ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಶಿರಹಟ್ಟಿ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಗಳ ಸಮಗ್ರ ವಿಶೇಷ ಪರಿಷ್ಕರಣೆ–2026ರ ಅಂಗವಾಗಿ 1200ಕ್ಕೂ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪುನರಸಂಘಟನೆ ಕಾರ್ಯವನ್ನು ಆಗಸ್ಟ್ 8ರೊಳಗೆ ಪೂರ್ಣಗೊಳಿಸಬೇಕು ಎಂದು ಮತದಾರರ ನೋಂದಣಾಧಿಕಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ನಂದಾ ಹಣಬರಟ್ಟಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸೋಮವಾರ ಶಿರಹಟ್ಟಿ ತಹಸೀಲ್ದಾರ್ ಕಚೇರಿಯಲ್ಲಿ ರಾಷ್ಟ್ರೀಯ ಹಾಗೂ ರಾಜ್ಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮನೆ-ಮನೆಗೆ ಭೇಟಿ ನೀಡಿ ಮತದಾರರಿಗೆ ಗಣತಿ ನಮೂನೆ ವಿತರಿಸಿ, ಸ್ವೀಕರಿಸಿದ ನಮೂನೆಗಳನ್ನು ಡಿಜಿಟಲೀಕರಣಗೊಳಿಸುವ ಕಾರ್ಯ ಬಹುತೇಕ ಪೂರ್ಣಗೊಂಡಿದೆ. ಈಗ ಮತದಾರರ ಸಂಖ್ಯೆಯನ್ನು ಆಧರಿಸಿ 1200ಕ್ಕೂ ಹೆಚ್ಚು ಮತದಾರರಿರುವ ಮತಗಟ್ಟೆಗಳನ್ನು ವಿಭಜಿಸಿ ಪುನರಸಂಘಟನೆ ಮಾಡುವ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದರು.
ಶಿವಾಜಿನಗರ, ಕೋಗನೂರ, ಕುಂದ್ರಳ್ಳಿ, ರಾಮಗೇರಿ, ಆದರಹಳ್ಳಿ, ಹರದಗಟ್ಟಿ, ಹುಲ್ಲೂರು ಸೇರಿದಂತೆ ಹಲವು ಮತಗಟ್ಟೆಗಳನ್ನು ಪುನರಸಂಘಟನೆ ಮಾಡಲಾಗುತ್ತಿದ್ದು, ಲಕ್ಷ್ಮೇಶ್ವರ, ಸೂರಣಗಿ ಹಾಗೂ ಬಾಲೇಹೊಸೂರ ಭಾಗಗಳ ಕೆಲ ಮತಗಟ್ಟೆಗಳನ್ನು ವಿಲೀನಗೊಳಿಸಲಾಗಿದೆ ಎಂದು ವಿವರಿಸಿದರು.
ಸಭೆಯಲ್ಲಿ ಶಿರಹಟ್ಟಿ ತಹಸೀಲ್ದಾರ್ ಎ.ಎ. ಮುಳಗುಂದಮಠ, ಲಕ್ಷ್ಮೇಶ್ವರ ತಹಸೀಲ್ದಾರ್ ಧನಂಜಯ, ಬಿಜೆಪಿ ಮುಖಂಡ ಶಂಕರ ಮರಾಠೆ, ಜೆಡಿಎಸ್ ಮುಖಂಡ ಶರಣಪ್ಪ ಹೂಗಾರ, ಕಾಂಗ್ರೆಸ್ ಮುಖಂಡ ಬುಡನಶ್ಯಾ ಮಕಾನದಾರ, ಶಿರಸ್ತೇದಾರ ಜಮೀರ್ ಮನಿಯಾರ, ಎಸ್.ಎಸ್. ಅಸ್ಕಿ, ವಿನೋದಕುಮಾರ ಪಾಟೀಲ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

