ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಅಮ್ಮ ಫೌಂಡೇಶನ್ (ರಿ), ಬೆಂಗಳೂರು ವತಿಯಿಂದ ಲಕ್ಷ್ಮೇಶ್ವರ ತಾಲೂಕಿನ ಸಂಕದಾಳ ಮತ್ತು ಕೊಂಡಿಕೊಪ್ಪ ಗ್ರಾಮಗಳ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಶಾಲಾ ಬ್ಯಾಗ್, ನೋಟ್ಬುಕ್ ಹಾಗೂ ಪೆನ್ಗಳನ್ನು ವಿತರಿಸಲಾಯಿತು.
ಗದಗ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಸವರಾಜ ಬಳ್ಳಾರಿ ಅವರ ಜನ್ಮದಿನದ ಅಂಗವಾಗಿ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮವನ್ನು ಅಮ್ಮ ಫೌಂಡೇಶನ್ ಅಧ್ಯಕ್ಷ ಹಾಗೂ ವಕೀಲ ಮೈಲಾರಪ್ಪ ಡಿ.ಎಚ್. ಅವರ ನೇತೃತ್ವದಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜ ಸೀಮಿಕೇರಿ, ಗ್ರಾಮೀಣ ಭಾಗದ ಸರ್ಕಾರಿ ಶಾಲಾ ಮಕ್ಕಳ ಶಿಕ್ಷಣಕ್ಕೆ ಅಮ್ಮ ಫೌಂಡೇಶನ್ ನೀಡುತ್ತಿರುವ ಬೆಂಬಲ ಶ್ಲಾಘನೀಯವಾಗಿದೆ. ಇಂತಹ ದಾನಿಗಳ ಸಹಕಾರದಿಂದ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಮತ್ತಷ್ಟು ಬಲ ಸಿಗಲಿದೆ ಎಂದು ಹೇಳಿದರು. ಇದೇ ವೇಳೆ ಶಾಲೆಗೆ ಡಿಜಿಟಲ್ ಸ್ಮಾರ್ಟ್ ಬೋರ್ಡ್ ಒದಗಿಸುವಂತೆ ಮನವಿ ಮಾಡಿದರು.
ಮನವಿಗೆ ತಕ್ಷಣ ಸ್ಪಂದಿಸಿದ ಮೈಲಾರಪ್ಪ ಡಿ.ಎಚ್., ತಾವು ಕಲಿತು ಬೆಳೆದ ಸರ್ಕಾರಿ ಶಾಲೆಯ ಮಕ್ಕಳಿಗೆ ಕಲಿಕಾ ಸಾಮಗ್ರಿ ವಿತರಿಸಿರುವುದು ಸಂತಸ ತಂದಿದೆ. ಮುಂದಿನ ದಿನಗಳಲ್ಲಿ ಶಾಲಾ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮ ಹಾಗೂ ಗದಗ ಜಿಲ್ಲೆಯ ಇನ್ನಷ್ಟು ಸರ್ಕಾರಿ ಶಾಲೆಗಳಲ್ಲಿ ಸಾಮಾಜಿಕ ಸೇವಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುವುದು. ಜೊತೆಗೆ ಸಂಕದಾಳ ಶಾಲೆಗೆ ಶೀಘ್ರದಲ್ಲೇ ಡಿಜಿಟಲ್ ಸ್ಮಾರ್ಟ್ ಬೋರ್ಡ್ ಒದಗಿಸಲಾಗುವುದು ಎಂದು ಭರವಸೆ ನೀಡಿದರು.
ನಿವೃತ್ತ ಸೈನಿಕ ಬಸವರಾಜ ಸೂರಣಗಿ, ಗ್ರಾಮದ ಹಿರಿಯ ಹಾಲಪ್ಪ ಸೂರಣಗಿ, ಎಸ್ಡಿಎಂಸಿ ಅಧ್ಯಕ್ಷ ರವಿ ಹರಿಜನ ಹಾಗೂ ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ದುರಗಪ್ಪ ಹರಿಜನ ಮಾತನಾಡಿ, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಅಮ್ಮ ಫೌಂಡೇಶನ್ ಕೈಗೊಂಡಿರುವ ಕಾರ್ಯವನ್ನು ಶ್ಲಾಘಿಸಿದರು.
ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಮಂಜುನಾಥ ವಾರದ್, ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘದ ನಿರ್ದೇಶಕ ಶರಣು ಸೋಗಿ, ಜಿಲ್ಲಾ ಉಪಾಧ್ಯಕ್ಷ ಎಂ.ಎಸ್. ಹಿರೇಮಠ, ಶ್ರೀಮತಿ ನಂದಣ್ಣವರ್ ದಂಪತಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಶಾಲೆಯ ಪ್ರಧಾನಗುರು ಎಸ್.ಎಸ್. ಉಪ್ಪಿನ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಅತಿಥಿ ಶಿಕ್ಷಕ ವೈ.ಎಸ್. ಪಾಟೀಲ ವಂದಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಣಪ್ರೇಮಿಗಳು, ಗ್ರಾಮದ ಹಿರಿಯರು, ಶಾಲಾ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.



