HomeCrime Newsನಿವೃತ್ತ ಬಸ್ ಚಾಲಕನ ಮನೆಯಲ್ಲಿ ₹48 ಕೋಟಿ ಖಜಾನೆ! ದಾಳಿಯಲ್ಲಿ ₹28.5 ಕೋಟಿ ನಗದು, ₹20...

ನಿವೃತ್ತ ಬಸ್ ಚಾಲಕನ ಮನೆಯಲ್ಲಿ ₹48 ಕೋಟಿ ಖಜಾನೆ! ದಾಳಿಯಲ್ಲಿ ₹28.5 ಕೋಟಿ ನಗದು, ₹20 ಕೋಟಿ ಚಿನ್ನ ಜಪ್ತಿ

For Dai;y Updates Join Our whatsapp Group

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿರ್ಭಮ್ ಜಿಲ್ಲೆಯಲ್ಲಿ ಮರಳು ಮಾಫಿಯಾ ವಿರುದ್ಧದ ಕಾರ್ಯಾಚರಣೆ ವೇಳೆ ಪೊಲೀಸರಿಗೆ ಬೆಚ್ಚಿಬೀಳಿಸುವ ಅಕ್ರಮ ಆಸ್ತಿ ಪತ್ತೆಯಾಗಿದೆ. ನಿವೃತ್ತ ಸರ್ಕಾರಿ ಬಸ್ ಚಾಲಕನ ಮನೆ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ₹28.5 ಕೋಟಿ ನಗದು ಹಾಗೂ ₹20 ಕೋಟಿಗೂ ಅಧಿಕ ಮೌಲ್ಯದ 15 ಕೆಜಿ ಚಿನ್ನವನ್ನು ಜಪ್ತಿ ಮಾಡಿದ್ದಾರೆ. ದಾಳಿಯ ಬಳಿಕ ಆರೋಪಿಯನ್ನು ಹಾಗೂ ಆತನ ಮಗನನ್ನು ಬಂಧಿಸಲಾಗಿದ್ದು, ಪ್ರಕರಣದ ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಲಾಗಿದೆ.

ಮರಳು ಮಾಫಿಯಾ ವಿರುದ್ಧ ನಡೆಯುತ್ತಿದ್ದ ವಿಶೇಷ ಕಾರ್ಯಾಚರಣೆಯ ಭಾಗವಾಗಿ ಬಿರ್ಭಮ್‌ನಲ್ಲಿ ನಿವೃತ್ತ ಸರ್ಕಾರಿ ಬಸ್ ಚಾಲಕ ಮಿನಾರ್ ಅವರ ನಿವಾಸದ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ನಿವೃತ್ತಿಯ ನಂತರ ಕಲ್ಲು ವ್ಯಾಪಾರದಲ್ಲಿ ತೊಡಗಿಸಿಕೊಂಡಿದ್ದ ಮಿನಾರ್ ಅವರ ಮನೆಯಲ್ಲಿ ಭಾರೀ ಪ್ರಮಾಣದ ಅಕ್ರಮ ಸಂಪತ್ತು ಪತ್ತೆಯಾಗಿದ್ದು, ಅಧಿಕಾರಿಗಳೇ ಬೆಚ್ಚಿಬಿದ್ದಿದ್ದಾರೆ.

ದಾಳಿಯ ವೇಳೆ ₹28.5 ಕೋಟಿ ನಗದು ಹಾಗೂ ಸುಮಾರು 15 ಕೆಜಿ ಚಿನ್ನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜಪ್ತಿ ಮಾಡಲಾದ ಚಿನ್ನದ ಮೌಲ್ಯ ₹20 ಕೋಟಿಗೂ ಅಧಿಕ ಎಂದು ಅಂದಾಜಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಿನಾರ್ ಹಾಗೂ ಅವರ ಪುತ್ರನನ್ನು ಬಂಧಿಸಲಾಗಿದ್ದು, ಇನ್ನಿತರ ಸ್ಥಳಗಳಲ್ಲೂ ಹಣ ಮತ್ತು ಆಸ್ತಿ ಅಡಗಿಸಿಟ್ಟಿರುವ ಶಂಕೆ ಹಿನ್ನೆಲೆಯಲ್ಲಿ ವಿಚಾರಣೆ ಮುಂದುವರಿದಿದೆ.

