ವಿಜಯಸಾಕ್ಷಿ ಸುದ್ದಿ, ಗದಗ: ಜಾನುವಾರುಗಳ ಆರೋಗ್ಯ ಕಾಪಾಡಿದರೆ ಮಾತ್ರ ಹಾಲು ಉತ್ಪಾದನೆ ಹೆಚ್ಚಾಗಿ ರೈತರ ಆದಾಯವೂ ವೃದ್ಧಿಯಾಗುತ್ತದೆ ಎಂದು ಕರ್ನಾಟಕ ರಾಜ್ಯ ಸಹಕಾರ ಹಾಲು ಉತ್ಪಾದಕರ ಮಹಾಮಂಡಳದ ನಿರ್ದೇಶಕ ಎಚ್.ಜಿ. ಹಿರೇಗೌಡ್ರ ಹೇಳಿದರು.
ನರಗುಂದ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ಸಹಕಾರ ಇಲಾಖೆ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಗದಗ ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಧಾರವಾಡ ಹಾಲು ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ವಿಶೇಷ ತರಬೇತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಕಾಲು-ಬಾಯಿ ರೋಗ, ಕಪ್ಪು ಕಾಲು, ಗಂಟಲುಬಾಚೆ, ಬ್ರೂಸೆಲ್ಲೋಸಿಸ್ ಸೇರಿದಂತೆ ವಿವಿಧ ರೋಗಗಳಿಂದ ಜಾನುವಾರುಗಳನ್ನು ರಕ್ಷಿಸಲು ನಿಯಮಿತ ಲಸಿಕೆ, ಪಶುವೈದ್ಯರ ಸಲಹೆ, ಸ್ವಚ್ಛ ಗೋಶಾಲೆ ಹಾಗೂ ಸಮತೋಲನ ಆಹಾರ ಅತ್ಯಗತ್ಯ ಎಂದು ತಿಳಿಸಿದರು.
ಧಾರವಾಡ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಡಿ.ಟಿ. ಕಳಸದ ಮಾತನಾಡಿ, ಹಾಲು ಉತ್ಪಾದಕರ ಸಹಕಾರ ಸಂಘಗಳು ರೈತರಿಗೆ ನ್ಯಾಯಯುತ ಬೆಲೆ, ಪಶುವೈದ್ಯಕೀಯ ಸೇವೆ, ಕೃತಕ ಗರ್ಭಧಾರಣೆ, ಮೇವು ಅಭಿವೃದ್ಧಿ, ಪಶು ಆಹಾರ ಹಾಗೂ ತರಬೇತಿ ಸೇರಿದಂತೆ ಹಲವು ಸೌಲಭ್ಯಗಳನ್ನು ಒದಗಿಸುತ್ತಿವೆ ಎಂದರು.
ಕಾರ್ಯಕ್ರಮದಲ್ಲಿ ನರಗುಂದ ತಾಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು, ಉಪಾಧ್ಯಕ್ಷರು, ಮುಖ್ಯ ಕಾರ್ಯನಿರ್ವಾಹಕರು ಹಾಗೂ ಹಾಲು ಪರೀಕ್ಷಕರಿಗೆ ಜಾನುವಾರುಗಳ ಆರೋಗ್ಯ, ಹಸಿರು ಮೇವು, ಶುದ್ಧ ಹಾಲು ಉತ್ಪಾದನೆ ಹಾಗೂ ಹೈನುಗಾರಿಕೆ ಕುರಿತು ತಜ್ಞರಿಂದ ತರಬೇತಿ ನೀಡಲಾಯಿತು.
ಕಾರ್ಯಕ್ರಮದಲ್ಲಿ ಗದಗ ಜಿಲ್ಲಾ ಸಹಕಾರ ಯೂನಿಯನ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಚಂದ್ರಶೇಖರ ಎಸ್. ಕರಿಯಪ್ಪನವರ, ಧಾರವಾಡ ಹಾಲು ಒಕ್ಕೂಟದ ಅಧಿಕಾರಿಗಳು, ಸಹಕಾರ ಇಲಾಖೆ ಅಧಿಕಾರಿಗಳು ಹಾಗೂ ವಿವಿಧ ಹಾಲು ಉತ್ಪಾದಕರ ಸಹಕಾರ ಸಂಘಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.



