ವಿಜಯಸಾಕ್ಷಿ ಸುದ್ದಿ, ಗದಗ: ಹರ್ಲಾಪೂರದ ಬಸವಾನಂದ ಶಿವಯೋಗಿಗಳ ಶ್ರೀಮಠದಲ್ಲಿ ಗುರುಪೂರ್ಣಿಮೆ ಅಂಗವಾಗಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು ಶ್ರದ್ಧಾ-ಭಕ್ತಿಯಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮಠದ ಪೂಜ್ಯ ಫಕ್ಕೀರಯ್ಯ ಸ್ವಾಮೀಜಿ ಇಷ್ಟಲಿಂಗ ಪೂಜೆ ಹಾಗೂ ಪಾದಪೂಜೆ ನೆರವೇರಿಸಿ ಭಕ್ತರಿಗೆ ಆಶೀರ್ವಚನ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಗುರುವಿನ ಚರಣದಿಂದಲೇ ಜಗತ್ತು ಜಯಂಕರಿಸಿದೆ. ಅಜ್ಞಾನವನ್ನು ದೂರ ಮಾಡಿ ಜ್ಞಾನದೆಡೆಗೆ ಕರೆದೊಯ್ಯುವವರೇ ಗುರು. ಆದ್ದರಿಂದ ಗುರುವಿನ ಸ್ಥಾನ ಜಗತ್ತಿನಲ್ಲಿ ಶ್ರೇಷ್ಠ” ಎಂದು ಹೇಳಿದರು.
ಹಿಂದೂ ಸಂಪ್ರದಾಯದಲ್ಲಿ ಆಷಾಢ ಹುಣ್ಣಿಮೆಯನ್ನು ಗುರುಪೂರ್ಣಿಮೆಯಾಗಿ ಆಚರಿಸಲಾಗುತ್ತದೆ. ಈ ದಿನ ಗುರುಗಳಿಗೆ ಪೂಜೆ ಸಲ್ಲಿಸುವುದರೊಂದಿಗೆ ಅವರ ಮಾರ್ಗದರ್ಶನವನ್ನು ಸ್ಮರಿಸಲಾಗುತ್ತದೆ. ಗುರು ಎನ್ನುವ ಪದದ ಅರ್ಥವೇ ಅಜ್ಞಾನವೆಂಬ ಅಂಧಕಾರವನ್ನು ದೂರ ಮಾಡಿ ಜ್ಞಾನ ನೀಡುವವನು ಎಂಬುದಾಗಿದೆ ಎಂದು ವಿವರಿಸಿದರು.
ಭಾರತದ ಇತಿಹಾಸದಲ್ಲಿ ಗುರು-ಶಿಷ್ಯ ಪರಂಪರೆ ಅತ್ಯಂತ ಶ್ರೇಷ್ಠವಾದದ್ದು. ಗುರು ಗೋವಿಂದ ಭಟ್ಟರು–ಶರೀಫ ಸಾಹೇಬರು, ಅಡವಿ ಸಿದ್ದೇಶ್ವರರು–ನಾಗಲಿಂಗಪ್ಪ, ಗಜದಂಡ ಶಿವಯೋಗಿಗಳು–ಸಿದ್ಧಾರೂಢರು, ಪಂಚಾಕ್ಷರಿ ಗವಾಯಿಗಳು–ಪುಟ್ಟರಾಜ ಗವಾಯಿಗಳು ಸೇರಿದಂತೆ ಅನೇಕ ಮಹನೀಯರ ಗುರು-ಶಿಷ್ಯ ಸಂಬಂಧ ಸಮಾಜಕ್ಕೆ ಆದರ್ಶವಾಗಿದೆ ಎಂದು ತಿಳಿಸಿದರು.
ವೇದವ್ಯಾಸ ಮಹರ್ಷಿಗಳ ಜನ್ಮದಿನವಾಗಿಯೂ ಗುರುಪೂರ್ಣಿಮೆಯನ್ನು ಆಚರಿಸಲಾಗುತ್ತದೆ. ಯೋಗ ಸಂಪ್ರದಾಯದಲ್ಲಿ ಶಿವನು ಸಪ್ತರ್ಷಿಗಳಿಗೆ ಯೋಗವಿದ್ಯೆ ಬೋಧಿಸಿದ ದಿನವೆಂಬ ನಂಬಿಕೆಯೂ ಇದೆ. ಆದ್ದರಿಂದ ಈ ಹಬ್ಬಕ್ಕೆ ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿಯೂ ವಿಶೇಷ ಮಹತ್ವವಿದೆ ಎಂದು ಹೇಳಿದರು.
ಚಾತುರ್ಮಾಸದ ಅವಧಿಯಲ್ಲಿ ಸನ್ಯಾಸಿಗಳು ಒಂದೇ ಸ್ಥಳದಲ್ಲಿ ತಂಗಿ ಧರ್ಮಪ್ರವಚನಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸುತ್ತಾರೆ. ಗುರು-ಶಿಷ್ಯರ ಸಂಬಂಧವು ಸಮಾಜದ ಸಂಸ್ಕೃತಿ ಮತ್ತು ಮೌಲ್ಯಗಳನ್ನು ಗಟ್ಟಿಗೊಳಿಸುವ ಶಕ್ತಿಯಾಗಿದೆ ಎಂದು ಸ್ವಾಮೀಜಿ ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಶ್ರೀ ಬಸವಾನಂದ ಸಾಂಸ್ಕೃತಿಕ ಸೇವಾ ಸಂಸ್ಥೆಯ ಸಹ ಕಾರ್ಯದರ್ಶಿ ಕಿಡಿಗಣ್ಣಸ್ವಾಮಿ ವಂದಿಸಿದರು. ಸಂಸ್ಥೆಯ ಕಾರ್ಯದರ್ಶಿ ಸದಾನಂದ ಶಾಸ್ತ್ರಿಗಳು ಕಾರ್ಯಕ್ರಮದ ಮಾಹಿತಿ ನೀಡಿದರು.
“ಅಜ್ಞಾನವನ್ನು ದೂರ ಮಾಡಿ ಜ್ಞಾನದ ಬೆಳಕಿನತ್ತ ಕರೆದೊಯ್ಯುವವರೇ ಗುರು; ಗುರುವಿನ ಸ್ಥಾನ ಎಲ್ಲಕ್ಕಿಂತ ಶ್ರೇಷ್ಠ.”
– ಫಕ್ಕೀರಯ್ಯ ಸ್ವಾಮೀಜಿ

