ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲೆಯ ಲಕ್ಷ್ಮೇಶ್ವರ, ಶಿರಹಟ್ಟಿ ಹಾಗೂ ಮುಂಡರಗಿ ತಾಲೂಕುಗಳಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಣಿಕೆಗೆ ತಕ್ಷಣ ಕಡಿವಾಣ ಹಾಕಬೇಕು. ದಂಧೆಗೆ ಸಹಕಾರ ನೀಡುತ್ತಿರುವ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಭೀಮ್ ಶಕ್ತಿ ಸಂಘಟನೆ ಪದಾಧಿಕಾರಿಗಳು ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಜಿಲ್ಲಾ ಅಧ್ಯಕ್ಷ ಅಣ್ಣಪ್ಪ ಗುತ್ತೆಮ್ಮನವರ, ರಾಜ್ಯಾಧ್ಯಕ್ಷ ಶಂಕರ ಮುಗುಳಿ ಹಾಗೂ ರಾಜ್ಯ ಕಾನೂನು ಸಲಹೆಗಾರ ಮೈಲಾರಪ್ಪ ಡಿ.ಎಚ್. ನೇತೃತ್ವದಲ್ಲಿ ಸಲ್ಲಿಸಿದ ಮನವಿಯಲ್ಲಿ, ಹಲವು ಗ್ರಾಮಗಳ ಹಳ್ಳಗಳಲ್ಲಿ ಕಳೆದ ಕೆಲವು ತಿಂಗಳುಗಳಿಂದ ಅಕ್ರಮವಾಗಿ ಮರಳು ಗಣಿಗಾರಿಕೆ ನಡೆಯುತ್ತಿದ್ದು, ಇದರಿಂದ ಪರಿಸರ ಹಾನಿ, ಅಂತರ್ಜಲ ಮಟ್ಟ ಕುಸಿತ, ರೈತರಿಗೆ ನೀರಾವರಿ ಸಮಸ್ಯೆ ಹಾಗೂ ಗ್ರಾಮೀಣ ರಸ್ತೆಗಳ ಹಾನಿ ಉಂಟಾಗಿದೆ ಎಂದು ಆರೋಪಿಸಲಾಯಿತು.
ಒಂದೇ ಪಾಸ್ ಬಳಸಿ ಹಲವು ಬಾರಿ ಮರಳು ಸಾಗಣೆ ಮಾಡಲಾಗುತ್ತಿದ್ದು, ಜಿಪಿಎಸ್ ವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಂಡು ಅಕ್ರಮ ದಂಧೆ ನಡೆಸಲಾಗುತ್ತಿದೆ. ಸಂಬಂಧಪಟ್ಟ ಕೆಲ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿರುವುದರಿಂದ ಸರ್ಕಾರಕ್ಕೆ ಆದಾಯ ನಷ್ಟವಾಗುತ್ತಿದೆ ಎಂದು ಸಂಘಟನೆ ಆರೋಪಿಸಿತು.
ಕೂಡಲೇ ಜಂಟಿ ದಾಳಿ ನಡೆಸಿ ಅಕ್ರಮ ಮರಳು ದಂಧೆ ತಡೆಗಟ್ಟಬೇಕು. ತಪ್ಪಿತಸ್ಥರು ಹಾಗೂ ಅವರಿಗೆ ಸಹಕಾರ ನೀಡುತ್ತಿರುವ ಕಂದಾಯ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಸಂಬಂಧಿಸಿದ ಇಲಾಖೆಯ ಕಚೇರಿ ಎದುರು ಧರಣಿ ನಡೆಸಲಾಗುವುದು ಎಂದು ರಾಜ್ಯಾಧ್ಯಕ್ಷ ಶಂಕರ ಮುಗುಳಿ ಎಚ್ಚರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುತ್ತಪ್ಪ ಮ್ಯಾಗೇರಿ, ಜಿಲ್ಲಾ ಗೌರವಾಧ್ಯಕ್ಷ ಮರಿಯಪ್ಪ ಪೂಜಾರ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಸಿದ್ದಪ್ಪ ಮಾದರ, ಸಂಘಟನಾ ಕಾರ್ಯದರ್ಶಿ ಮುತ್ತಪ್ಪ ಪೂಜಾರ, ಜಿಲ್ಲಾ ಯುವ ಘಟಕದ ಉಪಾಧ್ಯಕ್ಷ ಕೃಷ್ಣಪ್ಪ ಮರಾಠಿ, ಕಾರ್ಯದರ್ಶಿ ಯಮನಪ್ಪ ಪೂಜಾರ, ಶಿರಹಟ್ಟಿ ತಾಲೂಕು ಅಧ್ಯಕ್ಷ ಕೊಟೆಪ್ಪ ಪೂಜಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.



