ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಲಕ್ಷ್ಮೇಶ್ವರ ಪಟ್ಟಣದ ಚರಂಡಿ ನೀರು ಲಂಡಿಹಳ್ಳದ ಮೂಲಕ ಹರಿದು ಅಡರಕಟ್ಟಿ ಹಾಗೂ ಮಂಜಲಾಪುರ ಗ್ರಾಮದ ರೈತರ ಜಮೀನುಗಳಿಗೆ ನುಗ್ಗುತ್ತಿರುವ ಪರಿಣಾಮ ಸುಮಾರು 150 ಎಕರೆ ಫಲವತ್ತಾದ ಕೃಷಿಭೂಮಿ ಹಾನಿಗೊಳಗಾಗಿದ್ದು, 300ಕ್ಕೂ ಹೆಚ್ಚು ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ರೈತರು ಸೋಮವಾರ ಪುರಸಭೆ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ರೈತ ಮುಖಂಡ ಹಾಗೂ ವಕೀಲ ರವಿಕಾಂತ ಅಂಗಡಿ, ಪಟ್ಟಣದ ಕಲುಷಿತ ಚರಂಡಿ ನೀರು ಕೃಷಿ ಭೂಮಿಗೆ ಹರಿಯುತ್ತಿರುವುದರಿಂದ ಉಳುಮೆ ನಡೆಸಲು ಸಾಧ್ಯವಾಗುತ್ತಿಲ್ಲ. ರೈತರ ಜೀವನಾಧಾರವಾಗಿರುವ ಫಲವತ್ತಾದ ಭೂಮಿ ಹಾಳಾಗುತ್ತಿದ್ದು, ಜಿಲ್ಲಾಡಳಿತ ಹಾಗೂ ಸಂಬಂಧಿಸಿದ ಇಲಾಖೆ ಈ ಗಂಭೀರ ಸಮಸ್ಯೆಯನ್ನು ತುರ್ತಾಗಿ ಪರಿಗಣಿಸಿ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ಒಂದು ವಾರದೊಳಗೆ ಜಿಲ್ಲಾಧಿಕಾರಿಗಳು, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ರೈತರೊಂದಿಗೆ ಸಭೆ ನಡೆಸಿ ಸಮಸ್ಯೆಗೆ ಸೂಕ್ತ ಪರಿಹಾರ ಕಂಡುಕೊಳ್ಳಬೇಕು. ಇಲ್ಲವಾದಲ್ಲಿ ಅಡರಕಟ್ಟಿ ಗ್ರಾಮದಿಂದ ಗದಗ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪಾದಯಾತ್ರೆ ನಡೆಸಿ, ರೈತರು ಸೇರಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕುವ ಮೂಲಕ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ರೈತ ಮುಖಂಡರಾದ ಮಂಜುನಾಥ ಮಾಗಡಿ, ಬಿ.ಟಿ. ಚಂದ್ರಶೇಖರ, ಬಸವರಾಜ ಹೀರೆಮನಿ, ಮುತ್ತಣ್ಣ ಗಡೆಪ್ಪನವರ, ಸಿದ್ದಣ್ಣ ಹವಳದ, ನಿಂಗಪ್ಪ ಪ್ಯಾಟಿ, ಚನ್ನಬಸಪ್ಪ ಹಳೆಮನಿ, ರಾಮಣ್ಣ ಚಿಕ್ಕಣ್ಣವರ, ಗಂಗನಗೌಡ್ರ ಪಾಟೀಲ, ಮಾಂತೇಶ ಹವಳದ, ಯಲ್ಲಪ್ಪ ರೊಳ್ಳಿ ಸೇರಿದಂತೆ ಅಡರಕಟ್ಟಿ ಹಾಗೂ ಮಂಜಲಾಪುರ ಗ್ರಾಮದ ರೈತರು ಉಪಸ್ಥಿತರಿದ್ದರು.
“ಒಂದು ವಾರದೊಳಗೆ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸದಿದ್ದರೆ ಅಡರಕಟ್ಟಿಯಿಂದ ಗದಗ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ನಡೆಸಿ ಉಗ್ರ ಹೋರಾಟ ಹಮ್ಮಿಕೊಳ್ಳುತ್ತೇವೆ.”
– ರವಿಕಾಂತ ಅಂಗಡಿ, ರೈತ ಮುಖಂಡ ಹಾಗೂ ವಕೀಲ



