ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿರುವುದನ್ನು ಸ್ವಾಗತಿಸಿರುವ ಕಾಕ್ರೋಚ್ ಜನತಾ ಪಾರ್ಟಿ (CJP), ಇದು ತಮ್ಮ ಹೋರಾಟದ ಮೊದಲ ಗೆಲುವು ಮಾತ್ರ ಎಂದು ಘೋಷಿಸಿದೆ. ಉಳಿದ ಪ್ರಮುಖ ಬೇಡಿಕೆಗಳು ಈಡೇರುವವರೆಗೂ ದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಿರಂತರವಾಗಿ ಮುಂದುವರಿಯಲಿದೆ ಎಂದು ಪಕ್ಷ ಸ್ಪಷ್ಟಪಡಿಸಿದೆ.
ಸಿಜೆಪಿ ತನ್ನ ಅಧಿಕೃತ ಎಕ್ಸ್ (X) ಖಾತೆಯಲ್ಲಿ ನವೀಕರಿಸಿದ ಬೇಡಿಕೆಗಳ ಪಟ್ಟಿಯನ್ನು ಪ್ರಕಟಿಸಿದ್ದು, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೇಡಿಕೆ ಈಡೇರಿರುವುದಕ್ಕೆ ಗುರುತು ಹಾಕಿದೆ. ಆದರೆ ಇನ್ನೂ ಮೂರು ಪ್ರಮುಖ ಬೇಡಿಕೆಗಳು ಬಾಕಿಯಿದ್ದು, ಅವುಗಳನ್ನು ಈಡೇರಿಸುವಂತೆ ಕೇಂದ್ರ ಸರ್ಕಾರವನ್ನು ಮತ್ತೊಮ್ಮೆ ಒತ್ತಾಯಿಸಿದೆ.
ಪಕ್ಷದ ಪ್ರಮುಖ ಬೇಡಿಕೆಗಳೆಂದರೆ ಆತ್ಮಹತ್ಯೆ ಮಾಡಿಕೊಂಡ ಎಲ್ಲಾ ವಿದ್ಯಾರ್ಥಿಗಳ ಕುಟುಂಬಗಳಿಗೆ ₹1 ಕೋಟಿ ಪರಿಹಾರ ನೀಡುವುದು, ಪ್ರತಿಭಟನೆಯಲ್ಲಿ ಭಾಗವಹಿಸಿದ ಯಾವುದೇ ವಿದ್ಯಾರ್ಥಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳದಿರುವುದು ಹಾಗೂ ಆರ್ಎಎಫ್ ಮತ್ತು ದೆಹಲಿ ಪೊಲೀಸರು ಸಾರ್ವಜನಿಕವಾಗಿ ಕ್ಷಮೆಯಾಚಿಸುವುದು.
“ಜಂತರ್ ಮಂತರ್ ಮಾತ್ರವಲ್ಲ, ಇಡೀ ದೇಶವೇ ಈ ಬೇಡಿಕೆಗಳು ಈಡೇರುವುದನ್ನು ಕಾಯುತ್ತಿದೆ. ಎಲ್ಲ ಬೇಡಿಕೆಗಳು ಈಡೇರುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ” ಎಂದು ಸಿಜೆಪಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಪಕ್ಷದ ಸಂಸ್ಥಾಪಕ ಅಭೀಜಿತ್ ದೀಪ್ಕೆ, “ಈ ಸರ್ಕಾರದಲ್ಲಿ ರಾಜೀನಾಮೆ ಆಗುವುದೇ ಇಲ್ಲ ಎಂದು ಹೇಳಲಾಗುತ್ತಿತ್ತು. ಆದರೆ ನಾವು ಅದನ್ನು ಸಾಧ್ಯ ಮಾಡಿದ್ದೇವೆ. ಇದು ಮೋದಿ ಸರ್ಕಾರದ ಮೊದಲ ರಾಜೀನಾಮೆ” ಎಂದು ಪ್ರತಿಕ್ರಿಯಿಸಿದ್ದಾರೆ.
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಸುದ್ದಿ ಹೊರಬಿದ್ದ ತಕ್ಷಣ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳು ಹಾಗೂ ಬೆಂಬಲಿಗರು ಸಂಭ್ರಮಾಚರಣೆ ನಡೆಸಿ, ಇದನ್ನು ತಮ್ಮ ಹೋರಾಟದ ಮೊದಲ ಮಹತ್ವದ ಗೆಲುವು ಎಂದು ಬಣ್ಣಿಸಿದರು.
ಇದೇ ವೇಳೆ ಧರ್ಮೇಂದ್ರ ಪ್ರಧಾನ್ ತಮ್ಮ ರಾಜೀನಾಮೆ ಪತ್ರವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲಿಸಿದ್ದು, ದೇಶದ ಯುವಜನರು ಗೊಂದಲದ ವಾತಾವರಣಕ್ಕೆ ಒಳಗಾಗದಂತೆ ನೋಡಿಕೊಳ್ಳುವ ಉದ್ದೇಶದಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.



