ವಿಜಯಸಾಕ್ಷಿ ಸುದ್ದಿ, ಗದಗ: ಉದ್ಯಮ ಹಾಗೂ ಸಮಾಜಸೇವಾ ಕ್ಷೇತ್ರದಲ್ಲಿ ಸಲ್ಲಿಸಿರುವ ಗಮನಾರ್ಹ ಸೇವೆಯನ್ನು ಗುರುತಿಸಿ ಗದುಗಿನ ಮಹಿಳಾ ಸಾಧಕಿ ಶ್ರೀಮತಿ ಸುವರ್ಣಾ ಎಸ್. ಮದರಿಮಠ ಅವರಿಗೆ ಪ್ರತಿಷ್ಠಿತ ‘ನಾರೀ ಸಮ್ಮಾನ್-2026’ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.
ಮೀಡಿಯಾ ವಿಷನ್ ಬೆಂಗಳೂರು ಸಂಸ್ಥೆ, ಝೀ ಕನ್ನಡ ನ್ಯೂಸ್ ಮಾಧ್ಯಮ ಸಹಭಾಗಿತ್ವದಲ್ಲಿ ಬೆಂಗಳೂರಿನ ರೆಸಿಡೆನ್ಸಿ ರಸ್ತೆಯ ದಿ ಚಾನ್ಸೆರಿ ಪೆವಿಲಿಯನ್ ಸಭಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 14 ಮಹಿಳಾ ಸಾಧಕಿಯರೊಂದಿಗೆ ಸುವರ್ಣಾ ಮದರಿಮಠ ಅವರಿಗೂ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಲೋಕಸಭಾ ಸದಸ್ಯೆ ಪ್ರಭಾ ಮಲ್ಲಿಕಾರ್ಜುನ, ಕೆಪಿಸಿಸಿ ಮಹಿಳಾ ವಿಭಾಗದ ಅಧ್ಯಕ್ಷೆ ಸೌಮ್ಯಾ ರೆಡ್ಡಿ, ಶಾಸಕ ಟಿ.ಎ. ಶರವಣ ಹಾಗೂ ಚಲನಚಿತ್ರ ನಟ ಅನಿರುದ್ಧ ಜತಕರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಿದ ಗಣ್ಯರು, ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರು ಸಾಧಿಸುತ್ತಿರುವ ಯಶಸ್ಸು ಸಮಾಜಕ್ಕೆ ಪ್ರೇರಣೆಯಾಗಿದ್ದು, ಇಂತಹ ಸಾಧಕರನ್ನು ಗುರುತಿಸಿ ಗೌರವಿಸುವುದು ಹೆಮ್ಮೆಯ ಸಂಗತಿ ಎಂದು ಅಭಿಪ್ರಾಯಪಟ್ಟರು.
ಸಮಾಜಮುಖಿ ಕಾರ್ಯ, ನಾಯಕತ್ವ ಹಾಗೂ ಸಮಾಜದ ಅಭಿವೃದ್ಧಿಗೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ ಸುವರ್ಣಾ ಮದರಿಮಠ ಅವರನ್ನು ಈ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಆಯೋಜಕರು ತಿಳಿಸಿದರು.
ಪ್ರಶಸ್ತಿ ಪಡೆದ ಸುವರ್ಣಾ ಮದರಿಮಠ ಅವರನ್ನು ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಗಣ್ಯರು ಹಾಗೂ ಅಭಿಮಾನಿಗಳು ಅಭಿನಂದಿಸಿದ್ದಾರೆ.



