ಉಡುಪಿ ಜಿಲ್ಲೆಯ ಕಲ್ಮಾಡಿಯಲ್ಲಿ ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ಯುವತಿ ಕೃತಿ ಬಂಗೇರಾ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮನೆಯ ಬೆಡ್ರೂಮ್ನಲ್ಲಿ ಫ್ಯಾನ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದ್ದು, ಪ್ರಕರಣದ ಕುರಿತು ಮಲ್ಪೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
27 ವರ್ಷದ ಕೃತಿ ಬಂಗೇರಾ ಮಾಡೆಲಿಂಗ್ ಜೊತೆಗೆ ಕಡಿಯಾಳಿ ಸಮೀಪದ ಖಾಸಗಿ ಹೋಟೆಲ್ನಲ್ಲಿ ಉದ್ಯೋಗದಲ್ಲಿದ್ದರು. ಆದರೆ ಕಳೆದ ಸುಮಾರು ಐದು ತಿಂಗಳಿಂದ ಅವರು ಕೆಲಸಕ್ಕೆ ಹೋಗದೆ ಮನೆಯಲ್ಲೇ ಇದ್ದರು ಎಂದು ತಿಳಿದುಬಂದಿದೆ.
ಘಟನೆ ನಡೆದ ದಿನ ಕೃತಿ ಅವರ ತಾಯಿ ಕೆಲಸ ಮುಗಿಸಿ ಮನೆಗೆ ಹಿಂದಿರುಗಿದಾಗ, ಕೃತಿ ಅವರನ್ನು ಹೊರಗೆ ಕಳುಹಿಸಿ ಮನೆಯೊಳಗಿನಿಂದ ಬಾಗಿಲು ಹಾಕಿಕೊಂಡಿದ್ದರು. ಬಹಳ ಹೊತ್ತಾದರೂ ಬಾಗಿಲು ತೆರೆಯದ ಹಿನ್ನೆಲೆಯಲ್ಲಿ ಸಂಬಂಧಿಕರನ್ನು ಕರೆಸಿ ಬಾಗಿಲು ಒಡೆದು ಒಳಗೆ ಪ್ರವೇಶಿಸಿದಾಗ, ಕೃತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಪ್ರಾಥಮಿಕ ಮಾಹಿತಿಯಂತೆ, ಕೃತಿ ಕೆಲವು ದಿನಗಳಿಂದ ತೀವ್ರ ಮಾನಸಿಕ ಒತ್ತಡದಲ್ಲಿದ್ದರು ಎಂದು ಹೇಳಲಾಗುತ್ತಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮಲ್ಪೆ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ ದಾಖಲಾಗಿದ್ದು, ಎಲ್ಲಾ ಆಯಾಮಗಳಲ್ಲಿ ತನಿಖೆ ಮುಂದುವರಿದಿದೆ.
ಸೂಚನೆ: ಯಾರಾದರೂ ಮಾನಸಿಕ ಒತ್ತಡ ಅಥವಾ ಆತ್ಮಹತ್ಯೆಯ ಆಲೋಚನೆಗಳನ್ನು ಅನುಭವಿಸುತ್ತಿದ್ದರೆ, ವಿಶ್ವಾಸಾರ್ಹ ಕುಟುಂಬದವರು, ಸ್ನೇಹಿತರು ಅಥವಾ ಮಾನಸಿಕ ಆರೋಗ್ಯ ತಜ್ಞರ ನೆರವು ಪಡೆಯುವುದು ಮುಖ್ಯ.



