ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಹಂಪಾಪಟ್ಟಣ ಗ್ರಾಮಕ್ಕೆ ಸರ್ಕಾರಿ ಪದವಿ ಪೂರ್ವ (ಪಿಯು) ಕಾಲೇಜು ಮಂಜೂರು ಮಾಡುವಂತೆ ಆಗ್ರಹಿಸಿ ಗ್ರಾಮಸ್ಥರು, ರೈತ ಸಂಘದ ಮುಖಂಡರು ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಪಕ್ಷಾತೀತವಾಗಿ ಹೋರಾಟ ಆರಂಭಿಸಿ ಸೋಮವಾರ ತಹಶೀಲ್ದಾರರ ಮೂಲಕ ರಾಜ್ಯ ಸರ್ಕಾರಕ್ಕೆ ಸಾಂಕೇತಿಕ ಮನವಿ ಸಲ್ಲಿಸಿದರು.
ಹೋರಾಟ ಸಮಿತಿಯ ಸಂಚಾಲಕ ಬುಡ್ಡಿ ಬಸವರಾಜ್ ಮಾತನಾಡಿ, “ಹಂಪಾಪಟ್ಟಣ ಸೇರಿದಂತೆ ಸುತ್ತಮುತ್ತಲಿನ 12 ಗ್ರಾಮಗಳ ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕಾಗಿ ದೂರದ ಊರುಗಳಿಗೆ ತೆರಳಬೇಕಾದ ಅನಿವಾರ್ಯತೆ ಎದುರಿಸುತ್ತಿದ್ದಾರೆ. ಇದರಿಂದ ಬಡ ಹಾಗೂ ರೈತ ಕುಟುಂಬಗಳ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆಯಾಗುತ್ತಿದೆ. ಸರ್ಕಾರ ತಕ್ಷಣವೇ ಹಂಪಾಪಟ್ಟಣದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಮಂಜೂರು ಮಾಡಿ ಗ್ರಾಮೀಣ ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಬೇಕು” ಎಂದು ಒತ್ತಾಯಿಸಿದರು.
ರೈತ ಸಂಘದ ಮುಖಂಡ ಬಿ. ಕುಬೇರ ಮಾತನಾಡಿ, ರೈತ ಕುಟುಂಬಗಳ ಮಕ್ಕಳಿಗೆ ಗುಣಮಟ್ಟದ ಉನ್ನತ ಶಿಕ್ಷಣ ದೊರೆಯುವ ನಿಟ್ಟಿನಲ್ಲಿ ಸರ್ಕಾರ ಈ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಿ ಶೀಘ್ರದಲ್ಲೇ ಸರ್ಕಾರಿ ಪಿಯು ಕಾಲೇಜು ಮಂಜೂರು ಮಾಡಬೇಕು ಎಂದು ಆಗ್ರಹಿಸಿದರು.
ಯುವ ಮುಖಂಡ ಟಿ. ಕೊಟ್ರೇಶ್ ಮಾತನಾಡಿ, ಹಂಪಾಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಪಕ್ಷಾತೀತವಾಗಿ ಈ ಹೋರಾಟ ಆರಂಭಿಸಲಾಗಿದೆ. ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಕೂಡಲೇ ಕಾಲೇಜು ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು.
ಗ್ರಾಮ ಪಂಚಾಯಿತಿ ಸದಸ್ಯ ಎನ್. ನಾಗರಾಜ್ ಮಾತನಾಡಿ, ಹಂಪಾಪಟ್ಟಣದಲ್ಲಿ ಪದವಿ ಪೂರ್ವ ಕಾಲೇಜು ಆರಂಭಿಸಲು ಅಗತ್ಯ ಮೂಲಸೌಕರ್ಯಗಳಿದ್ದು, ಕಾಲೇಜು ಮಂಜೂರಾದರೆ ಸಾವಿರಾರು ಗ್ರಾಮೀಣ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.
ಬಳಿಕ ತಹಶೀಲ್ದಾರರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಸಿ.ಎಲ್. ಕುಮಾರ್, ಸಿದ್ದರ ಗಾಳಪ್ಪ, ಬಿ. ನಾಗರಾಜ್, ಪತ್ರಿ ಯಲ್ಲಪ್ಪ, ಗಾಳಮ್ಮನವರ ಹುಲುಗಪ್ಪ, ಭಜಂತ್ರಿ ಸೋಮನಾಥ್, ಜಿ. ಅಂಜಿನಪ್ಪ, ಶಿಗೇನಹಳ್ಳಿ ಬಸವರಾಜ್, ಬೆಸ್ತರು ಮಂಜುನಾಥ್, ಎಚ್.ಕೆ. ರಮೇಶ್, ತೀರ್ಥ ಪ್ರಸಾದ್, ಹಂಪಿನಕಟ್ಟಿ ಪ್ರವೀಣ್, ಉಪ್ಪಾರ್ ಹನುಮಂತಪ್ಪ, ಗೊಂದಲಿ ಪಕೀರಪ್ಪ, ಸಿದ್ದರ ಎಲ್ಲಪ್ಪ, ಎಚ್. ಅಶೋಕ್, ಕೆ. ನಜೀರ್ ಸಾಬ್, ವಡ್ಡರ ಹಾಲಪ್ಪ, ವಜೀರ್, ಬಿ.ಕೆ. ಬಸವರಾಜ್, ಕುಮಾರ್ ಮೊದಲಿಯಾರ್, ನಾಗೇಶ್, ಬಸವರಾಜ್, ನಿಂಗರಾಜ್ ಅಂಜಿನಿ ಸೇರಿದಂತೆ ಗ್ರಾಮಸ್ಥರು, ರೈತ ಸಂಘದ ಪದಾಧಿಕಾರಿಗಳು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.



