ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಸಮೀಪದ ಜಕ್ಕಲಿ ಗ್ರಾಮ ಮಾರ್ಗವಾಗಿ ರೋಣ–ಬೆಂಗಳೂರು ಬಸ್ ಸೇವೆ ಸೋಮವಾರದಿಂದ ಪುನರಾರಂಭಗೊಂಡಿದ್ದು, ಹಲವು ವರ್ಷಗಳ ಸಾರ್ವಜನಿಕರ ಹೋರಾಟಕ್ಕೆ ಕೊನೆಗೂ ಯಶಸ್ಸು ದೊರೆತಿದೆ. ಬಸ್ ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಗ್ರಾಮಸ್ಥರು ವಿಶೇಷ ಪೂಜೆ ಸಲ್ಲಿಸಿ, ಚಾಲಕ ಹಾಗೂ ನಿರ್ವಾಹಕರಿಗೆ ಮಾಲಾರ್ಪಣೆ ಮಾಡಿ ಆತ್ಮೀಯವಾಗಿ ಸ್ವಾಗತಿಸಿದರು.
ಕೋವಿಡ್-19 ಅವಧಿಯಲ್ಲಿ ಸ್ಥಗಿತಗೊಂಡಿದ್ದ ಈ ಬಸ್ ಸೇವೆಯಿಂದ ಜಕ್ಕಲಿ, ನರೇಗಲ್ಲ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರು ಬೆಂಗಳೂರಿಗೆ ತೆರಳಲು ಗದಗ, ಹಾವೇರಿ ಅಥವಾ ಹುಬ್ಬಳ್ಳಿಗೆ ತೆರಳಿ ಬಸ್ ಹತ್ತಬೇಕಾದ ಅನಿವಾರ್ಯತೆ ಎದುರಾಗಿತ್ತು.
ಬಸ್ ಸೇವೆ ಪುನರಾರಂಭಕ್ಕೆ ಆಗ್ರಹಿಸಿ ಜಕ್ಕಲಿ ಬಸ್ ಹೋರಾಟಗಾರರ ಸಮಿತಿ ಹಲವು ಬಾರಿ ರೋಣ ಸಾರಿಗೆ ಘಟಕದ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿತ್ತು. ಇತ್ತೀಚೆಗೆ ಜಿಲ್ಲೆಯ ಜನಪ್ರತಿನಿಧಿಗಳ ಮಧ್ಯಪ್ರವೇಶದ ಬಳಿಕ ಕೆಎಸ್ಆರ್ಟಿಸಿ ಅಧಿಕಾರಿಗಳು ಬಸ್ ಸೇವೆ ಪುನರಾರಂಭಿಸಲು ಒಪ್ಪಿಗೆ ನೀಡಿದರು.
ಬಸ್ ಆಗಮಿಸಿದ ವೇಳೆ ಗ್ರಾಮಸ್ಥರು ತೆಂಗಿನಕಾಯಿ ಒಡೆದು, ಆರತಿ ಬೆಳಗಿ ಪೂಜೆ ಸಲ್ಲಿಸಿದರು. ಬಳಿಕ ಚಾಲಕ ಮತ್ತು ನಿರ್ವಾಹಕರಿಗೆ ಮಾಲಾರ್ಪಣೆ ಮಾಡಿ ಸಿಹಿ ಹಂಚಿ ಸಂಭ್ರಮಿಸಿದರು. ಬಸ್ ಸೇವೆ ಪುನರಾರಂಭಗೊಂಡಿರುವುದರಿಂದ ವಿದ್ಯಾರ್ಥಿಗಳು, ಉದ್ಯೋಗಿಗಳು, ವ್ಯಾಪಾರಸ್ಥರು ಹಾಗೂ ಬೆಂಗಳೂರಿಗೆ ತೆರಳುವ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ವೀರಭದ್ರಪ್ಪ ಗಾಣಿಗೇರ, ಅನಿಲಕುಮಾರ ಹೊಸಮನಿ, ವಿನಾಯಕ ಉಮತಾರ, ಅನಿಲಕುಮಾರ ತಳವಾರ, ಮಂಜುನಾಥ ವಾಲಿ, ಜಗದೀಶ ಪಲ್ಲೇದ, ಸಂತೋಷ ಕೋರಿ, ಮಲ್ಲಪ್ಪ ಪಲ್ಲೇದ, ಪ್ರಕಾಶ ವಾಲಿ, ಎಸ್.ಕೆ. ತಮ್ಮಿನಾಳ, ರಮೇಶ ತಳವಾರ, ವೀರೇಶ ಪಟ್ಟಣಶೆಟ್ಟಿ, ಮಂಜುನಾಥ ಪಲ್ಲೇದ, ಗೌಸುಸಾಬ ನಮಾಜಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

