ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆಯಿಂದ ಜಲ ವಿದ್ಯುತ್ ಉತ್ಪಾದನೆ ಕುಂಠಿತವಾಗಿರುವ ಹಿನ್ನೆಲೆಯಲ್ಲಿ ಶಾಖೋತ್ಪನ್ನ ವಿದ್ಯುತ್ ಸ್ಥಾವರಗಳಲ್ಲಿ ಉತ್ಪಾದನೆಯನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ.
ಜುಲೈ ತಿಂಗಳಲ್ಲಿ ಪ್ರತಿದಿನ ಸರಾಸರಿ 84.34 ದಶಲಕ್ಷ ಯೂನಿಟ್ ಶಾಖೋತ್ಪನ್ನ ವಿದ್ಯುತ್ ಉತ್ಪಾದನೆಯಾಗುತ್ತಿದೆ ಎಂದು ಇಂಧನ ಮತ್ತು ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಜಲಾಶಯಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿರುವುದರಿಂದ ಕೆಪಿಸಿಎಲ್ ಶಾಖೋತ್ಪನ್ನ ವಿದ್ಯುತ್ ಸ್ಥಾವರಗಳನ್ನು ಪೂರ್ಣ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುವಂತೆ ಕ್ರಮ ಕೈಗೊಂಡಿದೆ. ಪ್ರತಿದಿನದ ಉತ್ಪಾದನೆಯನ್ನು 100 ದಶಲಕ್ಷ ಯೂನಿಟ್ಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ.
ಕಳೆದ ವರ್ಷದ ಜುಲೈನಲ್ಲಿ ಸರಾಸರಿ 54.47 ದಶಲಕ್ಷ ಯೂನಿಟ್ ಶಾಖೋತ್ಪನ್ನ ವಿದ್ಯುತ್ ಉತ್ಪಾದನೆಯಾಗಿದ್ದರೆ, ಈ ವರ್ಷ ಅದು 84.34 ದಶಲಕ್ಷ ಯೂನಿಟ್ಗೆ ಏರಿಕೆಯಾಗಿದೆ.
ಸಚಿವರ ಪ್ರಕಾರ, ಜಲ ವಿದ್ಯುತ್ ಉತ್ಪಾದನೆ ಕಡಿಮೆಯಾದರೆ ಮುಕ್ತ ಮಾರುಕಟ್ಟೆಯಿಂದ ವಿದ್ಯುತ್ ಖರೀದಿಸಬೇಕಾಗುತ್ತದೆ. ಇದರಿಂದ ಸರ್ಕಾರದ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಬೀಳುವುದನ್ನು ತಪ್ಪಿಸಲು ರಾಜ್ಯದಲ್ಲೇ ಹೆಚ್ಚಿನ ಪ್ರಮಾಣದಲ್ಲಿ ವಿದ್ಯುತ್ ಉತ್ಪಾದನೆಗೆ ಒತ್ತು ನೀಡಲಾಗಿದೆ.
ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರದಲ್ಲಿ ಈ ಜುಲೈನಲ್ಲಿ ಸರಾಸರಿ 24.45 ದಶಲಕ್ಷ ಯೂನಿಟ್, ಬಳ್ಳಾರಿ ಸ್ಥಾವರದಲ್ಲಿ 33.64 ದಶಲಕ್ಷ ಯೂನಿಟ್ ಹಾಗೂ ಯರಮರಸ್ ಸ್ಥಾವರದಲ್ಲಿ 26.25 ದಶಲಕ್ಷ ಯೂನಿಟ್ ವಿದ್ಯುತ್ ಉತ್ಪಾದನೆಯಾಗಿದೆ. ಈ ಮೂರು ಸ್ಥಾವರಗಳಲ್ಲೂ ಕಳೆದ ವರ್ಷಕ್ಕಿಂತ ಉತ್ಪಾದನೆ ಗಮನಾರ್ಹವಾಗಿ ಹೆಚ್ಚಿದೆ.
ಹೆಚ್ಚುವರಿ ವಿದ್ಯುತ್ ಉತ್ಪಾದನೆಗಾಗಿ ಕಲ್ಲಿದ್ದಲು ಸಂಗ್ರಹವನ್ನೂ ಹೆಚ್ಚಿಸಲಾಗಿದೆ. ಕಳೆದ ವರ್ಷ 12 ದಿನಕ್ಕೆ ಸಾಕಾಗುವಷ್ಟು ಕಲ್ಲಿದ್ದಲು ಸಂಗ್ರಹವಿದ್ದರೆ, ಈಗ 15 ದಿನಕ್ಕೆ ಬೇಕಾಗುವಷ್ಟು ಸಂಗ್ರಹವಿದ್ದು, ಅದನ್ನು 20 ದಿನಕ್ಕೆ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ. ಪ್ರಸ್ತುತ ಪ್ರತಿದಿನ 17 ರಿಂದ 18 ರೇಕ್ ಕಲ್ಲಿದ್ದಲು ಪೂರೈಕೆ ಮಾಡಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.



