ಉಡುಪಿ: ಬಿಜೆಪಿ ಪ್ರತಿಭಟನಾ ಸಭೆಯಲ್ಲಿ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಮತ್ತು ದ್ವೇಷ ಪ್ರಚೋದಿಸುವ ಭಾಷಣ ಮಾಡಿದ್ದಾರೆ ಎಂಬ ಆರೋಪದಡಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ನೀಡಿದ ದೂರಿನ ಮೇರೆಗೆ ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.
ಜುಲೈ 28ರಂದು ಉಡುಪಿಯ ಜೋಡುಕಟ್ಟೆ ಸಮೀಪ ನಡೆದ ಬಿಜೆಪಿ ಪ್ರತಿಭಟನಾ ಸಭೆಯಲ್ಲಿ ಯಶ್ಪಾಲ್ ಸುವರ್ಣ ಅವರು ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಇದೇ ವೇಳೆ ಬಾಬ್ರಿ ಮಸೀದಿ ಧ್ವಂಸ ಪ್ರಕರಣವನ್ನು ಪ್ರಸ್ತಾಪಿಸಿ ಸಮುದಾಯಗಳ ನಡುವೆ ದ್ವೇಷ ಮತ್ತು ಉದ್ವಿಗ್ನತೆ ಉಂಟುಮಾಡುವ ರೀತಿಯಲ್ಲಿ ಭಾಷಣ ಮಾಡಿದ್ದಾರೆ ಎನ್ನಲಾಗಿದೆ.
ದೂರಿನ ಪ್ರಕಾರ, ನೀಟ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳ ವಿರುದ್ಧವೂ ಅವಾಚ್ಯ ಶಬ್ದಗಳನ್ನು ಬಳಸಿ ನಿಂದನೆ ಮಾಡಲಾಗಿದೆ. ವಿವಿಧ ಸಮುದಾಯಗಳ ನಡುವೆ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಸಲ್ಲಿಸಿದ ಲಿಖಿತ ದೂರಿನ ಆಧಾರದ ಮೇಲೆ ಉಡುಪಿ ನಗರ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಭಾರತೀಯ ನ್ಯಾಯ ಸಂಹಿತೆ (BNS)ಯ ಸೆಕ್ಷನ್ 57, 192, 196(2), 352, 353(2) ಹಾಗೂ 351(2) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



