ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ಸಮುದಾಯದ ಅಭಿವೃದ್ಧಿಗೆ ಶಿಕ್ಷಣವೇ ಮೂಲಮಂತ್ರವಾಗಿದ್ದು, ಹಡಪದ ಸಮಾಜದ ಪೋಷಕರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡಿ ಅವರನ್ನು ಉನ್ನತ ಶಿಕ್ಷಣದೊಂದಿಗೆ ಉತ್ತಮ ಉದ್ಯೋಗಸ್ಥರನ್ನಾಗಿ ರೂಪಿಸಬೇಕು ಎಂದು ಶಾಸಕ ಕೆ. ನೇಮಿರಾಜ ನಾಯ್ಕ್ ಕರೆ ನೀಡಿದರು.
ಪಟ್ಟಣದ ಹರ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಶ್ರೀ ಹಡಪದ ಅಪ್ಪಣ್ಣ ಅವರ 892ನೇ ಜಯಂತ್ಯುತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಹಡಪದ ಅಪ್ಪಣ್ಣ ಅವರು 12ನೇ ಶತಮಾನದ ವಚನ ಚಳುವಳಿ ಹಾಗೂ ಸಾಮಾಜಿಕ ಕ್ರಾಂತಿಯ ಪ್ರಮುಖ ಹರಿಕಾರರಲ್ಲಿ ಒಬ್ಬರಾಗಿದ್ದು, ಬಸವಣ್ಣನವರ ಆಪ್ತ ಸಹಚರ ಹಾಗೂ ಅನುಭವ ಮಂಟಪದ ಪ್ರಮುಖ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಅವರ ಜೀವನ ಮತ್ತು ಆದರ್ಶಗಳು ಇಂದಿನ ಸಮಾಜಕ್ಕೂ ಮಾರ್ಗದರ್ಶಿಯಾಗಿವೆ ಎಂದು ಹೇಳಿದರು.
ಹಡಪದ ಸಮಾಜವು ಇನ್ನೂ ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದಿದ್ದು, ಸರ್ಕಾರ ಇಂತಹ ಸಮುದಾಯಗಳಿಗೆ ಹೆಚ್ಚಿನ ಅನುದಾನ ಹಾಗೂ ಸೌಲಭ್ಯ ಕಲ್ಪಿಸಬೇಕಿದೆ. ಸಮಾಜದ ಮನವಿಗೆ ಸ್ಪಂದಿಸಿ ಸಮುದಾಯ ಭವನ ನಿರ್ಮಾಣಕ್ಕೆ ಈ ವರ್ಷ ₹25 ಲಕ್ಷ ಹಾಗೂ ಮುಂದಿನ ವರ್ಷ ಮತ್ತೊಂದು ₹25 ಲಕ್ಷ ಅನುದಾನ ನೀಡುವುದಾಗಿ ಘೋಷಿಸಿದ ಅವರು, ಸರ್ಕಾರದಿಂದ ಇನ್ನಷ್ಟು ನೆರವು ದೊರಕಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.
ಆಶೀರ್ವಚನ ನೀಡಿದ ಅನ್ನದಾನಿ ಭಾರತಿ ಹಡಪದ ಅಪ್ಪಣ್ಣ ಮಹಾಸ್ವಾಮಿಗಳು, ಮುಂಡ್ರಿಗಿ, ಹಡಪದ ಅಪ್ಪಣ್ಣ ಅವರು ಬಸವಣ್ಣನವರ ಆಪ್ತ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿ ಸುಮಾರು 240ಕ್ಕೂ ಹೆಚ್ಚು ವಚನಗಳನ್ನು ರಚಿಸಿರುವ ಮಹಾನ್ ಶಿವಶರಣರು ಎಂದು ಸ್ಮರಿಸಿದರು. ಸಮಾಜದ ಮಕ್ಕಳು ಯಾವುದೇ ಕಾರಣಕ್ಕೂ ವಿದ್ಯಾಭ್ಯಾಸವನ್ನು ಅರ್ಧಕ್ಕೆ ನಿಲ್ಲಿಸಬಾರದು. ಪೋಷಕರು ಎಷ್ಟೇ ಕಷ್ಟ ಬಂದರೂ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಬೇಕು. ಸರ್ಕಾರವೂ ಹಡಪದ ಸಮಾಜವನ್ನು ಗುರುತಿಸಿ ಮೀಸಲಾತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಬಳಿಕ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಮಾಜದ ಗಣ್ಯರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಸಮಾಜದ ಅಧ್ಯಕ್ಷ ಹೆಚ್. ಮಂಜುನಾಥ, ಜಿಲ್ಲಾಧ್ಯಕ್ಷ ಡಾ. ಮಲ್ಲಪ್ಪ ಬ್ಯಾಲಾಳು, ಪಂಚಮಸಾಲಿ ಸಮಾಜದ ಅಧ್ಯಕ್ಷ ಮಂಜುನಾಥ ಗೌಡ್ರು, ರೆಡ್ಡಿ ಸಮಾಜದ ಅಧ್ಯಕ್ಷ ಬಸವರಾಜ ರೆಡ್ಡಿ, ಕುಮಾರಿ ಕಾವೇರಿ, ಶಿವ ಸಿಂಪಿಗರ ಸಮಾಜದ ಅಧ್ಯಕ್ಷ ಉಮಾಪತಿ ಹನಸಿ, ನರೇಗಲ್ಲು ಬಸವರಾಜ ಸೇರಿದಂತೆ ಸಮಾಜದ ಮುಖಂಡರು, ಯುವಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಬಸವಲೋಕ ತಂಡ ಪ್ರಾರ್ಥನೆ ಸಲ್ಲಿಸಿತು. ಹಾಲೇಶ್ ಹುಚ್ಚನಗೌಡ ಸ್ವಾಗತಿಸಿ ನಿರೂಪಿಸಿದರು.
“ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿದಾಗ ಮಾತ್ರ ಸಮುದಾಯದ ಭವಿಷ್ಯ ಉಜ್ವಲವಾಗುತ್ತದೆ, ಪ್ರತಿಯೊಬ್ಬ ಪೋಷಕರು ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಬೇಕು.”
– ಕೆ. ನೇಮಿರಾಜ ನಾಯ್ಕ್, ಶಾಸಕ



