HomeCrime News8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಮುಖ್ಯ ಶಿಕ್ಷಕಿ ಸೇರಿ ಮೂವರು ಶಿಕ್ಷಕಿಯರು ಹಾಗೂ ಅಡುಗೆ...

8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಮುಖ್ಯ ಶಿಕ್ಷಕಿ ಸೇರಿ ಮೂವರು ಶಿಕ್ಷಕಿಯರು ಹಾಗೂ ಅಡುಗೆ ಸಹಾಯಕಿ ವಿರುದ್ಧ FIR

For Dai;y Updates Join Our whatsapp Group

ಆನೇಕಲ್: ಎಂಟನೇ ತರಗತಿ ವಿದ್ಯಾರ್ಥಿನಿ ಮಧುಶ್ರೀ ಆತ್ಮಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಶಾಲೆಯ ಮುಖ್ಯ ಶಿಕ್ಷಕಿ, ಇಬ್ಬರು ಸಹ ಶಿಕ್ಷಕಿಯರು ಹಾಗೂ ಅಡುಗೆ ಸಹಾಯಕಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ವಿದ್ಯಾರ್ಥಿನಿಗೆ ಮಾನಸಿಕ ಕಿರುಕುಳ ನೀಡಿದ ಆರೋಪದಡಿ ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಮುಖ್ಯ ಶಿಕ್ಷಕಿ ಸುಜಾತ ಈರಪ್ಪ, ಸಹ ಶಿಕ್ಷಕಿಯರಾದ ಕವಿತಾ, ರೂಪಾ ಹಾಗೂ ಅಡುಗೆ ಸಹಾಯಕಿ ಕಮಲಮ್ಮ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ವಿದ್ಯಾರ್ಥಿನಿ ಮಧುಶ್ರೀಗೆ ನಿರಂತರವಾಗಿ ಮಾನಸಿಕ ಕಿರುಕುಳ ನೀಡಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದೆ.

ಪ್ರಾಥಮಿಕ ತನಿಖೆ ಪ್ರಕಾರ, ಶಾಲೆಯಲ್ಲಿ ಕೆಲವು ವಿದ್ಯಾರ್ಥಿಗಳು ತಮ್ಮನ್ನು ಮಾನಸಿಕವಾಗಿ ಕಿರುಕುಳ ನೀಡುತ್ತಿರುವ ಬಗ್ಗೆ ಗ್ರಾಮ ಪಂಚಾಯಿತಿ ಪಿಡಿಒ ಅವರಿಗೆ ದೂರು ನೀಡಲು ಮಧುಶ್ರೀ ಪತ್ರವೊಂದನ್ನು ಬರೆದು ಬ್ಯಾಗ್‌ನಲ್ಲಿ ಇಟ್ಟುಕೊಂಡಿದ್ದಳು ಎನ್ನಲಾಗಿದೆ. ಈ ವಿಷಯ ಶಿಕ್ಷಕಿಯರಿಗೆ ತಿಳಿದ ಬಳಿಕ ಮಧುಶ್ರೀ ಅವರನ್ನು ಇನ್ನಷ್ಟು ಗುರಿಯಾಗಿಸಿ ಮಾನಸಿಕ ಒತ್ತಡಕ್ಕೆ ಒಳಪಡಿಸಲಾಗಿದೆ ಎಂದು ಆರೋಪಿಸಲಾಗಿದೆ.

ಆತ್ಮಹತ್ಯೆಗೂ ಒಂದು ದಿನ ಮೊದಲು ಮಧುಶ್ರೀ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಶ್ರೀನಿವಾಸ್ ಅವರಿಗೆ ತನ್ನ ಮೇಲಿನ ಕಿರುಕುಳದ ಬಗ್ಗೆ ಮಾಹಿತಿ ನೀಡಿದ್ದಳು ಎಂದು ತಿಳಿದುಬಂದಿದೆ. ಅದೇ ದಿನ ಮನೆಗೆ ಬಂದ ಬಳಿಕ, ಶಿಕ್ಷಕಿಯರು ಅವಾಚ್ಯ ಶಬ್ದಗಳಿಂದ ನಿಂದಿಸಿ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ತನ್ನ ಸಹೋದರಿ ಭಾನುಶ್ರೀ ಅವರ ಬಳಿ ಮಧುಶ್ರೀ ಹೇಳಿಕೊಂಡಿದ್ದಳು ಎನ್ನಲಾಗಿದೆ. ಇದಾದ ಬಳಿಕ ಆಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಕುಟುಂಬದವರು ಆರೋಪಿಸಿದ್ದಾರೆ.

ಏನಿದು ಪ್ರಕರಣ?

ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಮರಸೂರು ಮಡಿವಾಳ ಗ್ರಾಮದ ನಿವಾಸಿಯಾಗಿದ್ದ ಮಧುಶ್ರೀ, ಮರಸೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ರಾಜ್ಯಮಟ್ಟದ ಕಬಡ್ಡಿ ಆಟಗಾರ್ತಿಯಾಗಿಯೂ ಗುರುತಿಸಿಕೊಂಡಿದ್ದಳು.

ಜುಲೈ 9ರ ರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು. ಘಟನಾ ಸ್ಥಳದಲ್ಲಿ ಡೆತ್‌ನೋಟ್ ಪತ್ತೆಯಾಗಿದ್ದು, ಅದರಲ್ಲಿ ಶಾಲೆಯಲ್ಲಿ ನಡೆದ ಘಟನೆಗಳಿಂದ ತೀವ್ರ ಮನನೊಂದಿರುವುದಾಗಿ ಉಲ್ಲೇಖಿಸಿದ್ದಾಳೆ.

ಡೆತ್‌ನೋಟ್‌ನಲ್ಲಿ, “ಶಾಲೆಯಲ್ಲಿ ನಡೆದ ಘಟನೆ ನನಗೆ ತುಂಬಾ ನೋವು ತಂದಿದೆ. ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡಿದ್ದಾರೆ. ಈ ಅವಮಾನ ಸಹಿಸಿಕೊಂಡು ಬದುಕಲು ಸಾಧ್ಯವಾಗುತ್ತಿಲ್ಲ. ಮನಸ್ಸಿಗೆ ತುಂಬಾ ನೋವಾಗಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳುತ್ತಿದ್ದೇನೆ. ನನ್ನ ಅಮ್ಮ, ಅಕ್ಕ, ತಂಗಿ, ತಮ್ಮ ಯಾರದ್ದೂ ತಪ್ಪಿಲ್ಲ. ನನ್ನ ಅಮ್ಮನನ್ನು ಯಾರೂ ಬೈಯಬೇಡಿ. ಎಲ್ಲರೂ ನನ್ನನ್ನು ಕ್ಷಮಿಸಿ. ನನಗೆ ಈ ಭೂಮಿಯ ಮೇಲೆ ಬದುಕುವ ಅರ್ಹತೆ ಇಲ್ಲ” ಎಂದು ಬರೆದಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.

ಪೊಲೀಸರು ಡೆತ್‌ನೋಟ್ ವಶಪಡಿಸಿಕೊಂಡಿದ್ದು, ಅದರಲ್ಲಿರುವ ಆರೋಪಗಳು, ಕುಟುಂಬ ಸದಸ್ಯರ ಹೇಳಿಕೆಗಳು ಹಾಗೂ ಶಾಲಾ ಸಿಬ್ಬಂದಿಯ ಪಾತ್ರ ಸೇರಿದಂತೆ ಎಲ್ಲ ಆಯಾಮಗಳಿಂದ ಪ್ರಕರಣದ ತನಿಖೆಯನ್ನು ಮುಂದುವರಿಸಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img