ವಿಜಯಸಾಕ್ಷಿ ಸುದ್ದಿ, ಮುಳಗುಂದ: ಬೆಳೆಗಳಲ್ಲಿ ರೋಗಬಾಧೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಿ ಉತ್ತಮ ಇಳುವರಿ ಪಡೆಯಲು ಬಿತ್ತನೆಗೂ ಮುನ್ನ ಬೀಜೋಪಚಾರ ಮಾಡುವುದು ಅತ್ಯಗತ್ಯ ಎಂದು ಕೃಷಿ ವಿಜ್ಞಾನಿ ಡಾ. ಸಿ.ಎಂ. ರಫಿ ಹೇಳಿದರು.
ಪಟ್ಟಣದ ಸಮೀಪದ ಚಿಕ್ಕಹಂದಿಗೋಳ ಹಾಗೂ ಕುರ್ತಕೋಟಿ ಗ್ರಾಮದ ರೈತರ ಜಮೀನುಗಳಿಗೆ ಧಾರವಾಡ ಕೃಷಿ ವಿಶ್ವವಿದ್ಯಾಲಯದ ವಿಜ್ಞಾನಿಗಳ ತಂಡ ಹಾಗೂ ಗದಗ ಕೃಷಿ ಇಲಾಖೆಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಹೆಸರು ಬೆಳೆಯಲ್ಲಿ ಕಾಣಿಸಿಕೊಂಡಿರುವ ಹಳದಿ ರೋಗವನ್ನು ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು.
ಪ್ರತಿಯೊಬ್ಬ ರೈತರೂ ಬಿತ್ತನೆಗೂ ಮುನ್ನ ಕಡ್ಡಾಯವಾಗಿ ಬೀಜೋಪಚಾರ ಮಾಡಿ ಬಿತ್ತನೆ ನಡೆಸಬೇಕು. ಇದರಿಂದ ರೋಗಬಾಧೆ ನಿಯಂತ್ರಣವಾಗುವುದರ ಜೊತೆಗೆ ಉತ್ತಮ ಗುಣಮಟ್ಟದ ಇಳುವರಿಯನ್ನೂ ಪಡೆಯಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ರೈತರು ಬಿತ್ತನೆ ಆರಂಭಿಸುವ ಮೊದಲು ಸಮೀಪದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಬೆಳೆ ಸಂರಕ್ಷಣೆ ಹಾಗೂ ಬಿತ್ತನೆ ಪೂರ್ವ ಮುಂಜಾಗ್ರತಾ ಕ್ರಮಗಳ ಕುರಿತು ತಾಂತ್ರಿಕ ಮಾಹಿತಿ ಪಡೆದು ಕೃಷಿ ಚಟುವಟಿಕೆ ಕೈಗೊಂಡರೆ ನಷ್ಟವನ್ನು ತಪ್ಪಿಸಿ ಉತ್ತಮ ಉತ್ಪಾದನೆ ಸಾಧಿಸಬಹುದು ಎಂದು ಸಲಹೆ ನೀಡಿದರು.
ಪರಿಶೀಲನಾ ತಂಡದಲ್ಲಿ ಡಾ. ಸಂಗನಶೆಟ್ಟಿ, ಡಾ. ಪ್ರಭಾವತಿ, ಗದಗ ಕೃಷಿ ಇಲಾಖೆಯ ಉಪನಿರ್ದೇಶಕಿ ಸ್ಪೂರ್ತಿ ಜಿ.ಎಸ್., ಸಹಾಯಕ ಕೃಷಿ ನಿರ್ದೇಶಕ ಮಲ್ಲಯ್ಯ ಕೊರವಣ್ಣವರ, ಎಂ.ಎಸ್. ಕುಲಕರ್ಣಿ, ಕೃಷಿ ಅಧಿಕಾರಿಗಳಾದ ಬಸವರಾಜೇಶ್ವರಿ ಸಜ್ಜನವರ, ರಾಜೇಶ್ವರಿ ಚಿನಿವಾಲರ ಹಾಗೂ ರೈತರು ಉಪಸ್ಥಿತರಿದ್ದರು.



