ಶಿವಮೊಗ್ಗ: ರಾಜ್ಯದಲ್ಲಿ ಸುರಿಯುತ್ತಿರುವ ಭಾರೀ ಮಳೆ ಮಲೆನಾಡಿನಲ್ಲಿ ಭೀಕರ ಅವಾಂತರ ಸೃಷ್ಟಿಸಿದೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ಇಂದಿರಾ ನಗರದಲ್ಲಿ ಗುಡ್ಡ ಕುಸಿದು ಒಂದೇ ಕುಟುಂಬದ ಮೂವರು ಮಣ್ಣಿನಡಿ ಸಿಲುಕಿ ಮೃತಪಟ್ಟಿರುವ ದುರ್ಘಟನೆ ನಡೆದಿದೆ.
ತಡರಾತ್ರಿ ಸುಮಾರು 2.30ರ ವೇಳೆಗೆ ನಿರಂತರ ಮಳೆಯಿಂದ ಗುಡ್ಡ ಕುಸಿದಿದ್ದು, ಗುಡ್ಡದ ಕೆಳಭಾಗದಲ್ಲಿದ್ದ ಶೆಡ್ ಮೇಲೆ ಮಣ್ಣು ಬಿದ್ದಿದೆ. ಶೆಡ್ನಲ್ಲಿ ವಾಸಿಸುತ್ತಿದ್ದ ಕುಟುಂಬದ ಸದಸ್ಯರಾದ ಮಲ್ಲಿಕಾರ್ಜುನ (35), ನಾಗವೇಣಿ (28) ಮತ್ತು ಮೂರು ವರ್ಷದ ಸಂತೋಷ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರು ಮೂಲತಃ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕೊಕ್ಕರೆಗಾರು ಗ್ರಾಮದ ನಿವಾಸಿಗಳಾಗಿದ್ದು, ಕೆಲಸದ ನಿಮಿತ್ತ ತೀರ್ಥಹಳ್ಳಿಯಲ್ಲಿ ನೆಲೆಸಿದ್ದರು ಎನ್ನಲಾಗಿದೆ. ಘಟನೆಯಲ್ಲಿ ಪಕ್ಕದ ಶೆಡ್ನಲ್ಲಿದ್ದ ಕೆಲವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಮಣ್ಣಿನಡಿ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆದಿದ್ದಾರೆ. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದೇ ವೇಳೆ, ಕೊಡಗು ಜಿಲ್ಲೆಯಲ್ಲೂ ಮಳೆಯ ಆರ್ಭಟ ಮುಂದುವರಿದಿದೆ. ಭಾಗಮಂಡಲ ಸ್ನಾನಘಟ್ಟ, ತ್ರಿವೇಣಿ ಸಂಗಮ ಹಾಗೂ ಉದ್ಯಾನವನ ಸಂಪೂರ್ಣ ಜಲಾವೃತಗೊಂಡಿವೆ. ಭಾಗಮಂಡಲ–ತಲಕಾವೇರಿ ರಸ್ತೆ ನೀರಿನಲ್ಲಿ ಮುಳುಗಿರುವ ಕಾರಣ ಸಾರ್ವಜನಿಕರು ಫ್ಲೈಓವರ್ ಮೂಲಕ ಸಂಚಾರ ನಡೆಸುವಂತಾಗಿದೆ.



