ಲಕ್ನೋ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಬಿ.ಟೆಕ್ ಗೋಲ್ಡ್ ಮೆಡಲಿಸ್ಟ್ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಸರ್ಕಾರಿ ಉದ್ಯೋಗಕ್ಕಾಗಿ ಹಲವು ಬಾರಿ ಪ್ರಯತ್ನಿಸಿದರೂ ಯಶಸ್ಸು ಸಿಗದ ಹಿನ್ನೆಲೆಯಲ್ಲಿ ಮನನೊಂದಿದ್ದ ಯುವಕ, ಡೆತ್ನೋಟ್ ಬರೆದು ತಂದೆಗೆ ಕ್ಷಮೆಯಾಚಿಸಿ ಜೀವತ್ಯಾಗ ಮಾಡಿದ್ದಾನೆ.
ಮೃತನನ್ನು 23 ವರ್ಷದ ಆನಂದ್ ಕುಮಾರ್ ಎಂದು ಗುರುತಿಸಲಾಗಿದೆ. 2024ರಲ್ಲಿ ಕಾನ್ಪುರದ ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬಿ.ಟೆಕ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಉತ್ತರ ಪ್ರದೇಶ ಮಟ್ಟದಲ್ಲಿ ಮೂರನೇ ರ್ಯಾಂಕ್ ಗಳಿಸಿದ್ದ. ಈ ಸಾಧನೆಗಾಗಿ ನಡೆದ ಕಾಲೇಜಿನ ಪದವಿ ಪ್ರದಾನ ಸಮಾರಂಭದಲ್ಲಿ ಉತ್ತರ ಪ್ರದೇಶದ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಅವರಿಂದ ಚಿನ್ನದ ಪದಕ ಸ್ವೀಕರಿಸಿದ್ದ ಎನ್ನಲಾಗಿದೆ.
ಘಟನೆ ನಡೆದ ವೇಳೆ ಮನೆಯಲ್ಲಿ ಆನಂದ್ ಒಬ್ಬರೇ ಇದ್ದರು. ಕುಟುಂಬದ ಸದಸ್ಯರು ಹಿರಿಯ ಸಹೋದರನ ವಿವಾಹ ನಿಶ್ಚಯದ ಹಿನ್ನೆಲೆಯಲ್ಲಿ ಸ್ವಗ್ರಾಮ ಬಿಹಾರಕ್ಕೆ ತೆರಳಿದ್ದರು. ಈ ವೇಳೆ ಮನೆ ಕೆಲಸದಾಕೆ ಬಂದು ಬಾಗಿಲು ತಟ್ಟಿದರೂ ಯಾವುದೇ ಪ್ರತಿಕ್ರಿಯೆ ಸಿಗದ ಕಾರಣ ನೆರೆಹೊರೆಯವರಿಗೆ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಮನೆ ಬಾಗಿಲು ತೆರೆಯಿಸಿ ಪರಿಶೀಲನೆ ನಡೆಸಿದಾಗ ಆನಂದ್ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಪೊಲೀಸರು ಕೊಠಡಿಯಲ್ಲಿ ಐದು ಸಾಲುಗಳ ಡೆತ್ನೋಟ್ ಪತ್ತೆಹಚ್ಚಿದ್ದಾರೆ. ಅದರಲ್ಲಿ ಇಂಗ್ಲಿಷ್ನಲ್ಲಿ, “ಸಾರಿ ಅಪ್ಪ… ಸರ್ಕಾರಿ ಉದ್ಯೋಗಕ್ಕಾಗಿ ಸುಮಾರು 50 ಬಾರಿ ಪ್ರಯತ್ನಿಸಿದೆ. ಆದರೆ ನನಗೆ ಯಶಸ್ಸು ಸಿಗಲಿಲ್ಲ. ದಯವಿಟ್ಟು ನನ್ನನ್ನು ಕ್ಷಮಿಸಿ” ಎಂದು ಬರೆದಿರುವುದಾಗಿ ತಿಳಿದುಬಂದಿದೆ.
ಈ ಕುರಿತು ಮಾತನಾಡಿರುವ ಮೃತನ ತಂದೆ ರಾಜಕುಮಾರ್, ಆನಂದ್ ಪದವಿ ಪೂರ್ಣಗೊಳಿಸಿದ ಬಳಿಕ ಒಂದು ವರ್ಷದ ಅಪ್ರೆಂಟಿಸ್ಶಿಪ್ ಮುಗಿಸಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಯಲ್ಲಿ ತೊಡಗಿದ್ದನು. ರೈಲ್ವೆ, ಎಸ್ಎಸ್ಸಿ, ಬ್ಯಾಂಕ್ ಹಾಗೂ ಶಿಕ್ಷಣ ಇಲಾಖೆಯ ವಿವಿಧ ನೇಮಕಾತಿ ಪರೀಕ್ಷೆಗಳನ್ನು ಬರೆದಿದ್ದರೂ ಎಲ್ಲಿಯೂ ಆಯ್ಕೆಯಾಗಿರಲಿಲ್ಲ. ಇದರಿಂದ ಕಳೆದ ಕೆಲವು ತಿಂಗಳುಗಳಿಂದ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ಎಂದು ತಿಳಿಸಿದ್ದಾರೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಡೆತ್ನೋಟ್ ಹಾಗೂ ಇತರ ಸಾಕ್ಷ್ಯಾಧಾರಗಳ ಆಧಾರದ ಮೇಲೆ ತನಿಖೆ ಮುಂದುವರಿಸಿದ್ದಾರೆ.



