ಬೆಂಗಳೂರು: ರೈಲ್ವೆ ಹಳಿಗಳ ಪಕ್ಕದಲ್ಲಿ ಹಾಗೂ ರೈಲ್ವೆಗೆ ಸೇರಿದ ಜಾಗಗಳಲ್ಲಿ ಕಸ ಮತ್ತು ಕಟ್ಟಡ ತ್ಯಾಜ್ಯ ಎಸೆಯುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನೈರುತ್ಯ ರೈಲ್ವೆ ಎಚ್ಚರಿಕೆ ನೀಡಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ನಗರದ ಐದು ಪಾಲಿಕೆಗಳ ಸಹಯೋಗದೊಂದಿಗೆ ರೈಲ್ವೆ ಹಳಿಗಳ ಸುತ್ತಮುತ್ತಲಿನ ತ್ಯಾಜ್ಯ ತೆರವುಗೊಳಿಸಲು ಎರಡು ತಿಂಗಳ ಬೃಹತ್ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ.
ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಮಾತನಾಡಿ, ರೈಲ್ವೆ ಜಾಗದಲ್ಲಿ ಅನಧಿಕೃತವಾಗಿ ಕಸ ಎಸೆಯುವವರ ವಿರುದ್ಧ ದಂಡ ವಿಧಿಸುವುದರ ಜೊತೆಗೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ರೈಲ್ವೆ ಆಸ್ತಿಯ ರಕ್ಷಣೆ, ಹಳಿಗಳ ಸುತ್ತಮುತ್ತ ಸಂಗ್ರಹವಾಗಿರುವ ಕಸದ ರಾಶಿ ತೆರವು ಹಾಗೂ ಭವಿಷ್ಯದಲ್ಲಿ ಮತ್ತೆ ತ್ಯಾಜ್ಯ ಎಸೆಯದಂತೆ ತಡೆಯುವುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ. ಇದಕ್ಕಾಗಿ ರೈಲ್ವೆ ಇಲಾಖೆ ಕಠಿಣ ಕಣ್ಗಾವಲು ವ್ಯವಸ್ಥೆ ರೂಪಿಸಲಿದೆ.
ರೈಲ್ವೆ ಅಧಿಕಾರಿಗಳ ಪ್ರಕಾರ, ಹಳಿಗಳ ಪಕ್ಕದಲ್ಲಿ ಅಕ್ರಮವಾಗಿ ಕಸ ಎಸೆಯುವುದರಿಂದ ರೈಲು ಸಂಚಾರದ ಸುರಕ್ಷತೆಗೆ ಅಪಾಯ ಎದುರಾಗುತ್ತಿದೆ. ಹಲವು ಸಂದರ್ಭಗಳಲ್ಲಿ ಕಸದ ರಾಶಿಗೆ ಬೆಂಕಿ ತಗುಲಿ ಸಿಗ್ನಲಿಂಗ್ ವ್ಯವಸ್ಥೆ ಹಾಗೂ ವಿದ್ಯುತ್ ಕೇಬಲ್ಗಳು ಹಾನಿಗೊಳಗಾಗಿದ್ದು, ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.
ಇದಲ್ಲದೆ, ಬೆಂಗಳೂರು-ಮೈಸೂರು ಹಾಗೂ ಬೆಂಗಳೂರು-ಹೊಸೂರು ರೈಲು ಮಾರ್ಗಗಳಲ್ಲಿ ಪದೇ ಪದೇ ತ್ಯಾಜ್ಯ ಸಂಗ್ರಹವಾಗುತ್ತಿರುವುದರಿಂದ ರೈಲ್ವೆ ಗಡಿ ಗುರುತುಗಳು ಮರೆಯಾಗುವ ಹಾಗೂ ಅತಿಕ್ರಮಣದ ಭೀತಿ ಎದುರಾಗಿದೆ.
ಈ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಹಾಗೂ ಸ್ಥಳೀಯ ಆಡಳಿತಗಳು ಜಂಟಿಯಾಗಿ ಸ್ವಚ್ಛತಾ ಕಾರ್ಯದ ಜೊತೆಗೆ ಅಕ್ರಮ ತ್ಯಾಜ್ಯ ವಿಲೇವಾರಿ ತಡೆಯಲು ಕ್ರಮ ಕೈಗೊಳ್ಳುತ್ತಿವೆ.



