ವಿಜಯಸಾಕ್ಷಿ ಸುದ್ದಿ, ಗದಗ: ಯುವಕರು ರಾಷ್ಟ್ರದ ಶಕ್ತಿ ಮತ್ತು ಭವಿಷ್ಯದ ಆಶಾಕಿರಣ. ನಶೆಯಿಂದ ದೂರವಿದ್ದು ಆರೋಗ್ಯಕರ ಜೀವನ ನಡೆಸಿದಾಗ ಮಾತ್ರ ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣ ಸಾಧ್ಯ ಎಂದು ಮೈ ಭಾರತ್ ಕೇಂದ್ರದ ಡೆಪ್ಯುಟಿ ಡೈರೆಕ್ಟರ್ ಲೋಕೇಶ್ ಕುಮಾರ್ ಹೇಳಿದರು.
ನಗರದ ಆದರ್ಶ ಶಿಕ್ಷಣ ಸಮಿತಿಯ ಸುವರ್ಣ ಮಹೋತ್ಸವ ಭವನದಲ್ಲಿ ಮೈ ಭಾರತ್ ಕೇಂದ್ರ, ಗದಗ ಹಾಗೂ ಎಎಸ್ಎಸ್ ಪದವಿ ವಾಣಿಜ್ಯ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಘಟಕದ ಸಹಯೋಗದಲ್ಲಿ ಆಯೋಜಿಸಿದ್ದ ‘ನಶಾ ಮುಕ್ತ ಯುವ–ವಿಕಸಿತ ಭಾರತ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಮದ್ಯಪಾನ, ಧೂಮಪಾನ ಹಾಗೂ ವಿವಿಧ ಮಾದಕ ವಸ್ತುಗಳ ವ್ಯಸನ ಯುವಜನರನ್ನು ಆಕರ್ಷಿಸುತ್ತಿದ್ದು, ಇದು ದೈಹಿಕ ಮತ್ತು ಮಾನಸಿಕ ಆರೋಗ್ಯದ ಜೊತೆಗೆ ಶಿಕ್ಷಣ, ಉದ್ಯೋಗ ಹಾಗೂ ಕುಟುಂಬದ ಮೇಲೂ ದುಷ್ಪರಿಣಾಮ ಬೀರುತ್ತಿದೆ. ಯುವಕರು ಕ್ರೀಡೆ, ಯೋಗ, ವ್ಯಾಯಾಮ ಹಾಗೂ ಸಾಮಾಜಿಕ ಸೇವೆಯಂತಹ ಉತ್ತಮ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ವ್ಯಸನಗಳಿಂದ ದೂರವಿರಬೇಕು ಎಂದು ಸಲಹೆ ನೀಡಿದರು.
ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಕುಟುಂಬ, ಶಿಕ್ಷಣ ಸಂಸ್ಥೆಗಳು, ಸರ್ಕಾರ ಹಾಗೂ ಸಮಾಜದ ಸಹಭಾಗಿತ್ವ ಅಗತ್ಯ. ಪೋಷಕರು ಮಕ್ಕಳೊಂದಿಗೆ ಉತ್ತಮ ಸಂವಹನ ಬೆಳೆಸಬೇಕು. ಶಿಕ್ಷಕರು ಉತ್ತಮ ಮೌಲ್ಯಗಳನ್ನು ಬೆಳೆಸಲು ಪ್ರೇರೇಪಿಸಬೇಕು. “ನಶಾ ಮುಕ್ತ ಯುವ–ಬಲಿಷ್ಠ ಭಾರತ” ಎಂಬ ಗುರಿಯನ್ನು ಪ್ರತಿಯೊಬ್ಬ ಯುವಕ-ಯುವತಿ ತಮ್ಮ ಜೀವನದ ಧ್ಯೇಯವಾಗಿಸಿಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಂಗವಾಗಿ ಚಿತ್ರಕಲೆ, ಜನಪದ ಗೀತೆ, ಶಾಸ್ತ್ರೀಯ ನೃತ್ಯ, ನಾಟಕ, ರೀಲ್ಸ್, ಘೋಷವಾಕ್ಯ, ಬರವಣಿಗೆ, ಕವಿತೆ ಹಾಗೂ ಭಾಷಣ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಸ್ಪರ್ಧೆಗಳು ನಡೆದವು. ಜಿಲ್ಲೆಯ ಪದವಿ ಹಾಗೂ ಪದವಿಪೂರ್ವ ಕಾಲೇಜುಗಳ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ಸ್ಪರ್ಧೆಗೆ ಶುಭ ಹಾರೈಸಲಾಯಿತು.
ಕಾರ್ಯಕ್ರಮದಲ್ಲಿ ಆದರ್ಶ ಶಿಕ್ಷಣ ಸಮಿತಿಯ ಕಾರ್ಯದರ್ಶಿ ಎ.ಡಿ. ಗೋಡಕಿಂಡಿ, ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ವಿ.ಟಿ. ನಾಯ್ಕರ್, ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿ ಪ್ರೊ. ಬಿ.ಪಿ. ಜೈನರ, ಮೈ ಭಾರತ್ ಕಚೇರಿಯ ರವಿ ಹೊಂಬಾಳಿ ಹಾಗೂ ತೀರ್ಪುಗಾರರಾದ ವೀರೇಂದ್ರಗೌಡ ಪಾಟೀಲ, ಶ್ರೀನಿವಾಸ್ ಬಡಿಗೇರ್, ರೇವತಿ ಗೌಳಿ, ನಾಗರಾಜ ಸುರಳಿಕೇರಿ, ಡಾ. ವಿ.ಟಿ. ನಾಯ್ಕರ್, ಪ್ರೊ. ಪರಶುರಾಮ ಕಟ್ಟಿಮನಿ ಸೇರಿದಂತೆ ವಿವಿಧ ಕಾಲೇಜುಗಳ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
“ನಶೆಯಿಂದ ದೂರವಿರುವ ಪ್ರತಿಯೊಬ್ಬ ಯುವಕ ತನ್ನ ಕುಟುಂಬಕ್ಕೂ, ಸಮಾಜಕ್ಕೂ ಹಾಗೂ ರಾಷ್ಟ್ರಕ್ಕೂ ಅಮೂಲ್ಯ ಆಸ್ತಿಯಾಗುತ್ತಾನೆ.”
– ಲೋಕೇಶ್ ಕುಮಾರ್, ಡೆಪ್ಯುಟಿ ಡೈರೆಕ್ಟರ್, ಮೈ ಭಾರತ್ ಕೇಂದ್ರ, ಗದಗ



