ರಾಯಚೂರು: ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ನವ ವಿವಾಹಿತ ವಕೀಲನೊಬ್ಬ ಹೂಳಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಉಮಲೂಟಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಉಮಲೂಟಿ ಗ್ರಾಮದ 30 ವರ್ಷದ ಹನೀಫ್ ಎಂದು ಗುರುತಿಸಲಾಗಿದೆ. ಹನೀಫ್ ಅವರು ವಕೀಲರಾಗಿದ್ದು, ಎರಡು ತಿಂಗಳ ಹಿಂದಷ್ಟೇ ವಿವಾಹವಾಗಿದ್ದರು.
ಗ್ರಾಮದ ಸ್ನೇಹಿತರೊಂದಿಗೆ ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಹೊಂಡದಲ್ಲಿ ಹೂಳು ಇರುವ ಬಗ್ಗೆ ಅರಿವಿಲ್ಲದೆ ಈಜಲು ನೀರಿಗೆ ಇಳಿದ ಹನೀಫ್, ಹೂಳಿನಲ್ಲಿ ಸಿಲುಕಿಕೊಂಡಿದ್ದಾರೆ. ಹೊರಬರಲು ಸಾಧ್ಯವಾಗದೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ವಿಷಯ ತಿಳಿದ ಗ್ರಾಮಸ್ಥರು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಹೊರತೆಗೆದಿದ್ದಾರೆ. ಘಟನೆ ಸಂಬಂಧ ತುರ್ವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಿಂಧನೂರು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ನವ ವಿವಾಹಿತನ ಸಾವಿನಿಂದ ಕುಟುಂಬಸ್ಥರು ಹಾಗೂ ಗ್ರಾಮದಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ.



