ಗದಗ: ಜಿಲ್ಲೆಯಲ್ಲಿ ಮತ್ತೆ ದೇವರ ಮೂರ್ತಿ ವಿಕೃತಿಗೊಳಿಸಿದ ಘಟನೆ ಬೆಳಕಿಗೆ ಬಂದಿದ್ದು, ದುಷ್ಕರ್ಮಿಗಳು ನಗರದ ಐತಿಹಾಸಿಕ ಶ್ರೀ ಸರಸ್ವತಿ ದೇವಿ ಮೂರ್ತಿಯ ಎದೆಭಾಗವನ್ನು ಭಗ್ನಗೊಳಿಸಿ ವಿಕೃತಿ ಮೆರೆದಿದ್ದಾರೆ.
ಗದಗ ನಗರದ ಐತಿಹಾಸಿಕ ಶ್ರೀ ತ್ರಿಕೂಟೇಶ್ವರ ದೇವಸ್ಥಾನದ ಆವರಣದಲ್ಲಿರುವ ಶ್ರೀ ಸರಸ್ವತಿ ದೇವಸ್ಥಾನದಲ್ಲಿ ಈ ಕೃತ್ಯ ನಡೆದಿದ್ದು, ಘಟನೆ ನಿನ್ನೆ ರಾತ್ರಿ ನಡೆದಿರಬಹುದೆಂದು ಶಂಕಿಸಲಾಗಿದೆ. ಶನಿವಾರ ಮಧ್ಯಾಹ್ನ ಪ್ರಕರಣ ಬೆಳಕಿಗೆ ಬಂದಿದೆ.
8ನೇ ಶತಮಾನದಲ್ಲಿ ನಿರ್ಮಾಣಗೊಂಡಿರುವ ಈ ದೇವಾಲಯ ಕೇಂದ್ರ ಪುರಾತತ್ವ ಇಲಾಖೆಯ ಅಧೀನದಲ್ಲಿದೆ. ದೇವಾಲಯದ ಐತಿಹಾಸಿಕ ಮಹತ್ವದ ನಡುವೆಯೇ ಮೂರ್ತಿಗೆ ಹಾನಿ ಉಂಟುಮಾಡಿರುವುದು ಭಕ್ತರು ಹಾಗೂ ಸಾರ್ವಜನಿಕರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.
ಐತಿಹಾಸಿಕ ದಾಖಲೆಗಳ ಪ್ರಕಾರ, 16ನೇ ಶತಮಾನದ ಯುದ್ಧದ ಸಂದರ್ಭದಲ್ಲಿಯೂ ಈ ಮೂರ್ತಿಗೆ ಹಾನಿಯಾಗಿತ್ತು. ಇದೀಗ ಮತ್ತೊಮ್ಮೆ ಮೂರ್ತಿ ವಿಕೃತಿಗೊಂಡಿರುವುದು ಆತಂಕಕ್ಕೆ ಕಾರಣವಾಗಿದೆ.
ಪ್ರಕರಣ ಗದಗ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದುಷ್ಕರ್ಮಿಗಳ ಪತ್ತೆಗೆ ತನಿಖೆ ಆರಂಭಿಸಲಾಗಿದೆ.



