HomeDharwadಗಣತಿ ನಮೂನೆ ಕಡ್ಡಾಯವಾಗಿ ಬಿಎಲ್‌ಒಗೆ ಸಲ್ಲಿಸಿ

ಗಣತಿ ನಮೂನೆ ಕಡ್ಡಾಯವಾಗಿ ಬಿಎಲ್‌ಒಗೆ ಸಲ್ಲಿಸಿ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಧಾರವಾಡ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)-2026ರ ಪ್ರಕ್ರಿಯೆ ವೇಗವಾಗಿ ನಡೆಯುತ್ತಿದ್ದು, ಮನೆಮನೆಗೆ ವಿತರಿಸಲಾಗಿರುವ ಗಣತಿ ನಮೂನೆಗಳನ್ನು ಮತದಾರರು ನಿಗದಿತ ಅವಧಿಯೊಳಗೆ ಭರ್ತಿ ಮಾಡಿ ಸಂಬಂಧಿಸಿದ ಬಿಎಲ್‌ಒಗಳಿಗೆ ಕಡ್ಡಾಯವಾಗಿ ಸಲ್ಲಿಸಬೇಕು. ಇಲ್ಲದಿದ್ದರೆ ಕರಡು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗುವುದಿಲ್ಲ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಎಚ್ಚರಿಕೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಧಾರವಾಡ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ 1,665 ಮತಗಟ್ಟೆಗಳಲ್ಲಿ ಎಸ್‌ಐಆರ್ ಕಾರ್ಯ ನಡೆಯುತ್ತಿದ್ದು, ಒಟ್ಟು 16,21,961 ಮತದಾರರ ಪೈಕಿ 15,19,544 ಗಣತಿ ನಮೂನೆಗಳನ್ನು ವಿತರಿಸಲಾಗಿದ್ದು, ಶೇ.93.69ರಷ್ಟು ವಿತರಣೆ ಪೂರ್ಣಗೊಂಡಿದೆ ಎಂದು ತಿಳಿಸಿದರು.

ಇದುವರೆಗೆ 3,33,765 ನಮೂನೆಗಳು ಗಣಕೀಕರಣಗೊಂಡಿದ್ದು, ಶೇ.20.58ರಷ್ಟು ಡಿಜಿಟಲೀಕರಣ ಪೂರ್ಣಗೊಂಡಿದೆ. ಉಳಿದ ನಮೂನೆಗಳನ್ನು ಮತದಾರರು ಶೀಘ್ರವೇ ಬಿಎಲ್‌ಒಗಳಿಗೆ ಹಿಂದಿರುಗಿಸಬೇಕು ಎಂದು ಮನವಿ ಮಾಡಿದರು.

ಭಾರತ ಚುನಾವಣಾ ಆಯೋಗದ ವೇಳಾಪಟ್ಟಿಯಂತೆ ಜುಲೈ 29ರವರೆಗೆ ಮನೆಮನೆಗೆ ಭೇಟಿ, ಆಗಸ್ಟ್ 5ರಂದು ಕರಡು ಮತದಾರರ ಪಟ್ಟಿ ಪ್ರಕಟ, ಸೆಪ್ಟೆಂಬರ್ 4ರವರೆಗೆ ಆಕ್ಷೇಪಣೆ ಸಲ್ಲಿಕೆ ಹಾಗೂ ಅಕ್ಟೋಬರ್ 7ರಂದು ಅಂತಿಮ ಮತದಾರರ ಪಟ್ಟಿ ಪ್ರಕಟವಾಗಲಿದೆ ಎಂದು ವಿವರಿಸಿದರು.

ಜಿಲ್ಲೆಯಲ್ಲಿ ಗೈರು ಹಾಜರಾತಿ, ಶಾಶ್ವತ ವಲಸೆ, ಮರಣ ಹಾಗೂ ದ್ವಿಪ್ರತಿ ಸೇರಿ 57,319 ಮತದಾರರನ್ನು ಗುರುತಿಸಲಾಗಿದ್ದು, ಈ ಕುರಿತು ರಾಜಕೀಯ ಪಕ್ಷಗಳಿಗೂ ಮಾಹಿತಿ ನೀಡಲಾಗಿದೆ ಎಂದು ಹೇಳಿದರು.

ಮತದಾರರ ಅನುಕೂಲಕ್ಕಾಗಿ ಜಿಲ್ಲೆಯಲ್ಲಿ 509 ಬಿಎಲ್‌ಒ ಸೌಲಭ್ಯ ಕೇಂದ್ರಗಳನ್ನು ತೆರೆಯಲಾಗಿದ್ದು, ಗ್ರಾಮ ಪಂಚಾಯಿತಿ, ಗ್ರಾಮ ಒನ್, ನಾಡ ಕಚೇರಿ, ತಹಶೀಲ್ದಾರ್ ಕಚೇರಿ ಸೇರಿದಂತೆ ವಿವಿಧ ಸ್ಥಳಗಳಲ್ಲಿ ನಮೂನೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಬಿಎಲ್‌ಒಗಳು ಪಾರದರ್ಶಕವಾಗಿ ಕಾರ್ಯನಿರ್ವಹಿಸಿ

ಪತ್ರಿಕಾಗೋಷ್ಠಿಯ ಬಳಿಕ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಿದ ಜಿಲ್ಲಾಧಿಕಾರಿ ಸ್ನೇಹಲ್ ಆರ್., “ಬಿಎಲ್‌ಒಗಳು ಮನೆ ಮನೆಗೆ ತೆರಳಿ ಪ್ರಾಮಾಣಿಕ ಹಾಗೂ ಪಾರದರ್ಶಕವಾಗಿ ಕಾರ್ಯನಿರ್ವಹಿಸಬೇಕು. ಜಿಲ್ಲೆಯ ಪ್ರತಿಯೊಬ್ಬ ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗುವಂತೆ ಎಲ್ಲರೂ ಸಹಕರಿಸಬೇಕು.”

— ಸ್ನೇಹಲ್ ಆರ್., ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img