ಬೆಂಗಳೂರು: ಐಸಿಸ್ ಉಗ್ರ ಸಂಘಟನೆಗೆ ಯುವಕರನ್ನು ನೇಮಕ ಮಾಡಿಕೊಳ್ಳುವುದು, ಅಕ್ರಮವಾಗಿ ಹಣ ಸಂಗ್ರಹಣೆ ಹಾಗೂ ವರ್ಗಾವಣೆ ಮಾಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದ ತನಿಖೆಯನ್ನು ಜಾರಿ ನಿರ್ದೇಶನಾಲಯ (ಇಡಿ) ತೀವ್ರಗೊಳಿಸಿದೆ. ಇದರ ಭಾಗವಾಗಿ ಬೆಂಗಳೂರು ಸೇರಿದಂತೆ ಕರ್ನಾಟಕದ 8 ಸ್ಥಳಗಳಲ್ಲಿ ಮಂಗಳವಾರ ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದೆ.
ರಾಷ್ಟ್ರೀಯ ತನಿಖಾ ಸಂಸ್ಥೆ (NIA) ದಾಖಲಿಸಿರುವ ಎಫ್ಐಆರ್ ಆಧಾರದ ಮೇಲೆ ತನಿಖೆ ನಡೆಸುತ್ತಿರುವ ಇಡಿ ಅಧಿಕಾರಿಗಳು, ‘ಇಕ್ರಾ ವೆಲ್ಫೇರ್ ಟ್ರಸ್ಟ್’, ‘ಗೈಡೆನ್ಸ್ ಫಾರ್ ಮ್ಯಾನ್ಕೈಂಡ್’ ಸಂಸ್ಥೆಗಳು ಹಾಗೂ ಕೆಲವು ವ್ಯಕ್ತಿಗಳಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಐಸಿಸ್ ಸಂಘಟನೆಗೆ ಯುವಕರನ್ನು ಸೇರಿಸುವ ಸಂಚು ಪ್ರಕರಣದಲ್ಲಿ ಈಗಾಗಲೇ ಐವರು ಆರೋಪಿಗಳ ವಿರುದ್ಧ ಎನ್ಐಎ ಚಾರ್ಜ್ಶೀಟ್ ಸಲ್ಲಿಸಿದೆ. ಬಂಧಿತ ಆರೋಪಿಗಳು ಐಸಿಸ್ ಜೊತೆ ಸಂಪರ್ಕ ಹೊಂದಿದ್ದು, ಮುಸ್ಲಿಂ ಯುವಕರನ್ನು ಪ್ರಚೋದಿಸಿ ಉಗ್ರವಾದದತ್ತ ಸೆಳೆಯಲು ಸಂಚು ರೂಪಿಸಿದ್ದರು ಎಂದು ಎನ್ಐಎ ಆರೋಪಿಸಿದೆ.
ತನಿಖೆಯ ಪ್ರಕಾರ, ವ್ಯಕ್ತಿತ್ವ ವಿಕಸನದ ಹೆಸರಿನಲ್ಲಿ ನಡೆಸಲಾಗುತ್ತಿದ್ದ ‘ಇಕ್ರಾ ಕ್ಯಾಂಪ್’ ಹಾಗೂ ವಾರಾಂತ್ಯದ ‘ಕುರಾನ್ ಸರ್ಕಲ್’ ಕೂಟಗಳ ಮೂಲಕ ಯುವಕರಿಗೆ ತರಬೇತಿ ನೀಡಿ ಐಸಿಸ್ ಸಿದ್ಧಾಂತಗಳತ್ತ ಸೆಳೆಯಲಾಗುತ್ತಿತ್ತು ಎಂದು ಆರೋಪಿಸಲಾಗಿದೆ.
ಇದಲ್ಲದೆ, ಯುವಕರನ್ನು ವಿದೇಶಕ್ಕೆ ಕಳುಹಿಸಲು ಅಕ್ರಮ ಮಾರ್ಗಗಳ ಮೂಲಕ ಹಣ ಸಂಗ್ರಹಿಸಲಾಗುತ್ತಿತ್ತು. ಟರ್ಕಿ ಮಾರ್ಗವಾಗಿ ಸಿರಿಯಾಗೆ ಕಳುಹಿಸುವ ವ್ಯವಸ್ಥೆ ಮಾಡಲಾಗುತ್ತಿತ್ತು ಎಂಬ ಆರೋಪವೂ ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ಎನ್ಐಎ ತನ್ನ ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಿದೆ.
ದೇಶದಲ್ಲಿ ಸಿಎಎ ಮತ್ತು ಎನ್ಆರ್ಸಿ ವಿರೋಧಿ ಪ್ರತಿಭಟನೆಗಳು ನಡೆದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡು, ಸಾಮಾಜಿಕ ಜಾಲತಾಣಗಳ ಮೂಲಕ ಯುವಕರನ್ನು ಐಸಿಸ್ ಸಿದ್ಧಾಂತಗಳತ್ತ ಸೆಳೆಯುವ ಪ್ರಯತ್ನ ನಡೆದಿತ್ತು ಎಂದು ತನಿಖಾ ಸಂಸ್ಥೆಗಳು ಮಾಹಿತಿ ನೀಡಿವೆ.
ಯುವಕರನ್ನು ಸಿರಿಯಾಗೆ ಕಳುಹಿಸಲು ಕೆಲವು ವ್ಯಕ್ತಿಗಳು ಹಾಗೂ ಟ್ರಸ್ಟ್ಗಳ ಮೂಲಕ ಹಣ ಸಂಗ್ರಹಿಸಿ ವರ್ಗಾವಣೆ ಮಾಡಲಾಗುತ್ತಿತ್ತು ಎಂಬ ಆರೋಪದ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಹಣಕಾಸು ವ್ಯವಹಾರಗಳ ಬಗ್ಗೆ ಹೆಚ್ಚಿನ ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ತನಿಖೆ ಮುಂದುವರಿದಿದೆ.



