ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಜಕ್ಕಲಿ–ಅಬ್ಬಿಗೇರಿ ಸಂಪರ್ಕ ರಸ್ತೆಯ ದುಸ್ಥಿತಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕೇವಲ ಐದು ಕಿಲೋಮೀಟರ್ ಕ್ರಮಿಸಲು ಅರ್ಧ ಗಂಟೆ ಬೇಕಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ತಕ್ಷಣ ಮರುಡಾಂಬರೀಕರಣ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಒಂದೊಮ್ಮೆ ಸುಗಮ ಸಂಚಾರಕ್ಕೆ ಅನುಕೂಲವಾಗಿದ್ದ ಈ ಡಾಂಬರು ರಸ್ತೆ ಇದೀಗ ಗುಂಡಿಗಳು, ಜಲ್ಲಿಕಲ್ಲುಗಳು ಹಾಗೂ ಧೂಳಿನ ರಾಶಿಯಿಂದ ಕೂಡಿದೆ. ರಸ್ತೆಯುದ್ದಕ್ಕೂ ಡಾಂಬರು ಕಿತ್ತು ಹೋಗಿದ್ದು, ಅಲ್ಲಲ್ಲಿ ಆಳವಾದ ಗುಂಡಿಗಳು ನಿರ್ಮಾಣವಾಗಿವೆ. ಇದರಿಂದ ವಾಹನ ಸವಾರರು ಜೀವ ಭಯದಲ್ಲೇ ಸಂಚರಿಸುವಂತಾಗಿದೆ.
ಜಕ್ಕಲಿ, ಅಬ್ಬಿಗೇರಿ ಸೇರಿದಂತೆ ಯರೇಬೇಲೇರಿ, ಕುರಡಗಿ, ಕಿರಟಗೇರಿ, ಹುಯಿಲಗೋಳ, ಚಿಕ್ಕೊಪ್ಪ, ಹಿರೇಕೊಪ್ಪ ಹಾಗೂ ಗದಗ ನಗರಕ್ಕೆ ತೆರಳುವ ನೂರಾರು ಜನರಿಗೆ ಇದೇ ಪ್ರಮುಖ ಸಂಪರ್ಕ ಮಾರ್ಗವಾಗಿದೆ. ವ್ಯಾಪಾರಸ್ಥರು ಹಾಗೂ ಗ್ರಾಮಸ್ಥರು ಪ್ರತಿನಿತ್ಯ ಈ ರಸ್ತೆಯನ್ನೇ ಅವಲಂಬಿಸಿದ್ದು, ರಸ್ತೆ ಹಾಳಾಗಿರುವುದರಿಂದ ಸಂಚಾರ ತೀವ್ರ ಸಮಸ್ಯೆಯಾಗಿದೆ.
ರಸ್ತೆಯ ಅವ್ಯವಸ್ಥೆಯಿಂದ ವಾಹನಗಳ ಬಿಡಿಭಾಗಗಳು ಹಾಳಾಗುತ್ತಿದ್ದು, ವಾಹನ ದುರಸ್ತಿಗೆ ಹೆಚ್ಚುವರಿ ಹಣ ಖರ್ಚು ಮಾಡುವಂತಾಗಿದೆ. ಮಳೆಗಾಲದಲ್ಲಿ ಗುಂಡಿಗಳಲ್ಲಿ ನೀರು ನಿಂತು ಅಪಘಾತಗಳ ಅಪಾಯ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
ವರ್ಷಗಳಿಂದ ರಸ್ತೆ ದುರಸ್ತಿಯಾಗದಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಗಮನಹರಿಸದಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ. ಇನ್ನಾದರೂ ನಿರ್ಲಕ್ಷ್ಯ ಬಿಟ್ಟು ಜಕ್ಕಲಿ–ಅಬ್ಬಿಗೇರಿ ರಸ್ತೆಯ ಮರುಡಾಂಬರೀಕರಣಕ್ಕೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.



