ವಿಜಯಸಾಕ್ಷಿ ಸುದ್ದಿ, ಹುಲಕೋಟಿ: ವ್ಯಸನಮುಕ್ತ ಜೀವನವೇ ನಿಜವಾದ ಸಾಧನೆಯಾಗಿದ್ದು, ಇಲಕಲ್ಲದ ಚಿತ್ತರಗಿ ವಿಜಯಮಹಾಂತೇಶ್ವರ ಸಂಸ್ಥಾನ ಮಠದ ಲಿಂಗೈಕ್ಯ ಡಾ. ಮಹಾಂತ ಶಿವಯೋಗಿ ಸ್ವಾಮೀಜಿಯವರು ‘ಮಹಾಂತ ಜೋಳಿಗೆ’ ಆಂದೋಲನದ ಮೂಲಕ ದುಶ್ಚಟಗಳಿಂದ ಹಾಳಾಗುತ್ತಿದ್ದ ಕುಟುಂಬಗಳನ್ನು ರಕ್ಷಿಸಿ ಸಮಾಜದಲ್ಲಿ ಕ್ರಾಂತಿಕಾರಿ ಜಾಗೃತಿ ಮೂಡಿಸಿದ ಮಹಾನ್ ಸಂತರು ಎಂದು ಸಾಂಸ್ಕೃತಿಕ ಘಟಕದ ಸಂಯೋಜಕ ರಮೇಶ ಹುಲಕುಂದ ಹೇಳಿದರು.
ಹುಲಕೋಟಿಯ ಶ್ರೀ ಕೆ.ಎಚ್. ಪಾಟೀಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ ಆಯೋಜಿಸಿದ್ದ ‘ವ್ಯಸನಮುಕ್ತ ದಿನಾಚರಣೆ ಹಾಗೂ ವ್ಯಸನಮುಕ್ತ ಪ್ರತಿಜ್ಞಾವಿಧಿ’ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿ ಅವರು ಮಾತನಾಡಿದರು.
ಸ್ವಾಮೀಜಿಯವರು ಸಾರಿದ ವ್ಯಸನಮುಕ್ತ ಹಾಗೂ ನೈತಿಕ ಸಮಾಜ ನಿರ್ಮಾಣದ ಸಂದೇಶ ಇಂದಿಗೂ ಪ್ರಸ್ತುತವಾಗಿದ್ದು, ಪ್ರತಿಯೊಬ್ಬರೂ ಅವರ ಜೀವನ ಮೌಲ್ಯಗಳನ್ನು ಅಳವಡಿಸಿಕೊಂಡು ನೆಮ್ಮದಿಯ ಬದುಕಿನೊಂದಿಗೆ ಸದೃಢ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಅಪ್ಪಣ್ಣ ಹಂಜೆ ಮಾತನಾಡಿ, ವಿದ್ಯಾರ್ಥಿಗಳು ಮಾದಕ ವಸ್ತುಗಳು, ಧೂಮಪಾನ, ಮದ್ಯಪಾನ ಹಾಗೂ ಮೊಬೈಲ್ ವ್ಯಸನದಿಂದ ದೂರವಿರಬೇಕು. ದುಶ್ಚಟಗಳು ಆರೋಗ್ಯ, ಶಿಕ್ಷಣ ಹಾಗೂ ಭವಿಷ್ಯವನ್ನು ಹಾಳುಮಾಡುತ್ತವೆ.
ಯುವಜನತೆ ವ್ಯಸನಮುಕ್ತ ಸಮಾಜ ನಿರ್ಮಾಣದ ಜವಾಬ್ದಾರಿಯನ್ನು ಹೊತ್ತು ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದರು.
ಎನ್ಎಸ್ಎಸ್ ಘಟಕದ ಸಂಯೋಜಕ ವಿಜಯಕುಮಾರ ಎಸ್. ವಂದಿಸಿದರು.
ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ವ್ಯಸನಮುಕ್ತ ಪ್ರತಿಜ್ಞೆ ಸ್ವೀಕರಿಸಿದರು.



