ಬಳ್ಳಾರಿ: ವರಿಷ್ಠರು ಮತ್ತೊಮ್ಮೆ ತಮ್ಮ ಮೇಲೆ ವಿಶ್ವಾಸವಿಟ್ಟು ಸಚಿವ ಸ್ಥಾನ ನೀಡಿದ್ದು, ಜಿಲ್ಲೆಯ ಅಭಿವೃದ್ಧಿಯೇ ತಮ್ಮ ಮೊದಲ ಆದ್ಯತೆಯಾಗಲಿದೆ ಎಂದು ಸಚಿವ ಬಿ. ನಾಗೇಂದ್ರ ತಿಳಿಸಿದ್ದಾರೆ. ಜಿಲ್ಲೆಯ ಎಲ್ಲ ಶಾಸಕರನ್ನು ಒಗ್ಗೂಡಿಸಿಕೊಂಡು ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡಲಾಗುವುದು ಎಂದು ಅವರು ಹೇಳಿದರು.
ಬಳ್ಳಾರಿ ಜಿಲ್ಲೆಯ ಚೆಳ್ಳಗುರ್ಕಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಜಿಲ್ಲೆಗೆ ಸಚಿವ ಸ್ಥಾನ ಸಿಗುತ್ತದೆಯೋ ಇಲ್ಲವೋ ಎಂಬ ಅನುಮಾನ ಇತ್ತು. ಆದರೆ ಇದೀಗ ಅವಕಾಶ ದೊರೆತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುತ್ತೇವೆ” ಎಂದು ಹೇಳಿದರು.
ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ತಮ್ಮ ರಾಜೀನಾಮೆಗೆ ಒತ್ತಾಯಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, “ಒಬ್ಬ ದಲಿತ ಹಾಗೂ ಹಿಂದುಳಿದ ನಾಯಕ ಬೆಳೆಯುವುದನ್ನು ಬಿಜೆಪಿ ನಾಯಕರು ಸಹಿಸಿಕೊಳ್ಳುತ್ತಿಲ್ಲ” ಎಂದು ಆರೋಪಿಸಿದರು.
ವಿರೋಧ ಪಕ್ಷದ ನಾಯಕ ಚಲುವಾದಿ ನಾರಾಯಣಸ್ವಾಮಿ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಅವರು ಹಿರಿಯ ನಾಯಕರು. ಅವರ ಹೇಳಿಕೆಗಳಿಗೆ ಹೆಚ್ಚಿನ ಮಹತ್ವ ನೀಡುವುದಿಲ್ಲ. ಬಿಜೆಪಿಯಲ್ಲಿಯೇ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವವರು ಎಷ್ಟು ಜನ ಇದ್ದಾರೆ ಎಂಬುದನ್ನು ಮೊದಲು ನೋಡಬೇಕು” ಎಂದು ತಿರುಗೇಟು ನೀಡಿದರು.
“ನನಗೆ ಎಸ್ಐಟಿ ತನಿಖೆಯಲ್ಲಿ ಕ್ಲೀನ್ ಚಿಟ್ ದೊರೆತಿದೆ. ಕೇಂದ್ರ ಸರ್ಕಾರದ ಕುತಂತ್ರದಿಂದ ನನ್ನನ್ನು ಬಲಿಪಶು ಮಾಡಲು ಪ್ರಯತ್ನಿಸಲಾಗುತ್ತಿದೆ” ಎಂದು ಅವರು ಆರೋಪಿಸಿದರು.
ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರ ಹೇಳಿಕೆಗಳಿಗೂ ಪ್ರತಿಕ್ರಿಯಿಸಿದ ಬಿ. ನಾಗೇಂದ್ರ, “ಅವರು ತಮ್ಮ ಮಾತಿನ ಮೇಲೆ ಹಿಡಿತ ಇಟ್ಟುಕೊಂಡು ಮಾತನಾಡಬೇಕು. ಏಕವಚನದಲ್ಲಿ ಮಾತನಾಡುವುದನ್ನು ಬಿಡಬೇಕು. ನಾನೂ ಅದೇ ರೀತಿ ಮಾತನಾಡಬಹುದು. ಆದರೆ ಅವರ ಮಟ್ಟಕ್ಕೆ ಇಳಿದು ಮಾತನಾಡುವುದಿಲ್ಲ. ಮೊದಲು ಹೇಗೆ ಮಾತನಾಡಬೇಕು ಎಂಬುದನ್ನು ಕಲಿಯಬೇಕು” ಎಂದು ವಾಗ್ದಾಳಿ ನಡೆಸಿದರು.



