ರಾಯಚೂರು: ರಾಯಚೂರು ಜಿಲ್ಲೆಯಲ್ಲಿ ಬೀದಿ ನಾಯಿಗಳ ಅಟ್ಟಹಾಸ ದಿನದಿಂದ ದಿನಕ್ಕೆ ಭೀಕರ ಸ್ವರೂಪ ಪಡೆಯುತ್ತಿದ್ದು, ಒಂದೂವರೆ ವರ್ಷದ ಮಗು ಸಾವನ್ನಪ್ಪಿದ ಹಾಗೂ ನಾಲ್ಕು ವರ್ಷದ ಬಾಲಕ ಜೀವಕ್ಕಾಗಿ ಹೋರಾಡುತ್ತಿರುವ ಘಟನೆಗಳ ಬೆನ್ನಲ್ಲೇ ಇದೀಗ ಮಾನ್ವಿಯಲ್ಲಿ ಮೂರು ವರ್ಷದ ಬಾಲಕಿಯ ಮೇಲೆ ಬೀದಿ ನಾಯಿ ಕ್ರೂರವಾಗಿ ದಾಳಿ ನಡೆಸಿದೆ. ಇದೇ ವೇಳೆ ರಾಯಚೂರು ನಗರದ ಮಾರುಕಟ್ಟೆಯಲ್ಲೂ ವ್ಯಕ್ತಿಯೊಬ್ಬರು ನಾಯಿ ಕಡಿತಕ್ಕೊಳಗಾಗಿರುವುದು ಸಾರ್ವಜನಿಕರಲ್ಲಿ ಮತ್ತಷ್ಟು ಆತಂಕ ಮೂಡಿಸಿದೆ.
ಮಾನ್ವಿ ಪಟ್ಟಣದಲ್ಲಿ ಮನೆ ಮುಂದೆ ಆಟವಾಡುತ್ತಿದ್ದ ಮೂರು ವರ್ಷದ ಇನಾಯಾ ಮೇಲೆ ಏಕಾಏಕಿ ಬೀದಿ ನಾಯಿಯೊಂದು ಎರಗಿ ಮುಖ, ಕಣ್ಣಿನ ಭಾಗ ಹಾಗೂ ಎದೆಗೆ ತೀವ್ರವಾಗಿ ಕಚ್ಚಿ ಗಂಭೀರ ಗಾಯಗೊಳಿಸಿದೆ. ಮಗುವಿನ ಕಿರುಚಾಟ ಕೇಳಿ ಸ್ಥಳೀಯರು ಧಾವಿಸಿ ನಾಯಿಯನ್ನು ಓಡಿಸಿದ್ದು, ಇನ್ನೂ ಕೆಲ ಕ್ಷಣ ತಡವಾಗಿದ್ದರೆ ಅನಾಹುತ ಸಂಭವಿಸುತ್ತಿತ್ತು ಎಂದು ಕುಟುಂಬಸ್ಥರು ಕಣ್ಣೀರಿಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡ ಬಾಲಕಿ ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ಘಟನೆಗೆ ಸಂಬಂಧಿಸಿದಂತೆ ಬಾಲಕಿಯ ಕುಟುಂಬಸ್ಥರು ಹಾಗೂ ಸ್ಥಳೀಯರು ಮಾನ್ವಿ ಪುರಸಭೆ ಮತ್ತು ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೀದಿ ನಾಯಿಗಳ ಹಾವಳಿ ಬಗ್ಗೆ ಪದೇಪದೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಳ್ಳದ ನಿರ್ಲಕ್ಷ್ಯವೇ ಇಂತಹ ಘಟನೆಗಳಿಗೆ ಕಾರಣ ಎಂದು ಆರೋಪಿಸಿದ್ದಾರೆ.
ಇದರ ನಡುವೆ ರಾಯಚೂರು ನಗರದ ಸದರಬಜಾರ್ ರಸ್ತೆಯಲ್ಲೂ ಬೀದಿ ನಾಯಿಯೊಂದು ಮಾರುಕಟ್ಟೆಗೆ ಬಂದಿದ್ದ ಸತ್ಯಪ್ಪ (40) ಎಂಬುವರ ಮೇಲೆ ದಾಳಿ ನಡೆಸಿ ಕಚ್ಚಿದೆ. ಪತ್ನಿಯೊಂದಿಗೆ ಬೈಕ್ ನಿಲ್ಲಿಸುತ್ತಿದ್ದ ವೇಳೆ ನಡೆದ ದಾಳಿಯಲ್ಲಿ ಗಾಯಗೊಂಡ ಸತ್ಯಪ್ಪ ಅವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಜಿಲ್ಲೆಯಲ್ಲಿ ನಿರಂತರವಾಗಿ ಹೆಚ್ಚುತ್ತಿರುವ ಬೀದಿ ನಾಯಿಗಳ ದಾಳಿಯಿಂದ ಜನರು ರಸ್ತೆಯಲ್ಲಿ ಸಂಚರಿಸಲು ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಕೂಡಲೇ ನಾಯಿಗಳ ನಿಯಂತ್ರಣಕ್ಕೆ ಪರಿಣಾಮಕಾರಿ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಜಿಲ್ಲಾಡಳಿತ ಮತ್ತು ಪೌರಾಡಳಿತವನ್ನು ಒತ್ತಾಯಿಸಿದ್ದಾರೆ.



