ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜೌರಿ ವಲಯದಲ್ಲಿರುವ ನಿಯಂತ್ರಣ ರೇಖೆ (ಎಲ್ಒಸಿ) ಬಳಿ ಶುಕ್ರವಾರ ರಾತ್ರಿ ಉಗ್ರರು ಮತ್ತು ಭಾರತೀಯ ಭದ್ರತಾ ಪಡೆಗಳ ನಡುವೆ ಸುಮಾರು ಎರಡು ಗಂಟೆಗಳ ಕಾಲ ತೀವ್ರ ಗುಂಡಿನ ಚಕಮಕಿ ನಡೆದಿದೆ. ಆಪರೇಷನ್ ಸಿಂಧೂರ್ ಬಳಿಕ ಗಡಿಯಲ್ಲಿ ನಡೆದ ಮೊದಲ ಪ್ರಮುಖ ಗುಂಡಿನ ದಾಳಿಯಿದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಾಹಿತಿಯ ಪ್ರಕಾರ, ಉಗ್ರರು ಗಡಿ ದಾಟಿ ಭಾರತಕ್ಕೆ ಒಳನುಸುಳಲು ಯತ್ನಿಸಿದ್ದು, ಗಡಿ ಕಾಯುತ್ತಿದ್ದ ಭಾರತೀಯ ಸೇನಾ ಪಡೆಗಳು ತಕ್ಷಣ ಪ್ರತಿಕ್ರಿಯೆ ನೀಡಿ ಅವರ ಪ್ರಯತ್ನವನ್ನು ವಿಫಲಗೊಳಿಸಿವೆ. ಶನಿವಾರ ಬೆಳಿಗ್ಗೆ ಸುಮಾರು 9.50ರ ವೇಳೆಗೆ ಪಾಕಿಸ್ತಾನದ ಕಡೆಯಿಂದ ಅಪ್ರಚೋದಿತ ಗುಂಡಿನ ದಾಳಿ ನಡೆದಿದ್ದು, ಭಾರತೀಯ ಸೇನೆಯೂ ಸಮರ್ಪಕ ಪ್ರತಿದಾಳಿ ನಡೆಸಿದೆ.
ಈ ಗುಂಡಿನ ಚಕಮಕಿಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಘಟನೆಯ ಬಳಿಕ ಶನಿವಾರ ಬೆಳಿಗ್ಗೆಯಿಂದಲೇ ಸೇನೆ ಮತ್ತು ಭದ್ರತಾ ಪಡೆಗಳು ವ್ಯಾಪಕ ಶೋಧ ಕಾರ್ಯಾಚರಣೆ ಆರಂಭಿಸಿದ್ದು, ರಾಜೌರಿ ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಉಗ್ರರ ಚಲನವಲನದ ಮೇಲೆ ನಿರಂತರ ನಿಗಾ ಇರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಭದ್ರತಾ ತಜ್ಞರ ಪ್ರಕಾರ, ಪ್ರಾದೇಶಿಕ ಪರಿಸ್ಥಿತಿಯಿಂದ ಗಮನವನ್ನು ಬೇರೆಡೆಗೆ ಸೆಳೆಯುವ ಉದ್ದೇಶದಿಂದ ಪಾಕಿಸ್ತಾನ ಎಲ್ಒಸಿ ಉದ್ದಕ್ಕೂ ಗುಂಡಿನ ದಾಳಿಗೆ ಮುಂದಾಗಿರುವ ಸಾಧ್ಯತೆಯಿದೆ.
ಗಮನಾರ್ಹವಾಗಿ, 2025ರ ಏಪ್ರಿಲ್ 22ರಂದು ಕಾಶ್ಮೀರದ ಪಹಲ್ಗಾಮ್ನ ಬೈಸರನ್ ಕಣಿವೆಯಲ್ಲಿ ನಡೆದ ಉಗ್ರ ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟಿದ್ದರು. ಇದಕ್ಕೆ ಪ್ರತಿಯಾಗಿ ಭಾರತ ಮೇ 7ರಿಂದ 10ರವರೆಗೆ ‘ಆಪರೇಷನ್ ಸಿಂಧೂರ್’ ನಡೆಸಿತ್ತು.
ಸುಮಾರು 22 ನಿಮಿಷಗಳ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆ ಎಲ್ಒಸಿ ದಾಟದೇ ಒಂಬತ್ತು ಉಗ್ರರ ನೆಲೆಗಳ ಮೇಲೆ ನಿಖರ ಕ್ಷಿಪಣಿ ದಾಳಿ ನಡೆಸಿತ್ತು. ಈ ವೇಳೆ 26 ನಿಖರ ಕ್ಷಿಪಣಿಗಳನ್ನು ಬಳಸಲಾಗಿದ್ದು, ಮುರಿದ್ಕೆಯಲ್ಲಿದ್ದ ಲಷ್ಕರ್-ಎ-ತೈಬಾ ಕೇಂದ್ರ ಹಾಗೂ ಬಹಾವಲ್ಪುರದಲ್ಲಿದ್ದ ಜೈಶ್-ಎ-ಮೊಹಮ್ಮದ್ ಮುಖ್ಯ ಕಚೇರಿಗಳನ್ನು ಗುರಿಯಾಗಿಸಿ ಧ್ವಂಸಗೊಳಿಸಲಾಗಿತ್ತು.



