ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ದೇವಪ್ರಯಾಗದಲ್ಲಿ ಮೌನಾನುಷ್ಠಾನ ಪೂರ್ಣಗೊಳಿಸಿ ಹಾಲಕೆರೆ ಗ್ರಾಮಕ್ಕೆ ಆಗಮಿಸಿದ ಶ್ರೀ ಅನ್ನದಾನೇಶ್ವರ ಮಠದ ಪೀಠಾಧಿಪತಿ ಮುಪ್ಪಿನ ಬಸವಲಿಂಗ ಮಹಾಸ್ವಾಮಿಗಳವರಿಗೆ ಭಕ್ತರು ಅದ್ಧೂರಿ ಪುರ ಪ್ರವೇಶದ ಮೂಲಕ ಆತ್ಮೀಯ ಸ್ವಾಗತ ಕೋರಿದರು.
ಅಲಂಕೃತ ಸಾರೋಟಿನಲ್ಲಿ ಶ್ರೀಗಳನ್ನು ಕೂರಿಸಿ, ವಾದ್ಯಮೇಳ ಹಾಗೂ ಜಯಘೋಷಗಳ ನಡುವೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಭವ್ಯ ಮೆರವಣಿಗೆ ನಡೆಸಲಾಯಿತು. ಮೆರವಣಿಗೆ ಸಾಗುವ ಮಾರ್ಗದುದ್ದಕ್ಕೂ ಶ್ರೀಗಳು ಭಕ್ತರಿಗೆ ಆಶೀರ್ವಾದ ನೀಡಿದರೆ, ಭಕ್ತರು ಪುಷ್ಪಾರ್ಚನೆ ಮಾಡಿ ಭಕ್ತಿಭಾವದಿಂದ ಸ್ವಾಗತಿಸಿದರು.
ಬಳಿಕ ಶ್ರೀಗಳನ್ನು ಅನ್ನದಾನೇಶ್ವರ ಮಠಕ್ಕೆ ಕರೆದೊಯ್ದು ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ನೆರವೇರಿಸಲಾಯಿತು.
ಮೆರವಣಿಗೆಯಲ್ಲಿ ನಾಡಿನ ವಿವಿಧ ಮಠಾಧೀಶರು, ಗಿರೀಶಗೌಡ ಮುಲ್ಕಿಪಾಟೀಲ, ರಾಜಶೇಖರಗೌಡ ಪಾಟೀಲ, ರವೀಂದ್ರನಾಥ ದೊಡ್ಡಮೇಟಿ, ಡಾ. ಜಿ.ಕೆ. ಕಾಳೆ, ಉಮೇಶ ಪಾಟೀಲ ಸೇರಿದಂತೆ ವಿವಿಧ ಮಠಗಳ ಸ್ವಾಮೀಜಿಗಳು, ಗಣ್ಯರು, ಶ್ರೀಮಠದ ಭಕ್ತರು, ಅನ್ನದಾನೇಶ್ವರ ವಿದ್ಯಾಸಂಸ್ಥೆಗಳ ಸಿಬ್ಬಂದಿ ಹಾಗೂ ಸಾವಿರಾರು ಭಕ್ತರು ಭಾಗವಹಿಸಿದ್ದರು.



