ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಸುಮಾರು 36 ವರ್ಷಗಳ ಕಾಲ ಶಿಕ್ಷಣ ಕ್ಷೇತ್ರದಲ್ಲಿ ಆದರ್ಶ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಶ್ರೀ ಅನ್ನದಾನ ವಿಜಯ ವಿದ್ಯಾ ಪ್ರಸಾರಕ ಸಮಿತಿಯ ಶ್ರೀ ಬಸವೇಶ್ವರ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಬಿ.ಜಿ. ಶಿರಸಿ ಅವರಿಗೆ 1989–90ರಿಂದ 1995–96ನೇ ಸಾಲಿನ ಹಳೆಯ ವಿದ್ಯಾರ್ಥಿಗಳ ಬಳಗದಿಂದ ಶಾಲೆಯ ಆವರಣದಲ್ಲಿ ಆತ್ಮೀಯ ಅಭಿನಂದನೆ ಹಾಗೂ ಸನ್ಮಾನ ಸಮಾರಂಭ ನಡೆಯಿತು.
ಸಮಾರಂಭದಲ್ಲಿ ಹಲವು ವರ್ಷಗಳ ಬಳಿಕ ಒಂದೆಡೆ ಸೇರಿದ ಹಳೆಯ ವಿದ್ಯಾರ್ಥಿಗಳು ತಮ್ಮ ಗುರುಮಾತೆಯೊಂದಿಗೆ ಶಾಲಾ ದಿನಗಳ ನೆನಪುಗಳನ್ನು ಮೆಲುಕು ಹಾಕಿ ಭಾವುಕರಾದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಮಿತಿಯ ಆಡಳಿತಾಧಿಕಾರಿ ಡಾ. ಜಿ.ಕೆ. ಕಾಳೆ ಮಾತನಾಡಿ, ಶಿಕ್ಷಕರಿಗೆ ನಿವೃತ್ತಿ ಇರಬಹುದು; ಆದರೆ ಅವರು ರೂಪಿಸಿದ ವಿದ್ಯಾರ್ಥಿಗಳ ಸಾಧನೆಗಳಲ್ಲಿ ಅವರ ಸೇವೆ ಸದಾ ಜೀವಂತವಾಗಿರುತ್ತದೆ. ಬಿ.ಜಿ. ಶಿರಸಿ ಅವರು ಶಿಕ್ಷಣದ ಜೊತೆಗೆ ಶಿಸ್ತು, ಸಮಯಪಾಲನೆ, ಮಾನವೀಯ ಮೌಲ್ಯಗಳು ಹಾಗೂ ಸಾಮಾಜಿಕ ಹೊಣೆಗಾರಿಕೆಯನ್ನು ವಿದ್ಯಾರ್ಥಿಗಳಲ್ಲಿ ಬೆಳೆಸಿದ ಆದರ್ಶ ಶಿಕ್ಷಕಿಯಾಗಿದ್ದಾರೆ ಎಂದು ಹೇಳಿದರು.
ಮುಖ್ಯ ಅತಿಥಿ ರವೀಂದ್ರನಾಥ ದೊಡ್ಡಮೇಟಿ ಮಾತನಾಡಿ, ವಿದ್ಯಾರ್ಥಿಗಳ ಪ್ರೀತಿ ಮತ್ತು ಗೌರವವೇ ಶಿಕ್ಷಕರ ಜೀವನದ ನಿಜವಾದ ಸಂಪತ್ತು. ಬಿ.ಜಿ. ಶಿರಸಿ ಅವರ ಮಾರ್ಗದರ್ಶನದಿಂದ ಶಿಕ್ಷಣ ಪಡೆದ ಅನೇಕ ವಿದ್ಯಾರ್ಥಿಗಳು ಇಂದು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವುದು ಅವರ ಸೇವೆಯ ದೊಡ್ಡ ಗೌರವವಾಗಿದೆ ಎಂದರು.
ಈ ವೇಳೆ ಹಳೆಯ ವಿದ್ಯಾರ್ಥಿಗಳ ಪರವಾಗಿ ಗುರುಮಾತೆಗೆ ಶಾಲು ಹೊದಿಸಿ, ಪುಷ್ಪಗುಚ್ಛ, ಸ್ಮರಣಿಕೆ, ಮೌಲ್ಯಯುತ ಪುಸ್ತಕ ಹಾಗೂ ಅಭಿನಂದನಾ ಪತ್ರ ನೀಡಿ ಗೌರವಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಬಿ.ಜಿ. ಶಿರಸಿ, “ಶಿಕ್ಷಕರಿಗೆ ಸಿಗುವ ಅತಿ ದೊಡ್ಡ ಪ್ರಶಸ್ತಿ ವಿದ್ಯಾರ್ಥಿಗಳ ಪ್ರೀತಿ ಮತ್ತು ಗೌರವ. ಹಲವು ವರ್ಷಗಳ ನಂತರವೂ ನನ್ನನ್ನು ನೆನಪಿಸಿಕೊಂಡು ನೀಡಿದ ಈ ಸನ್ಮಾನ ನನ್ನ ಜೀವನದ ಅಮೂಲ್ಯ ಕ್ಷಣ” ಎಂದು ಭಾವುಕರಾದರು.
ಶಿವಕುಮಾರ ಹಿರೇಮಠ ಸ್ವಾಗತಿಸಿದರು. ಸವಿತಾ ಪಾಟೀಲ ನಿರೂಪಿಸಿದರು. ಶ್ಯಾಮಸುಂದರ ಪ್ರಭಾಕರ ಅನಿಸಿಕೆ ಹಂಚಿಕೊಂಡರು. ವೀರಭದ್ರಪ್ಪ ಮೆಣಸಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ನಂದೀಶ ಎಸ್. ಅಚ್ಚಿ ಅಭಿನಂದನಾ ಪತ್ರ ವಾಚಿಸಿದರು. ಪ್ರಶಾಂತ ಹಲಕುರ್ಕಿ ವಂದಿಸಿದರು.
ಶಾಲೆಯ ಶಿಕ್ಷಕರು, ಸಿಬ್ಬಂದಿ, ಹಳೆಯ ವಿದ್ಯಾರ್ಥಿಗಳು, ಪಾಲಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಗುರುಮಾತೆಯ ಶಿಕ್ಷಣ ಸೇವೆಯನ್ನು ಕೊಂಡಾಡಿದರು.
“ಶಿಕ್ಷಕರಿಗೆ ದೊರೆಯುವ ಅತಿ ದೊಡ್ಡ ಪ್ರಶಸ್ತಿ ಎಂದರೆ ವಿದ್ಯಾರ್ಥಿಗಳ ಪ್ರೀತಿ ಮತ್ತು ಗೌರವ.”
– ಬಿ.ಜಿ. ಶಿರಸಿ, ನಿವೃತ್ತ ಮುಖ್ಯ ಶಿಕ್ಷಕಿ



