ಗದಗ: ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಸವಾಲಾಗಿದ್ದ ರೌಡಿಶೀಟರ್ ವಿರುದ್ಧ ಗದಗ ಜಿಲ್ಲಾ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ.
ಕೊಲೆ ಯತ್ನ ಸೇರಿದಂತೆ ಐದು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ.
ಸದಾನಂದಸಿಂಗ್ ಗುರ್ಲಹೊಸೂರು ಎಂಬ ಆರೋಪಿಯನ್ನು ಕರ್ನಾಟಕ ಪೊಲೀಸ್ ಕಾಯ್ದೆಯಡಿ ಗಡಿಪಾರು ಮಾಡಲಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಅವರು ಈ ಆದೇಶ ಹೊರಡಿಸಿದ್ದಾರೆ. ಸಮಾಜವಿರೋಧಿ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.
ಪೊಲೀಸ್ ದಾಖಲೆಗಳ ಪ್ರಕಾರ, ಆರೋಪಿಯ ವಿರುದ್ಧ 2016ರಿಂದ 2025ರವರೆಗೆ ಒಟ್ಟು ಐದು ಪ್ರಕರಣಗಳು ದಾಖಲಾಗಿವೆ. ಅಕ್ರಮ ಗುಂಪು ರಚನೆ, ಗಲಭೆ, ಮಾರಕಾಸ್ತ್ರಗಳಿಂದ ಹಲ್ಲೆ, ಸಾರ್ವಜನಿಕ ಆಸ್ತಿ ಹಾನಿ, ಅಕ್ರಮ ಪ್ರವೇಶ, ದಾರಿ ತಡೆ, ಜೀವ ಬೆದರಿಕೆ ಹಾಗೂ ಕೊಲೆ ಯತ್ನದಂತಹ ಗಂಭೀರ ಆರೋಪಗಳು ಈತನ ಮೇಲಿವೆ. ಹಲವು ಬಾರಿ ಬಂಧನಕ್ಕೊಳಗಾಗಿ ನ್ಯಾಯಾಂಗ ಬಂಧನ ಅನುಭವಿಸಿದ್ದರೂ, ಸಮಾಜವಿರೋಧಿ ಚಟುವಟಿಕೆಗಳಲ್ಲಿ ಮುಂದುವರಿದಿದ್ದಾನೆ.
ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಪೊಲೀಸ್ ಠಾಣೆಯಿಂದ ಸಲ್ಲಿಸಲಾದ ಪ್ರಸ್ತಾವನೆಯನ್ನು ಪರಿಶೀಲಿಸಿದ ಎಸ್ಪಿ ರೋಹನ್ ಜಗದೀಶ್, ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಆರೋಪಿಯನ್ನು ಗದಗ ಜಿಲ್ಲೆಯಿಂದ ಗಡಿಪಾರು ಮಾಡುವ ಆದೇಶ ಹೊರಡಿಸಿದ್ದಾರೆ.
ಆರೋಪಿಯ ವಿರುದ್ಧ ದಾಖಲಾಗಿರುವ ಪ್ರಮುಖ ಪ್ರಕರಣಗಳು:
2016 (ಗುನ್ನೆ ಸಂಖ್ಯೆ 123/2016): ಅಕ್ರಮ ಗುಂಪು ರಚನೆ, ಗಲಭೆ, ಮಾರಕಾಸ್ತ್ರಗಳೊಂದಿಗೆ ಹಲ್ಲೆ, ದಾರಿ ತಡೆ, ಸಾರ್ವಜನಿಕ ಆಸ್ತಿ ಹಾನಿ
2016 (ಗುನ್ನೆ ಸಂಖ್ಯೆ 131/2016): ಅಕ್ರಮ ಪ್ರವೇಶ, ಗಲಭೆ ಹಾಗೂ ಸಾರ್ವಜನಿಕ ಆಸ್ತಿ ಹಾನಿ
2016 (ಗುನ್ನೆ ಸಂಖ್ಯೆ 132/2016): ಕೊಲೆ ಯತ್ನ, ಹಲ್ಲೆ, ದಾರಿ ತಡೆ, ಗಲಭೆ, ಜೀವ ಬೆದರಿಕೆ
2017 (ಗುನ್ನೆ ಸಂಖ್ಯೆ 15/2017): ಅಪಾಯಕಾರಿ ಆಯುಧದಿಂದ ಗಂಭೀರ ಹಲ್ಲೆ ಹಾಗೂ ಜೀವ ಬೆದರಿಕೆ
2025 (ಗುನ್ನೆ ಸಂಖ್ಯೆ 128/2025): ಭಾರತೀಯ ನ್ಯಾಯ ಸಂಹಿತೆ (BNS-2023) ಅಡಿ ಸಾರ್ವಜನಿಕ ಶಾಂತಿಗೆ ಧಕ್ಕೆ ಉಂಟುಮಾಡಿದ ಪ್ರಕರಣ.
ಪೊಲೀಸರ ಪ್ರಕಾರ, ಆರೋಪಿಯ ಚಟುವಟಿಕೆಗಳಿಂದ ಸಾರ್ವಜನಿಕರಲ್ಲಿ ಭಯದ ವಾತಾವರಣ ನಿರ್ಮಾಣವಾಗುತ್ತಿತ್ತು. ಇದೇ ಕಾರಣಕ್ಕೆ ಗಡಿಪಾರು ಕ್ರಮ ಜರುಗಿಸಲಾಗಿದೆ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ಅಷ್ಟೇ ಅಲ್ಲ “ಜಿಲ್ಲೆಯಲ್ಲಿ ಸಮಾಜವಿರೋಧಿ ಹಾಗೂ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಮುಂದುವರಿಯಲಿದೆ. ಸಾರ್ವಜನಿಕ ಶಾಂತಿ ಕದಡುವವರನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಎಚ್ಚರಿಕೆ ನೀಡಿದ್ದಾರೆ.

