HomeCrime Newsಎರಡು ತೊಲ ಬಂಗಾರಕ್ಕಾಗಿ ಅತ್ತೆಯ ಮೇಲೆ ಮಾರಣಾಂತಿಕ ಹಲ್ಲೆ: ಚಿಕಿತ್ಸೆ ಫಲಿಸದೆ ಮಹಿಳೆ ಸಾವು

ಎರಡು ತೊಲ ಬಂಗಾರಕ್ಕಾಗಿ ಅತ್ತೆಯ ಮೇಲೆ ಮಾರಣಾಂತಿಕ ಹಲ್ಲೆ: ಚಿಕಿತ್ಸೆ ಫಲಿಸದೆ ಮಹಿಳೆ ಸಾವು

For Dai;y Updates Join Our whatsapp Group

ಬೆಂಗಳೂರು: ವರದಕ್ಷಿಣೆ ಹೆಸರಿನಲ್ಲಿ ನಡೆಯುತ್ತಿರುವ ಕಿರುಕುಳಕ್ಕೆ ಮತ್ತೊಂದು ಜೀವ ಬಲಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೂರು ತಿಂಗಳ ಗಂಡು ಮಗುವಿಗೆ ಎರಡು ತೊಲ ಚಿನ್ನ ನೀಡಲಿಲ್ಲ ಎಂಬ ಕಾರಣಕ್ಕೆ ಅಳಿಯ ನಡೆಸಿದ ಮಾರಣಾಂತಿಕ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದ 45 ವರ್ಷದ ರೋಷನಬಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮೂಲತಃ ಯಾದಗಿರಿ ಜಿಲ್ಲೆಯವರಾದ ರೋಷನಬಿ ಅವರ ಕುಟುಂಬ ಕಳೆದ ಏಳು ವರ್ಷಗಳಿಂದ ಬೆಂಗಳೂರಿನ ವಿದ್ಯಾರಣ್ಯಪುರದ ಮೇಡಿ ಅಗ್ರಹಾರ ಪ್ರದೇಶದಲ್ಲಿ ನೆಲೆಸಿತ್ತು. ಆರೋಪಿ ಅಕ್ಬರ್, ಎರಡು ತೊಲ ಚಿನ್ನ ನೀಡುವಂತೆ ನಿರಂತರವಾಗಿ ಪತ್ನಿ ಹಾಗೂ ಆಕೆಯ ಕುಟುಂಬದ ಮೇಲೆ ಒತ್ತಡ ಹೇರುತ್ತಿದ್ದ ಎನ್ನಲಾಗಿದೆ. ಚಿನ್ನ ನೀಡದಿದ್ದರೆ ಕೊಲೆ ಮಾಡುವುದಾಗಿ ಅತ್ತೆಗೆ ಬೆದರಿಕೆ ಹಾಕಿದ್ದ ಆರೋಪವೂ ಕೇಳಿಬಂದಿದೆ.

ಜುಲೈ 10ರಂದು ಅಕ್ಬರ್ ಕೊಡಲಿಯೊಂದಿಗೆ ಮನೆಗೆ ಬಂದು ಯಾವುದೇ ಮಾತುಕತೆಯಿಲ್ಲದೆ ರೋಷನಬಿ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಈ ಸಂಬಂಧ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಘಟನೆ ಕುರಿತು ಮಾತನಾಡಿದ ಮೃತರ ಪುತ್ರಿ ಹಾಗೂ ಆರೋಪಿಯ ಪತ್ನಿ ರಂಜಾನ್, “ಏಳು ವರ್ಷಗಳ ಹಿಂದೆ ನಾವು ಪ್ರೀತಿಸಿ ಮದುವೆಯಾಗಿದ್ದೆವು. ಮದುವೆಯಾದ ದಿನದಿಂದಲೇ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದ. ಎರಡನೇ ಮಗು ಜನಿಸಿದ ಬಳಿಕ ಎರಡು ತೊಲ ಚಿನ್ನ ಕೊಡಿಸಬೇಕೆಂದು ನಿರಂತರವಾಗಿ ಜಗಳ ಮಾಡುತ್ತಿದ್ದ. ನಮ್ಮ ಕುಟುಂಬದ ಆರ್ಥಿಕ ಪರಿಸ್ಥಿತಿ ಚೆನ್ನಾಗಿಲ್ಲ ಎಂದು ಹೇಳಿದರೂ ಕೇಳುತ್ತಿರಲಿಲ್ಲ. ಜುಲೈ 10ರಂದು ಕೊಡಲಿಯೊಂದಿಗೆ ಬಂದು ನನ್ನ ತಾಯಿಯ ಮೇಲೆ ಹಲ್ಲೆ ನಡೆಸಿದ. ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು” ಎಂದು ಒತ್ತಾಯಿಸಿದ್ದಾರೆ.

ಆರೋಪಿ ಅಕ್ಬರ್ ಮತ್ತು ರಂಜಾನ್ ಏಳು ವರ್ಷಗಳ ಹಿಂದೆ ವಿವಾಹವಾಗಿದ್ದರು. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೋಣಾಳ ಗ್ರಾಮದವರಾದ ಅಕ್ಬರ್, ಶಾಲೆಯಲ್ಲಿ ಓದುತ್ತಿದ್ದ ರಂಜಾನ್ ಅವರನ್ನು ಕರೆದುಕೊಂಡು ಹೋಗಿ ಮದುವೆಯಾಗಿದ್ದ ಎಂದು ತಿಳಿದುಬಂದಿದೆ. ಆರಂಭದಲ್ಲಿ ಕುಟುಂಬದವರು ವಿರೋಧ ವ್ಯಕ್ತಪಡಿಸಿದ್ದರೂ, ನಂತರ ಸಂಬಂಧಕ್ಕೆ ಒಪ್ಪಿಗೆ ನೀಡಿದ್ದರು. ದಂಪತಿಗೆ ನಾಲ್ಕು ವರ್ಷದ ಹೆಣ್ಣು ಮಗು ಹಾಗೂ ಒಂದು ತಿಂಗಳ ಹಿಂದೆ ಜನಿಸಿದ ಗಂಡು ಮಗು ಇದೆ.

ಮದುವೆಯಾದ ಬಳಿಕದಿಂದಲೇ ಅಕ್ಬರ್ ವರದಕ್ಷಿಣೆಗಾಗಿ ಪತ್ನಿಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ. ಈ ಹಿಂದೆ ಸೀಮೆಎಣ್ಣೆ ಸುರಿದು ಪತ್ನಿಯನ್ನು ಕೊಲ್ಲಲು ಯತ್ನಿಸಿದ್ದ ಎನ್ನುವ ಆರೋಪವೂ ಇದೆ. ಗಂಡು ಮಗು ಜನಿಸಿದ ಬಳಿಕ ಎರಡು ತೊಲ ಚಿನ್ನ ನೀಡುವಂತೆ ಮತ್ತಷ್ಟು ಒತ್ತಡ ಹೇರುತ್ತಿದ್ದು, ಇದೇ ವಿಚಾರದಲ್ಲಿ ಅತ್ತೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ ಎಂದು ಕುಟುಂಬಸ್ಥರು ದೂರಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ವಿರುದ್ಧ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

 

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img