ಬೆಂಗಳೂರು: ರಾಜಧಾನಿಯಲ್ಲಿ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕೆಂಗೇರಿ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದು, ಕುಖ್ಯಾತ ರೌಡಿಶೀಟರ್ ವಿಘ್ನೇಶ್ನನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಿದ್ದಾರೆ.
ಬಂಧಿತ ವಿಘ್ನೇಶ್ ವಿರುದ್ಧ ಕೊಲೆ ಯತ್ನ, ಅತ್ಯಾಚಾರ, ದರೋಡೆ, ಮಾರಣಾಂತಿಕ ಹಲ್ಲೆ ಸೇರಿದಂತೆ 11ಕ್ಕೂ ಹೆಚ್ಚು ಗಂಭೀರ ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.
ಜಾಮೀನಿನ ಮೇಲೆ ಹೊರಬಂದ ಬಳಿಕವೂ ವಿಘ್ನೇಶ್ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಟಿಸುತ್ತಿದ್ದ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸಮಾಜದ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುತ್ತಿದ್ದ ಆತನ ವಿರುದ್ಧ ಗೂಂಡಾ ಕಾಯ್ದೆ ಜಾರಿಗೊಳಿಸಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪರಾಧ ಚಟುವಟಿಕೆ ನಿಯಂತ್ರಣಕ್ಕೆ ಪೊಲೀಸರು ವಿಶೇಷ ನಿಗಾ ವಹಿಸಿದ್ದು, ಮುಂದಿನ ದಿನಗಳಲ್ಲೂ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.



