ಕಲಬುರಗಿ: ಗುತ್ತಿಗೆ ಕಾಮಗಾರಿಯ ಬಾಕಿ ಹಣ ಕೇಳಿದ ಹಿನ್ನೆಲೆಯಲ್ಲಿ ಬೆದರಿಕೆ ಮತ್ತು ಕಿರುಕುಳ ಎದುರಿಸಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಕಾಂಗ್ರೆಸ್ ಮುಖಂಡ ಸೇರಿದಂತೆ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.
ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ರಟಕಲ್ ಗ್ರಾಮದ ನಿವಾಸಿ ಖದೀರ್ ಪಾಷಾ (38) ಆತ್ಮಹತ್ಯೆ ಮಾಡಿಕೊಂಡವರು. ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಅರವಿಂದ್ ಚವ್ಹಾಣ್ ಹಾಗೂ ಅವರ ಅಳಿಯ ಅಮಿತ್ ರಾಠೋಡ್ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, ಸೇಡಂನ ಸಿಮೆಂಟ್ ಕಾರ್ಖಾನೆಯ ಕಾಮಗಾರಿಯನ್ನು ಗುತ್ತಿಗೆ ಪಡೆದಿದ್ದ ಅರವಿಂದ್ ಚವ್ಹಾಣ್ ಅವರು ಕಾಮಗಾರಿಗೆ ಖದೀರ್ ಪಾಷಾ ಅವರನ್ನು ಕೆಲಸಕ್ಕೆ ನೇಮಿಸಿಕೊಂಡಿದ್ದರು. ಕೆಲಸ ಪೂರ್ಣಗೊಂಡ ಬಳಿಕ ಬಾಕಿ ಹಣವನ್ನು ಕೇಳಿದಾಗ, ಅರವಿಂದ್ ಚವ್ಹಾಣ್ ಹಾಗೂ ಅಮಿತ್ ರಾಠೋಡ್ ಬೆದರಿಕೆ ಹಾಕಿ ಮಾನಸಿಕ ಕಿರುಕುಳ ನೀಡಿದ್ದರು ಎಂದು ಆರೋಪಿಸಲಾಗಿದೆ.
ಈ ಕಿರುಕುಳದಿಂದ ಮನನೊಂದ ಖದೀರ್ ಪಾಷಾ ಅವರು ರಟಕಲ್ ಗ್ರಾಮದ ಜಮೀನೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ಕುಟುಂಬ ಆರೋಪಿಸಿದೆ.
ಮೃತರ ಪತ್ನಿ ಅನೀಸಾ ಬೇಗಂ ನೀಡಿದ ದೂರಿನ ಆಧಾರದ ಮೇಲೆ ಅರವಿಂದ್ ಚವ್ಹಾಣ್ ಹಾಗೂ ಅಮಿತ್ ರಾಠೋಡ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಅರವಿಂದ್ ಚವ್ಹಾಣ್ ಅವರು 2028ರ ಕಲಬುರಗಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ಹಾಗೂ ಆರೋಪಗಳ ಸತ್ಯಾಸತ್ಯತೆಯನ್ನು ಪೊಲೀಸರು ತನಿಖೆ ಮೂಲಕ ಪರಿಶೀಲಿಸುತ್ತಿದ್ದಾರೆ.



