ಮೈಸೂರು: ಖಾಸಗಿ ಬಸ್ ನಿಲ್ದಾಣದ ಬಳಿ ಯುವತಿಯನ್ನು ಅಪಹರಿಸಿ ಲಾಡ್ಜ್ಗೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಟಿ. ನರಸೀಪುರ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ 24 ಗಂಟೆಗಳೊಳಗೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣ ಮೈಸೂರು ಜಿಲ್ಲೆಯಲ್ಲಷ್ಟೇ ಅಲ್ಲ, ರಾಜ್ಯಾದ್ಯಂತ ಆತಂಕ ಮೂಡಿಸಿದೆ.
ಪಶ್ಚಿಮ ಬಂಗಾಳ ಮೂಲದ ಕಲ್ಪನಾ ಮುಂಡಾ ಎಂಬ ಯುವತಿಯನ್ನು ಟಿ. ನರಸೀಪುರ ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಸಮೀಪ ಆರೋಪಿಗಳು ಅಪಹರಿಸಿದ್ದಾರೆ ಎನ್ನಲಾಗಿದೆ. ಬಳಿಕ ಚಾಮರಾಜನಗರ ಜಿಲ್ಲೆಯ ಸಂತೇಮರಹಳ್ಳಿ ಬಳಿಯ ಲಾಡ್ಜ್ಗೆ ಕರೆದೊಯ್ದು ಕಿರಣ್, ಕಿಶೋರ್ ಹಾಗೂ ರಿಯಾನ್ ಎಂಬ ಮೂವರು ಆರೋಪಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಪ್ರಕರಣದ ಮಾಹಿತಿ ಸಿಕ್ಕ ತಕ್ಷಣ ತನಿಖೆ ಆರಂಭಿಸಿದ ಟಿ. ನರಸೀಪುರ ಪೊಲೀಸರು ತಾಂತ್ರಿಕ ಮಾಹಿತಿ ಹಾಗೂ ಇತರೆ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ. ಬಂಧಿತ ಮೂವರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಘಟನೆ ಸಂಬಂಧ ಟಿ. ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ವಿರುದ್ಧ ಕಾನೂನು ಪ್ರಕ್ರಿಯೆ ಮುಂದುವರಿದಿದೆ. ಪೊಲೀಸರು ಪ್ರಕರಣದ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ.



