ಉತ್ತರಾಖಂಡ: ಚಾರ್ಧಾಮಗಳಲ್ಲಿ ಒಂದಾದ ಬದರಿನಾಥ ಧಾಮದಲ್ಲಿ ಭಕ್ತರು ಸಲ್ಲಿಸಿದ ಕಾಣಿಕೆ ಕಳ್ಳತನ ಪ್ರಕರಣದ ತನಿಖೆ ವೇಗ ಪಡೆದುಕೊಂಡಿದ್ದು, ವಿಶೇಷ ತನಿಖಾ ದಳ (ಎಸ್ಐಟಿ) ಪ್ರಮುಖ ಆರೋಪಿ ಹಾಗೂ ಬದರಿ-ಕೇದಾರ ದೇವಾಲಯ ಸಮಿತಿ (ಬಿಕೆಟಿಸಿ)ಯ ಅಮಾನತುಗೊಂಡ ಸಿಬ್ಬಂದಿ ಪ್ರಮೋದ್ ನೌಟಿಯಾಲ್ ಅವರನ್ನು ಬಂಧಿಸಿದೆ.
ಆರೋಪಿ ಪರಾರಿಯಾಗುವ ಸಾಧ್ಯತೆಯನ್ನು ಮನಗಂಡ ಎಸ್ಐಟಿ ಅಧಿಕಾರಿಗಳು ಸಾಮಾನ್ಯ ಉಡುಪಿನಲ್ಲಿ ಕಾರ್ಯಾಚರಣೆ ನಡೆಸಿ, ಡೆಹ್ರಾಡೂನ್ನಲ್ಲಿರುವ ಅವರ ನಿವಾಸದಿಂದ ವಶಕ್ಕೆ ಪಡೆದಿದ್ದಾರೆ. ಬಳಿಕ ಅವರನ್ನು ಚಮೋಲಿ ಜಿಲ್ಲೆಗೆ ಕರೆತಂದು ವಿಚಾರಣೆಗೆ ಒಳಪಡಿಸಲಾಗಿದೆ.
ಬಿಕೆಟಿಸಿಯಲ್ಲಿ ಉದ್ಯೋಗಿಯಾಗಿದ್ದ ಪ್ರಮೋದ್ ನೌಟಿಯಾಲ್ ವಿರುದ್ಧ ಭಕ್ತರ ಕಾಣಿಕೆ ಕಳವು ಮಾಡಿರುವ ಗಂಭೀರ ಆರೋಪ ಕೇಳಿಬಂದಿತ್ತು. ಆರೋಪ ಬಹಿರಂಗವಾಗುತ್ತಿದ್ದಂತೆ ದೇವಾಲಯ ಸಮಿತಿ ಅವರನ್ನು ಸೇವೆಯಿಂದ ಅಮಾನತುಗೊಳಿಸಿತ್ತು.
ಅಮಾನತು ಕ್ರಮವನ್ನು ಪ್ರಶ್ನಿಸಿ ನೌಟಿಯಾಲ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಈ ಸಂಬಂಧ ಪ್ರತಿಕ್ರಿಯೆ ಸಲ್ಲಿಸುವಂತೆ ಬಿಕೆಟಿಸಿಗೆ ಸೂಚಿಸಿ ಜುಲೈ 16ರಂದು ಮುಂದಿನ ವಿಚಾರಣೆಯನ್ನು ನಿಗದಿಪಡಿಸಿದೆ. ಇದರ ನಡುವೆಯೇ ಎಸ್ಐಟಿ ಅವರನ್ನು ಬಂಧಿಸಿ ತನಿಖೆ ಮುಂದುವರಿಸಿದೆ.
ಪ್ರಕರಣದಲ್ಲಿ ಇನ್ನೂ ಹಲವು ಮಂದಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಶೀಘ್ರದಲ್ಲೇ ಮತ್ತಷ್ಟು ಬಂಧನಗಳು ನಡೆಯುವ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಈ ಪ್ರಕರಣವನ್ನು ಮೊದಲ ಬಾರಿಗೆ ಭೈರವ ಸೇನೆಯ ಸಂಸ್ಥಾಪಕ ಸಂದೀಪ್ ಖತ್ರಿ ಬಹಿರಂಗಪಡಿಸಿದ್ದರು. ಬದರಿನಾಥ ದೇವಾಲಯದಲ್ಲಿ ಭಕ್ತರು ಸಲ್ಲಿಸಿದ ಕಾಣಿಕೆ ದುರುಪಯೋಗವಾಗುತ್ತಿದೆ ಎಂಬ ಆರೋಪವನ್ನು ಅವರು ಸಾರ್ವಜನಿಕವಾಗಿ ಮಾಡಿದ್ದರು. ಈ ಆರೋಪ ರಾಜ್ಯಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿತ್ತು.
ಬೆಳವಣಿಗೆಯ ನಂತರ ಬದರಿ-ಕೇದಾರ ದೇವಾಲಯ ಸಮಿತಿಯ ಅಧ್ಯಕ್ಷ ಹೇಮಂತ್ ದ್ವಿವೇದಿ ನಾಲ್ವರು ಸದಸ್ಯರ ಆಂತರಿಕ ತನಿಖಾ ಸಮಿತಿಯನ್ನು ರಚಿಸಿದ್ದರು. ಬಳಿಕ ಪ್ರಕರಣ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಸುದ್ದಿಯಾಗುತ್ತಿದ್ದಂತೆ ಉತ್ತರಾಖಂಡ ಸರ್ಕಾರ ಮೂರು ಸದಸ್ಯರ ಉನ್ನತ ಮಟ್ಟದ ಎಸ್ಐಟಿ ರಚಿಸಿ ತನಿಖೆಗೆ ಆದೇಶಿಸಿತು.
ತನಿಖೆಯ ಮೊದಲ ಹಂತದಲ್ಲೇ ಪ್ರಮೋದ್ ನೌಟಿಯಾಲ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಇದೀಗ ಬಂಧನ ನಡೆದಿದ್ದು, ಪ್ರಕರಣದ ತನಿಖೆ ಮತ್ತಷ್ಟು ತೀವ್ರಗೊಂಡಿದೆ.



