ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಸೂರ್ಯನಗರದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಪಣೀಂದ್ರ ಅವರು ಶುಕ್ರವಾರ ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿ, ವಸತಿ ನಿಲಯದ ಅವ್ಯವಸ್ಥೆ ಕಂಡು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಮೊದಲು ಆಹಾರ ದಾಸ್ತಾನು ಕೊಠಡಿ, ಅಡುಗೆ ವ್ಯವಸ್ಥೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆಯನ್ನು ಪರಿಶೀಲಿಸಿದ ಅವರು, ಅಲ್ಲಿನ ಸ್ಥಿತಿಗತಿಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು. ಬಳಿಕ ವಿದ್ಯಾರ್ಥಿಗಳ ಕೊಠಡಿಗಳು, ಶೌಚಾಲಯ, ನೀರಿನ ಟ್ಯಾಂಕ್ ಹಾಗೂ ವಸತಿ ನಿಲಯದ ಆವರಣವನ್ನು ವೀಕ್ಷಿಸಿದ ಅವರು, ನಿರ್ವಹಣೆ ತೀರಾ ಕಳಪೆಯಾಗಿರುವುದನ್ನು ಕಂಡು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಸಂಬಂಧಿಸಿದ ಅಧಿಕಾರಿಗಳು ನಿಯಮಿತವಾಗಿ ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸದಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಕೂಡಲೇ ವಸತಿ ನಿಲಯದ ಸ್ವಚ್ಛತೆ, ಕೊಠಡಿಗಳ ದುರಸ್ತಿ ಹಾಗೂ ಮೂಲಸೌಕರ್ಯ ಸುಧಾರಣೆ ಕೈಗೊಂಡು ವರದಿ ಸಲ್ಲಿಸುವಂತೆ ಖಡಕ್ ಸೂಚನೆ ನೀಡಿದರು.
ವಸತಿ ನಿಲಯದಲ್ಲಿ ಬಳಸುತ್ತಿರುವ ನೀರು ಕುಡಿಯಲು ಮತ್ತು ಬಳಕೆಗೆ ಯೋಗ್ಯವಾಗಿದೆಯೇ ಎಂಬುದನ್ನು ಪರೀಕ್ಷಿಸಿ ತಕ್ಷಣ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಇದೇ ವೇಳೆ ವಸತಿ ನಿಲಯದಲ್ಲಿದ್ದ ಗಣಕ ಯಂತ್ರಗಳು, ಹಾಸಿಗೆಗಳು ಸೇರಿದಂತೆ ಇತರೆ ಸಾಮಗ್ರಿಗಳನ್ನು ಬೇರೆ ವಸತಿ ನಿಲಯಕ್ಕೆ ಸ್ಥಳಾಂತರಿಸಿರುವ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.
ಬಳಿಕ ವಿದ್ಯಾರ್ಥಿಗಳೊಂದಿಗೆ ನೇರವಾಗಿ ಸಂವಾದ ನಡೆಸಿದ ಉಪಲೋಕಾಯುಕ್ತರು, ವಸತಿ ನಿಲಯದ ಸಮಸ್ಯೆಗಳ ಕುರಿತು ಮಾಹಿತಿ ಪಡೆದರು. ಈ ವೇಳೆ ವಿದ್ಯಾರ್ಥಿಗಳು ಮೇಲ್ವಿಚಾರಕರ ನಿರ್ಲಕ್ಷ್ಯ, ಗುಣಮಟ್ಟದ ಆಹಾರದ ಕೊರತೆ, ಶುದ್ಧ ಕುಡಿಯುವ ನೀರಿನ ಸಮಸ್ಯೆ, ಕಂಪ್ಯೂಟರ್ ಸ್ಥಳಾಂತರ, ಗ್ರಂಥಾಲಯದ ಕೊರತೆ, ಶೌಚಾಲಯಗಳ ದುಸ್ಥಿತಿ ಹಾಗೂ ವಸತಿ ನಿಲಯದ ಅಸ್ವಚ್ಛತೆ ಕುರಿತು ದೂರು ಸಲ್ಲಿಸಿದರು.
ಈ ಸಂದರ್ಭದಲ್ಲಿ ಹಿರಿಯ ನ್ಯಾಯಾಧೀಶರು ಹಾಗೂ ಆಪ್ತ ಕಾರ್ಯದರ್ಶಿ ಕಿರಣ್ ಪಿ.ಎಂ. ಪಾಟೀಲ, ಸುನೀಲಕುಮಾರ್ ಆರ್., ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಡಾ. ನಂದಾ ಹಣಬರಟ್ಟಿ ಹಾಗೂ ವಸತಿ ನಿಲಯದ ಮೇಲ್ವಿಚಾರಕರು ಉಪಸ್ಥಿತರಿದ್ದರು.
“ವಿದ್ಯಾರ್ಥಿಗಳ ವಸತಿ ನಿಲಯಗಳನ್ನು ನಿರ್ಲಕ್ಷಿಸುವುದನ್ನು ಸಹಿಸಲಾಗುವುದಿಲ್ಲ. ಸ್ವಚ್ಛತೆ, ಸುರಕ್ಷತೆ ಮತ್ತು ಮೂಲಸೌಕರ್ಯಗಳನ್ನು ಕೂಡಲೇ ಸರಿಪಡಿಸಿ ವರದಿ ಸಲ್ಲಿಸಿ.”
– ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಪಣೀಂದ್ರ



