ಬೆಂಗಳೂರು: ರಾಜ್ಯದಲ್ಲಿ ದಶಕಗಳಿಂದ ಸ್ಥಗಿತಗೊಂಡಿರುವ ಕಾಲೇಜು ಮತ್ತು ವಿಶ್ವವಿದ್ಯಾಲಯಗಳ ವಿದ್ಯಾರ್ಥಿ ಸಂಘದ ಚುನಾವಣೆಗಳನ್ನು ಮರು ಆರಂಭಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.
2026-27ನೇ ಶೈಕ್ಷಣಿಕ ಸಾಲಿನಿಂದ ವಿದ್ಯಾರ್ಥಿ ಚುನಾವಣೆ ನಡೆಸಲು ಸರ್ಕಾರ ಮುಂದಾಗಿತ್ತು ಎನ್ನಲಾಗಿದ್ದರೂ, ಶೈಕ್ಷಣಿಕ ವರ್ಷ ಆರಂಭವಾದ ಬಳಿಕವೂ ಈ ಕುರಿತು ಯಾವುದೇ ಸ್ಪಷ್ಟ ನಿರ್ಧಾರ ಪ್ರಕಟವಾಗಿಲ್ಲ.
ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ ನಡೆಸುವ ಸಂಬಂಧ ಸರ್ಕಾರ ಈಗಾಗಲೇ ಸಮಿತಿ ರಚಿಸಿ ವರದಿ ಪಡೆದಿದೆ. ಚುನಾವಣೆ ನಡೆಸಬೇಕೇ ಅಥವಾ ಬೇಡವೇ ಎಂಬ ಕುರಿತು ಶಿಕ್ಷಣ ತಜ್ಞರು, ಸಾರ್ವಜನಿಕರು ಹಾಗೂ ಪೋಷಕರ ಅಭಿಪ್ರಾಯವನ್ನೂ ಸಂಗ್ರಹಿಸಲಾಗಿತ್ತು.
ಈ ಹಿನ್ನೆಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ ವಿದ್ಯಾರ್ಥಿ ಸಂಘದ ಚುನಾವಣೆ ಮರು ಆರಂಭವಾಗಲಿದೆ ಎಂಬ ನಿರೀಕ್ಷೆ ವಿದ್ಯಾರ್ಥಿ ವಲಯದಲ್ಲಿತ್ತು. ಆದರೆ ಕಾಲೇಜುಗಳು ಹಾಗೂ ವಿಶ್ವವಿದ್ಯಾಲಯಗಳು ಆರಂಭವಾಗಿದ್ದರೂ ಚುನಾವಣೆ ಪ್ರಕ್ರಿಯೆಗೆ ಚಾಲನೆ ದೊರೆತಿಲ್ಲ. ಇದರಿಂದ ವಿದ್ಯಾರ್ಥಿ ಸಂಘಟನೆಗಳು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿವೆ.
ವಿದ್ಯಾರ್ಥಿ ಸಂಘದ ಚುನಾವಣೆ ಮೂಲಕ ಕಾಲೇಜು ಹಂತದಲ್ಲಿಯೇ ನಾಯಕತ್ವ ಗುಣ ಬೆಳೆಸಲು ಹಾಗೂ ಭವಿಷ್ಯದ ನಾಯಕರನ್ನು ರೂಪಿಸಲು ಸಾಧ್ಯವಾಗುತ್ತದೆ. ಅಲ್ಲದೆ, ಕಾಲೇಜುಗಳಲ್ಲಿನ ಸಮಸ್ಯೆಗಳನ್ನು ಪ್ರಶ್ನಿಸಲು ವಿದ್ಯಾರ್ಥಿಗಳಿಗೆ ಸೂಕ್ತ ವೇದಿಕೆ ಸಿಗಲಿದೆ ಎಂದು ಪದವಿ ವಿದ್ಯಾರ್ಥಿ ನಿತೀನ್ ಅಭಿಪ್ರಾಯಪಟ್ಟಿದ್ದಾರೆ.
ಉನ್ನತ ಶಿಕ್ಷಣ ಇಲಾಖೆಯಲ್ಲಿನ ಆಡಳಿತಾತ್ಮಕ ಬೆಳವಣಿಗೆಗಳ ನಡುವೆಯೇ ಕಾಲೇಜು ಚುನಾವಣೆ ಯೋಜನೆ ವಿಳಂಬವಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ. ಸರ್ಕಾರ ಆದಷ್ಟು ಬೇಗ ವಿದ್ಯಾರ್ಥಿ ಸಂಘದ ಚುನಾವಣೆ ಕುರಿತು ಸ್ಪಷ್ಟ ನಿರ್ಧಾರ ಕೈಗೊಂಡು, ಚುನಾವಣೆಗೆ ಚಾಲನೆ ನೀಡಬೇಕು ಎಂದು ವಿದ್ಯಾರ್ಥಿ ನಾಯಕರು ಒತ್ತಾಯಿಸಿದ್ದಾರೆ.
ಒಟ್ಟಿನಲ್ಲಿ, ದಶಕಗಳ ಬಳಿಕ ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ ಮರು ಆರಂಭಿಸುವಂತೆ ಬೇಡಿಕೆ ತೀವ್ರಗೊಂಡಿದ್ದು, ಸರ್ಕಾರ ಈ ಕುರಿತು ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ.



