲ, ಪರಿಹಾರವೂ ಇಲ್ಲ. ರೈತರ ಬದುಕು ಉಳಿಸಬೇಕಾದರೆ ಗದಗ ಜಿಲ್ಲೆಯನ್ನು ತಕ್ಷಣ ಬರಪೀಡಿತ ಪ್ರದೇಶವೆಂದು ಘೋಷಿಸಿ ಸರ್ಕಾರ ನೆರವಿಗೆ ಬರಬೇಕು.” 

ಡಿ.ವೈ. ಹುನಗುಂದ, ಜಿಲ್ಲಾಧ್ಯಕ್ಷ, ಬಿಜೆಪಿ ರೈತ ಮೋರ್ಚಾ

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img