ಪ್ರಾಥಮಿಕ ತನಿಖೆಯಲ್ಲಿ ಮಿನಾರ್, ತಲೆಮರೆಸಿಕೊಂಡಿರುವ ಟಿಲ್ಲು ಮಂಡಲ್ ಅಲಿಯಾಸ್ ಮೊಹಮ್ಮದ್ ನಜೀಬುದ್ದೀನ್ ಅವರ ಸೋದರ ಮಾವ ಎಂಬ ಮಾಹಿತಿ ಬೆಳಕಿಗೆ ಬಂದಿದೆ. ಟಿಲ್ಲು ಮಂಡಲ್ ಬಿರ್ಭಮ್ ತೃಣಮೂಲ ಕಾಂಗ್ರೆಸ್‌ನ ಪ್ರಭಾವಿ ನಾಯಕ ಅನುಬ್ರತಾ ಮಂಡಲ್ ಅವರ ಆಪ್ತನಾಗಿದ್ದಾನೆ ಎನ್ನಲಾಗಿದ್ದು, ಪ್ರಕರಣಕ್ಕೆ ರಾಜಕೀಯ ಆಯಾಮವೂ ಸಿಕ್ಕಿದೆ.

ಇದೇ ಮಿನಾರ್ ವಿರುದ್ಧ ಈ ಹಿಂದೆ ಬಹುಕೋಟಿ ದನ ಕಳ್ಳಸಾಗಣೆ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಕೂಡ ವಿಚಾರಣೆ ನಡೆಸಿತ್ತು. ಇದೀಗ ಮತ್ತೊಮ್ಮೆ ಭಾರೀ ಪ್ರಮಾಣದ ಅಕ್ರಮ ಸಂಪತ್ತು ಪತ್ತೆಯಾಗಿರುವುದು ತನಿಖಾ ಸಂಸ್ಥೆಗಳ ಗಮನ ಸೆಳೆದಿದೆ.

ಈ ಕಾರ್ಯಾಚರಣೆಯನ್ನು ಪಶ್ಚಿಮ ಬಂಗಾಳ ಸರ್ಕಾರ ಶ್ಲಾಘಿಸಿದೆ. ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ, ಮರಳು ಮಾಫಿಯಾ ವಿರುದ್ಧ ನಿಖರ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಬಿರ್ಭಮ್ ಪೊಲೀಸ್, ಜಿಲ್ಲಾ ಎಸ್‌ಪಿ, ಡಿಜಿಪಿ ಸೇರಿದಂತೆ ಎಲ್ಲಾ ಪೊಲೀಸ್ ಸಿಬ್ಬಂದಿಯ ತ್ವರಿತ ಹಾಗೂ ವೃತ್ತಿಪರ ಕಾರ್ಯವನ್ನು ಪ್ರಶಂಸಿಸಿದ್ದಾರೆ.

ಇದೇ ವೇಳೆ, “ಭ್ರಷ್ಟಾಚಾರದ ವಿರುದ್ಧ ಶೂನ್ಯ ಸಹಿಷ್ಣುತೆ ನೀತಿ ನಮ್ಮ ಸರ್ಕಾರದ ಬದ್ಧತೆ. ಸಾರ್ವಜನಿಕ ಸಂಪತ್ತನ್ನು ಲೂಟಿ ಮಾಡಿದವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಮಾಫಿಯಾ ಜಾಲ ಹಾಗೂ ಅಕ್ರಮ ಸಂಪತ್ತು ವಿರುದ್ಧದ ಕಾರ್ಯಾಚರಣೆ ಇನ್ನಷ್ಟು ತೀವ್ರಗೊಳ್ಳಲಿದೆ” ಎಂದು ಮುಖ್ಯಮಂತ್ರಿ ಎಚ್ಚರಿಕೆ ನೀಡಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img