ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ತ್ರಿಬಲ್ ಮರ್ಡರ್ ಪ್ರಕರಣ ಬೆಳಕಿಗೆ ಬಂದಿದೆ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಕೊಟ್ಟಿಗೆಪಾಳ್ಯದ ಗಣೇಶ ದೇವಸ್ಥಾನದ ಸಮೀಪದ ಮನೆಯಲ್ಲಿ ತಾಯಿ, ಅಜ್ಜಿ ಹಾಗೂ ಮಾವನನ್ನು ಬರ್ಬರವಾಗಿ ಹತ್ಯೆಗೈದ ಬಳಿಕ ಆರೋಪಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮೃತರನ್ನು ಮಂಗಳಮ್ಮ (55), ನಂಜಮ್ಮ (65) ಹಾಗೂ ಸತೀಶ್ (50) ಎಂದು ಗುರುತಿಸಲಾಗಿದೆ. ಆರೋಪಿ ಪ್ರಶಾಂತ್ (34) ಎಂಬಾತ ಈ ಕೃತ್ಯ ಎಸಗಿದ್ದಾನೆ.
ಕುಟುಂಬ ಕಳೆದ ಏಳೆಂಟು ವರ್ಷಗಳಿಂದ ಕೊಟ್ಟಿಗೆಪಾಳ್ಯದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿತ್ತು. ಪ್ರಶಾಂತ್ ಚಾಲಕರಾಗಿ ಕೆಲಸ ಮಾಡುತ್ತಿದ್ದರೂ, ಕಳೆದ ಒಂದು ವರ್ಷದಿಂದ ಉದ್ಯೋಗಕ್ಕೆ ಹೋಗುತ್ತಿರಲಿಲ್ಲ ಎಂದು ತಿಳಿದುಬಂದಿದೆ.
ಶನಿವಾರ ಬೆಳಿಗ್ಗೆ ಕುಟುಂಬದ ಮುಖ್ಯಸ್ಥ ಕೆಲಸಕ್ಕೆ ತೆರಳಿದ್ದ ವೇಳೆ, ಪ್ರಶಾಂತ್ ಮನೆಯಲ್ಲಿ ಇದ್ದ ತಾಯಿ, ಅಜ್ಜಿ ಹಾಗೂ ಮಾವನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಮನೆಯ ಮುಖ್ಯದ್ವಾರದಲ್ಲೇ ತಾಯಿ ಮತ್ತು ಅಜ್ಜಿಯನ್ನು ಹತ್ಯೆ ಮಾಡಿದ್ದರೆ, ಮಾವ ಸತೀಶ್ ಅವರನ್ನು ಮನೆಯ ಕೋಣೆಯೊಳಗೆ ಕೊಚ್ಚಿ ಕೊಲೆ ಮಾಡಿದ್ದಾನೆ.
ಘಟನೆ ಬಳಿಕ ಪರಾರಿಯಾಗಲು ಯತ್ನಿಸಿದ್ದ ಆರೋಪಿಯನ್ನು ಗಮನಿಸಿದ ಮನೆ ಮಾಲೀಕರು ಆತನನ್ನು ಮನೆಯೊಳಗೆ ಕೂಡಿಹಾಕಿದ್ದಾರೆ. ಈ ವೇಳೆ ಪ್ರಶಾಂತ್ ಮನೆಯೊಳಗೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಘಟನಾ ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಕೊಲೆಗೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.



