ವಿಜಯಸಾಕ್ಷಿ ಸುದ್ದಿ, ಗದಗ: 75 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಮನೆ ಬಾಗಿಲಿಗೆ ಪಡಿತರ ತಲುಪಿಸುವ ‘ಅನ್ನ ಸುವಿಧಾ’ ಯೋಜನೆ ಹಿರಿಯರ ಘನತೆಯನ್ನು ಕಾಪಾಡುವ ಜನಪರ ಕಾರ್ಯಕ್ರಮವಾಗಿದ್ದು, ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ ಎಂದು ಗದಗ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಅಶೋಕ ಮಂದಾಲಿ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ರಾಜ್ಯದಲ್ಲಿ 75 ವರ್ಷ ಮೇಲ್ಪಟ್ಟ 2.65 ಲಕ್ಷಕ್ಕೂ ಹೆಚ್ಚು ಹಿರಿಯ ನಾಗರಿಕರನ್ನು ಗುರುತಿಸಿ, ಅವರಿಗೆ ಯಾವುದೇ ಅಲೆದಾಟವಿಲ್ಲದೆ ಮನೆ ಬಾಗಿಲಿಗೆ ಪಡಿತರ ತಲುಪಿಸಲಾಗುತ್ತಿದೆ. ಅಸಹಾಯಕ ಹಿರಿಯರು ರೇಷನ್ ಅಂಗಡಿಗಳ ಮುಂದೆ ಸರತಿ ಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿಯನ್ನು ತಪ್ಪಿಸುವುದೇ ಸರ್ಕಾರದ ಉದ್ದೇಶವಾಗಿದೆ ಎಂದು ಹೇಳಿದರು.
ಆಧಾರ್ ಹಾಗೂ ಮೊಬೈಲ್ ಸಂಖ್ಯೆಯನ್ನು ಜೋಡಿಸಿ ಡಿಜಿಟಲ್ ವ್ಯವಸ್ಥೆಯ ಮೂಲಕ ಯೋಜನೆ ಅನುಷ್ಠಾನಗೊಳಿಸಲಾಗಿದ್ದು, ಮನೆ ಬಾಗಿಲಿಗೆ ಪಡಿತರ ತಲುಪಿಸುವ ವಿತರಕರಿಗೆ ₹50 ಸೇವಾ ಶುಲ್ಕ ನಿಗದಿಪಡಿಸಲಾಗಿದೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಹಿರಿಯರಿಗೆ ದೊರೆಯುವ ಹಕ್ಕನ್ನು ಪರಿಣಾಮಕಾರಿಯಾಗಿ ತಲುಪಿಸಲಾಗುತ್ತಿದೆ ಎಂದು ತಿಳಿಸಿದರು.
ಪ್ರತಿ ತಿಂಗಳು 1ರಿಂದ 5ನೇ ತಾರೀಖಿನೊಳಗೆ ಪಡಿತರ ವಿತರಣೆ ಮಾಡಲಾಗುತ್ತಿದ್ದು, ‘ಅನ್ನ ಸುವಿಧಾ’ ಆ್ಯಪ್ ಮೂಲಕ ವಿತರಣೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲಾಗಿದೆ. 1967 ಸಹಾಯವಾಣಿ ಮೂಲಕ ಫಲಾನುಭವಿಗಳ ದೂರುಗಳಿಗೆ ತ್ವರಿತ ಸ್ಪಂದನೆ ನೀಡಲಾಗುತ್ತಿದೆ ಎಂದು ಹೇಳಿದರು.
ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ಅಕ್ರಮಗಳಿಗೆ ಅವಕಾಶ ನೀಡದಂತೆ ಇ-ಪೋಸ್ (e-PoS) ಯಂತ್ರಗಳ ಮೂಲಕ ಪಡಿತರ ವಿತರಣೆ ಕಡ್ಡಾಯಗೊಳಿಸಲಾಗಿದ್ದು, ದಾಸ್ತಾನು ಹಾಗೂ ಪೂರೈಕೆ ವ್ಯವಸ್ಥೆಯ ಮೇಲೂ ನಿರಂತರ ನಿಗಾ ವಹಿಸಲಾಗಿದೆ. ಅರ್ಹ ಫಲಾನುಭವಿಗಳಿಗೆ ಆಹಾರ ಧಾನ್ಯ ಸಮರ್ಪಕವಾಗಿ ತಲುಪುವಂತೆ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
“ಮನೆ ಬಾಗಿಲಿಗೆ ಪಡಿತರ ತಲುಪಿಸುವ ‘ಅನ್ನ ಸುವಿಧಾ’ ಯೋಜನೆ ಕೇವಲ ಆಹಾರ ವಿತರಣೆಯಲ್ಲ, ಹಿರಿಯ ನಾಗರಿಕರ ಘನತೆ ಮತ್ತು ಹಕ್ಕುಗಳನ್ನು ಗೌರವಿಸುವ ಜನಪರ ಹೆಜ್ಜೆಯಾಗಿದೆ.”
– ಅಶೋಕ ಮಂದಾಲಿ, ಅಧ್ಯಕ್ಷರು, ಗದಗ ಜಿಲ್ಲಾ ಪ್ರಚಾರ ಸಮಿತಿ



