ವಿಜಯಸಾಕ್ಷಿ ಸುದ್ದಿ, ಗದಗ: ಸರ್ಕಾರಿ ಶಾಲೆಗಳ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಬಿ.ಜಿ. ಅಣ್ಣಿಗೇರಿ ಪ್ರತಿಷ್ಠಾನವು ಗದಗ ನಗರ ಹಾಗೂ ತಾಲೂಕಿನ ವಿವಿಧ ಸರ್ಕಾರಿ ಪ್ರೌಢಶಾಲೆಗಳ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಸುಮಾರು 150 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಿತು.
ಪ್ರತಿಷ್ಠಾನದ ಕಾರ್ಯದರ್ಶಿ ಸುಭಾಶ್ಚಂದ್ರ ಬೆಟದೂರ ಮಾತನಾಡಿ, ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಗೌರವಿಸುವುದರಿಂದ ಅವರಲ್ಲಿ ಆತ್ಮವಿಶ್ವಾಸ ವೃದ್ಧಿಯಾಗುವುದರ ಜೊತೆಗೆ ಮತ್ತಷ್ಟು ಸಾಧನೆಗೆ ಪ್ರೇರಣೆಯಾಗುತ್ತದೆ. ಪ್ರತಿಭೆಯನ್ನು ಪ್ರೋತ್ಸಾಹಿಸುವ ಮೂಲಕ ಸಮಾಜದ ಭವಿಷ್ಯವನ್ನು ಸದೃಢಗೊಳಿಸುವುದು ಪ್ರತಿಷ್ಠಾನದ ಉದ್ದೇಶವಾಗಿದೆ ಎಂದು ಹೇಳಿದರು.
ಪ್ರತಿಷ್ಠಾನದ ಗೌರವಾಧ್ಯಕ್ಷ ಜ. ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳ ಆಶೀರ್ವಾದ ಹಾಗೂ ಅಧ್ಯಕ್ಷ ಶಿವಕುಮಾರ ಎಚ್. ಪಾಟೀಲ ಅವರ ಮಾರ್ಗದರ್ಶನದಲ್ಲಿ ಡಿಡಿಪಿಐ ಆರ್.ಎಸ್. ಬುರಡಿ, ಬಿಇಒ, ಮುಖ್ಯೋಪಾಧ್ಯಾಯರು ಹಾಗೂ ಪ್ರತಿಷ್ಠಾನದ ಪದಾಧಿಕಾರಿಗಳ ಸಹಕಾರದೊಂದಿಗೆ ಈ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ಗದಗ ನಗರ ಹಾಗೂ ತಾಲೂಕಿನ 30 ಸರ್ಕಾರಿ ಪ್ರೌಢಶಾಲೆಗಳಿಗೆ ಭೇಟಿ ನೀಡಿದ ಪ್ರತಿಷ್ಠಾನದ ಪದಾಧಿಕಾರಿಗಳು, ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಮೊದಲ ಐದು ಸ್ಥಾನ ಪಡೆದ ಸುಮಾರು 150 ವಿದ್ಯಾರ್ಥಿಗಳಿಗೆ ನಗದು ಬಹುಮಾನ, ಪ್ರಶಂಸಾ ಪತ್ರ ಹಾಗೂ ಕಾಲೇಜು ಬ್ಯಾಗ್ ವಿತರಿಸಿ ಅಭಿನಂದಿಸಿದರು.
ಸಿದ್ಧಲಿಂಗನಗರ, ಆಶ್ರಯ ಕಾಲೋನಿ, ರಾಜೀವಗಾಂಧಿ ನಗರ, ಬೆಟಗೇರಿ ಗಾಂಧಿನಗರ ಹಾಗೂ ಗದುಗಿನ ಉರ್ದು ಸರ್ಕಾರಿ ಪ್ರೌಢಶಾಲೆಗಳಲ್ಲಿ ನಡೆದ ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಶಾಲೆಗಳ ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ಪ್ರತಿಷ್ಠಾನದ ಪದಾಧಿಕಾರಿಗಳು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
“ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳ ಸಾಧನೆಯನ್ನು ಗುರುತಿಸಿ ಗೌರವಿಸುವುದು ಅವರಲ್ಲಿ ಆತ್ಮವಿಶ್ವಾಸ ಹೆಚ್ಚಿಸುವುದರ ಜೊತೆಗೆ ಇತರ ವಿದ್ಯಾರ್ಥಿಗಳಿಗೂ ಸ್ಫೂರ್ತಿಯಾಗುತ್ತದೆ. ಶಿಕ್ಷಣ ಸೇವೆಯ ಮೂಲಕ ಸಮಾಜ ನಿರ್ಮಾಣಕ್ಕೆ ಪ್ರತಿಷ್ಠಾನ ಸದಾ ಬದ್ಧವಾಗಿದೆ.”
– ಸುಭಾಶ್ಚಂದ್ರ ಬೆಟದೂರ, ಕಾರ್ಯದರ್ಶಿ, ಬಿ.ಜಿ. ಅಣ್ಣಿಗೇರಿ ಪ್ರತಿಷ್ಠಾನ



