ಹುಬ್ಬಳ್ಳಿ: ದೇಶದ ರಾಜಕೀಯದಲ್ಲಿ ಹೊಸ ಬದಲಾವಣೆಯ ಅಲೆ ಆರಂಭವಾಗಿದ್ದು, ಜೆನ್-ಝೀ ಯುವಕರಿಂದ ರಾಜಕೀಯದ ದಿಕ್ಕು ಬದಲಾಗುತ್ತಿದೆ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಇದೇ ವೇಳೆ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು, “ನ್ಯಾಯಯುತ ಚುನಾವಣೆ ನಡೆದರೆ ಬಿಜೆಪಿ ಗೆಲ್ಲುವುದಿಲ್ಲ. ಅದಕ್ಕಾಗಿಯೇ ಅವರು ಪ್ರಾಮಾಣಿಕ ಚುನಾವಣೆಗೆ ಅವಕಾಶ ನೀಡುವುದಿಲ್ಲ” ಎಂದು ಆರೋಪಿಸಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಜನರ ಸಮಸ್ಯೆಗಳ ಬಗ್ಗೆ ಮಾತನಾಡುವುದಕ್ಕಿಂತ ಧರ್ಮ ಮತ್ತು ದೇವರ ಹೆಸರಿನಲ್ಲಿ ರಾಜಕೀಯ ಮಾಡುವುದೇ ಬಿಜೆಪಿಯ ಅಜೆಂಡಾ” ಎಂದು ಟೀಕಿಸಿದರು.
ಬರ ಅಧ್ಯಯನಕ್ಕಾಗಿ ಬಿಜೆಪಿ ತಂಡ ರಾಜ್ಯ ಪ್ರವಾಸ ಕೈಗೊಂಡಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, “ಅಧ್ಯಯನ ನಡೆಸಿ ಕೇಂದ್ರ ಸರ್ಕಾರಕ್ಕೆ ನೈಜ ವರದಿ ಸಲ್ಲಿಸಲಿ. ಅದರಿಂದಾದರೂ ಕರ್ನಾಟಕಕ್ಕೆ ಬೆಳೆ ಪರಿಹಾರ ಸಿಗಲಿ” ಎಂದು ಹೇಳಿದರು.
ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಸಂತೋಷ್ ಲಾಡ್, “ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಮಲತಾಯಿ ಧೋರಣೆ ಅನುಸರಿಸಲಾಗುತ್ತಿದೆ. ರಾಜ್ಯಕ್ಕೆ ಸಮರ್ಪಕ ಬೆಳೆ ಪರಿಹಾರ ಮತ್ತು ಅನುದಾನ ಸಿಕ್ಕಿಲ್ಲ. ಬೆಳೆ ವಿಮೆ ನಿಯಮಗಳಲ್ಲೂ ಬದಲಾವಣೆ ಅಗತ್ಯ” ಎಂದು ಒತ್ತಾಯಿಸಿದರು.
ರೈತರ ಮಧ್ಯಂತರ ಪರಿಹಾರದ ಬೇಡಿಕೆ ನ್ಯಾಯಸಮ್ಮತವಾಗಿದೆ. ಮುಖ್ಯಮಂತ್ರಿ ಸೂಚನೆಯಂತೆ ರಾಜ್ಯದ ಎಲ್ಲಾ ತಾಲೂಕುಗಳಲ್ಲಿ ಬರ ಪರಿಸ್ಥಿತಿಯ ಅಧ್ಯಯನ ನಡೆಸಿ ವರದಿ ಸಲ್ಲಿಸಲಾಗುವುದು ಎಂದು ಅವರು ಹೇಳಿದರು.



