ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಬಾಲ ವಿನಾಯಕ ವಿದ್ಯಾನಿಕೇತನ (ಬಿವಿವಿ) ಶಾಲೆಯ ಹಳೆಯ ವಿದ್ಯಾರ್ಥಿನಿ ಕುಮಾರಿ ಪ್ರಿಯದರ್ಶಿನಿ ಹಿರೇಮಠ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ)ಗೆ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಶಾಲೆಯ ವತಿಯಿಂದ ಅಭಿನಂದನಾ ಸಮಾರಂಭ ಏರ್ಪಡಿಸಿ ಸನ್ಮಾನಿಸಲಾಯಿತು.
ಶಾಲೆಯ ಆಡಳಿತ ಮಂಡಳಿ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಿಯದರ್ಶಿನಿ ಅವರನ್ನು ಸನ್ಮಾನಿಸಿ ಶುಭ ಹಾರೈಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರಿಯದರ್ಶಿನಿ ಹಿರೇಮಠ, ಶಾಲೆಯ ಆಡಳಿತ ಮಂಡಳಿಯ ಪ್ರೋತ್ಸಾಹ, ಶಿಕ್ಷಕರ ಮಾರ್ಗದರ್ಶನ, ಶಾಲೆಯಲ್ಲಿ ದೊರೆತ ಉತ್ತಮ ಸಂಸ್ಕಾರ ಹಾಗೂ ನಿರಂತರ ಪರಿಶ್ರಮವೇ ತಮ್ಮ ಯಶಸ್ಸಿನ ಹಿಂದಿನ ಪ್ರಮುಖ ಕಾರಣಗಳಾಗಿವೆ. ಪರೀಕ್ಷೆಯ ಸಮಯದಲ್ಲಿ ಮಾತ್ರ ಓದುವುದಕ್ಕಿಂತ ಪ್ರತಿದಿನದ ಶಿಸ್ತಿನ ಅಧ್ಯಯನವೇ ದೊಡ್ಡ ಸಾಧನೆಗೆ ದಾರಿ ಮಾಡಿಕೊಡುತ್ತದೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಶಾಲೆಯ ನಿರ್ದೇಶಕ ವಿನಾಯಕ ಆರ್. ಮಾತನಾಡಿ, ವಿದ್ಯಾರ್ಥಿಗಳ ಸಾಧನೆಯೇ ಶಿಕ್ಷಕರ ನಿಜವಾದ ಸಾಧನೆಯಾಗಿದೆ. ಕಲಿಕೆಯಲ್ಲಿ ನಿರಂತರತೆ, ಶ್ರದ್ಧೆ, ಪ್ರಾಮಾಣಿಕತೆ, ಶಿಸ್ತು ಹಾಗೂ ಉತ್ತಮ ಸಂಸ್ಕಾರ ಬೆಳೆಸಿಕೊಂಡರೆ ಯಶಸ್ಸು ಖಚಿತ. ಈ ಸನ್ಮಾನ ಕೇವಲ ಒಬ್ಬ ವಿದ್ಯಾರ್ಥಿನಿಯ ಸಾಧನೆಗೆ ಸೀಮಿತವಲ್ಲ, ಇತರ ವಿದ್ಯಾರ್ಥಿಗಳಿಗೂ ಪ್ರೇರಣೆಯಾಗಲಿ ಎಂದು ಆಶಿಸಿದರು.
ಕಾರ್ಯಕ್ರಮದಲ್ಲಿ ಶಾಲೆಯ ಪ್ರಾಚಾರ್ಯ ವಿ.ಎಂ. ಅಡ್ನೂರ, ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಈ ವೇಳೆ ಸಾಧನೆಗೈದ ವಿದ್ಯಾರ್ಥಿನಿಗೆ ಸನ್ಮಾನಿಸಿ ಸ್ಮರಣಿಕೆ ಹಾಗೂ ಕಿರುಕಾಣಿಕೆ ನೀಡಿ ಗೌರವಿಸಲಾಯಿತು.
ಹಳೆಯ ವಿದ್ಯಾರ್ಥಿನಿಯ ಪರಿಚಯವನ್ನು ಗುರುಮಾತೆ ಸಿಂಧು ಸಾಮ್ರಾಣಿ ಮಾಡಿಕೊಟ್ಟರು. ರೇಣುಕಾ ಈರಗಾರ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.



